ಕನ್ನಡಪ್ರಭ ವಾರ್ತೆ ಮುಳಬಾಗಿಲುತಹಸೀಲ್ದಾರ್ ವಿ.ಗೀತಾರ ನೇತೃತ್ವದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ತಂಡ ನಗರದ ವಿವಿಧ ಹೋಟೆಲ್ ಮತ್ತು ಟೀ ಅಂಗಡಿಗಳು ಗ್ಯಾಸ್ ಸಿಲಿಂಡರ್ ಗೋಡನ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಹೋಟೆಲ್‌ಗಳಲ್ಲಿ ಗೃಹಬಳಕೆ ಸಿಲಿಂಡರ್‌ಗಳನ್ನು ಯಾವುದೇ ಕಾರಣಕ್ಕೂ ಬಳಸಬಾರದು. ಸಾರ್ವಜನಿಕರಿಂದ ದೂರುಗಳು ಬಂದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು.ನಗರದ ಟೀ ಅಂಗಡಿ ಒಂದರಲ್ಲಿ ಅಕ್ರಮವಾಗಿ ಗೃಹಬಳಕೆ ಸಿಲಿಂಡರನ್ನು ಬಳಸುತ್ತಿರುವುದನ್ನು ಪತ್ತೆ ಹಚ್ಚಿ ಸಿಲಿಂಡರ್ ವಶಪಡಿಸಿಕೊಂಡು ನಗರ ಪೊಲೀಸ್ ಠಾಣೆಯಲ್ಲಿ ಈ ಮಾಲೀಕರ ವಿರುದ್ಧ ದೂರು ಸಲ್ಲಿಸಲಾಗಿದ್ದು, ಈ ಸಂಬಂಧ ನಗರಠಾಣೆ ಇನ್‌ಸ್ಪೆಕ್ಟರ್ ಅಣ್ಣಯ್ಯ ಪ್ರಕರಣ ದಾಖಲಿಸಿದ್ದಾರೆ.ತಹಸಿಲ್ದಾರ್ ವಿ.ಗೀತಾ ಮಾತನಾಡಿ, ಸಿಲಿಂಡರ್ ಸೇರಿದಂತೆ ಗೃಹಬಳಕೆ ವಸ್ತುಗಳು ಸಿಗುತ್ತಿಲ್ಲ ಎಂದು ಸುಳ್ಳು ವದಂತಿ ಹಬ್ಬಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಕಿವಿ ಕೊಡಬಾರದು ಎಂದು ಮನವಿ ಮಾಡಿದರಲ್ಲದೆ ಸಾರ್ವಜನಿಕರಿಗೆ ಅಗತ್ಯವಾದಷ್ಟು ಸಿಲಿಂಡರ್ ಮತ್ತು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ತಾಲೂಕು ಆಡಳಿತ ಸಿದ್ಧ ಎಂದು ತಿಳಿಸಿದರು.ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಆಹಾರ ಇಲಾಖೆ ಇನ್‌ಸ್ಪೆಕ್ಟರ್ ಮೊಹಮ್ಮದ್ ಹರ್ಷದ್ ಆಲಿ, ಅಶ್ವಥ್ ಗೌಡ ಇದ್ದರು.