ತಬರನ ಕಥೆಯಾದ ‘ಕೈ’ಶಾಸಕರ ಸ್ಥಿತಿ: ಎಚ್‌ಡಿಕೆ

| N/A | Published : Jun 24 2025, 12:32 AM IST / Updated: Jun 24 2025, 10:25 AM IST

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ನವದೆಹಲಿ :  ರಾಜ್ಯ ಕಾಂಗ್ರೆಸ್‌ ಸರ್ಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕರು ಅನುದಾನಕ್ಕಾಗಿ, ಸರ್ಕಾರದ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ತಬರನಂತೆ ಸುತ್ತುತ್ತಿದ್ದಾರೆ. ಆಡಳಿತ ಪಕ್ಷದ ಸದಸ್ಯರಿಗೇ ಇಂತ ದುರ್ಗತಿ ಬಂದರೆ ಇತರೆ ಪಕ್ಷಗಳ ಶಾಸಕರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು.

ರಾಜ್ಯದ ಪರಿಸ್ಥಿತಿ ಹೇಗಾಗಿದೆ ಎಂದರೆ ಆಲಿಬಾಬಾ 34 ಕಳ್ಳರು ಎನ್ನುವಂಥ ರೀತಿ ಆಗಿದೆ. ಮುಖ್ಯಮಂತ್ರಿ, ಮಂತ್ರಿಗಳು ಕಮಿಷನ್‌ ಉಡಾಯಿಸಿ ಮೋಜು ಮಾಡುತ್ತಿದ್ದಾರೆ. ಶಾಸಕರು ತಮ್ಮ ಕ್ಷೇತ್ರಗಳಿಗೆ ಮುಖ ಹಾಕಲಾರದ ದುಸ್ಥಿತಿಯಲ್ಲಿ ಇದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ವಿಷಯ ಬೇರೆನಿದೆ? ಇದನ್ನು ಪ್ರತಿಪಕ್ಷ ನಾಯಕರು ಹೇಳುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರು, ಅದರಲ್ಲಿಯೂ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.‌ಪಾಟೀಲ್‌, ರಾಜು ಕಾಗೆ, ಬೇಳೂರು ಗೋಪಾಲಕೃಷ್ಣ ಅಂಥವರೇ ಹೇಳುತ್ತಿದ್ದಾರೆ. ಅವರೇ ಈ ಸರ್ಕಾರಕ್ಕೆ ಸರ್ಟಿಫಿಕೇಟ್‌ ನೀಡಿದ್ದಾರೆ.

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ವಸತಿ ಇಲಾಖೆಯದ್ದೇ ಪುರಾಣ. ಜನತೆ ಕಣ್ಣಿಗೆ ಮಂಕುಬೂದಿ ಎರಚುವ ಕೆಲಸ ಮಾಡಲಾಗುತ್ತಿದೆ. ಸರಕಾರಕ್ಕೆ ಜನರ ಭಯ ಭಕ್ತಿ ಇಲ್ಲದಾಗಿದೆ. ಬಿ.ಆರ್.ಪಾಟೀಲ್ ಅವರ ಕ್ಷೇತ್ರದಲ್ಲೇ 950 ಮನೆಗಳನ್ನು ವಸತಿ ಇಲಾಖೆಯಿಂದ ನೀಡಿದ್ದಾರೆ! ಪಾಟೀಲ್‌ ಅವರು ಸಚಿವರ ಆಪ್ತ ಕಾರ್ಯದರ್ಶಿಗೆ ಮೊಬೈಲ್‌ ಕರೆ ಮೂಲಕ ಪ್ರಶ್ನೆ ಮಾಡಿದರೆ, ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಆಡಿಯೋ ಮೂಲಕ ವೈರಲ್‌ ಆಗಿದೆ. 

ನಿಖರವಾದ ಪ್ರಕರಣ ಇದ್ದರೆ ದೂರು ಕೊಡಿ, ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಸಕರಿಗೆ ಉತ್ತರ ಕೊಡುತ್ತಾರೆ. ಆ ವ್ಯಕ್ತಿಗೆ ಕ್ರಮ ತೆಗೆದುಕೊಳ್ಳುವ ಅಧಿಕಾರ ಕೊಟ್ಟಿದ್ದಾರಾ ಸಚಿವರು? ವಸೂಲಿ ಮಾಡುವ ಪವರ್ ಕೊಟ್ಟಿದ್ದಾರಷ್ಟೇ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. 

ಎಚ್‌ಡಿಕೆ ಒತ್ತುವರಿ ತೆರವಿಗೆ ರಚಿಸಿದ್ದ ಎಸ್‌ಐಟಿಗೆ ತಡೆ: ಸರ್ಕಾರದ ಆಕ್ಷೇಪಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಮನಗರದ ಬಿಡದಿ ಹೋಬಳಿಯ ಕೇತಗಾನಹಳ್ಳಿ ಒತ್ತುವರಿ ಮಾಡಿದ್ದಾರೆ ಎನ್ನಲಾದ 14 ಸರ್ಕಾರಿ ಜಮೀನು ತೆರವಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿರುವ ಕ್ರಮವನ್ನು ಸರ್ಕಾರ ಸೋಮವಾರ ಬಲವಾಗಿ ಆಕ್ಷೇಪಿಸಿತು. 

ಎಸ್‌ಐಟಿ ರಚನೆ ಆದೇಶ ರದ್ದು ಕೋರಿ ಕುಮಾರಸ್ವಾಮಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಜೂ.19ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಇ.ಎಸ್‌.ಇಂದಿರೇಶ್‌ ಅವರ ನ್ಯಾಯಪೀಠವು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿತ್ತು. ಅರ್ಜಿ ಮತ್ತೆ ಸೋಮವಾರ ವಿಚಾರಣೆಗೆ ಬಂದಿತ್ತು.ಅಡ್ವೋಕೆಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ, ಸರ್ಕಾರದ ಪರ ವಾದ ಆಲಿಸದೆ ಏಕಪಕ್ಷೀಯವಾಗಿ ಮಧ್ಯಂತರ ಆದೇಶ ನೀಡಲಾಗಿದೆ. ಸರ್ಕಾರದ ವಾದ ಆಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಬಲವಾಗಿ ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಇಂದಿರೇಶ್‌ ಅವರು, ಜೂ.26ರಂದು ಸರ್ಕಾರದ ವಾದ ಆಲಿಸಲಾಗುವುದು ಎಂದು ತಿಳಿಸಿದರು.

Read more Articles on