ಕನ್ನಡಪ್ರಭ ವಾರ್ತೆ ತುಮಕೂರುರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಾ.27 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಜಿಲ್ಲಾ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಪಿ.ಎನ್. ರಾಮಯ್ಯ ಒತ್ತಾಯಿಸಿದರು.ನಗರದ ಎಂ.ಜಿ. ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾ ದಸಂಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಚಿವ ಸಂಪುಟದ ಎಲ್ಲಾ ಸಚಿವರು ಒಳಮೀಸಲಾತಿ ಅನುಷ್ಠಾನಕ್ಕೆ ಒಮ್ಮತದಿಂದ ಸಹಕರಿಸಬೇಕು ಎಂದು ಮನವಿ ಮಾಡಿದರು.ಕಳೆದ 35 ವರ್ಷದಿಂದ ಎಲ್ಲಾ ಶಾಸಕರುಗಳಿಗೂ ಒಳಮೀಸಲಾತಿ ಜಾರಿಗೆ ಒತ್ತಾಯಿಸುವಂತೆ ಒಳಮೀಸಲಾತಿ ಪರ ಹೋರಾಟಗಾರರು ಮನವಿ ಸಲ್ಲಿಸುತ್ತಾ ಬಂದಿದ್ದಾರೆ. ಎಲ್ಲಾ ಜಾತಿ, ಜನಾಂಗಕ್ಕೆ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲು ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ನ್ಯಾಯಮೂರ್ತಿಗಳಾದ ಸದಾಶಿವ ಆಯೋಗ ಹಾಗೂ ನಾಗಮೋಹನ್‌ದಾಸ್ ಆಯೋಗದ ವರದಿಯನ್ನು ಸರ್ಕಾರ ತಿರಸ್ಕಾರ ಮಾಡಿರುವುದು ಸರಿಯಲ್ಲ ಎಂದ ಅವರು, ಎಸ್ಸಿ ಜನಾಂಗಗಳ ಪರ ವಿರೋಧ ಹೋರಾಟಗಳಿಗೆ ತೆರೆ ಎಳೆಯಬೇಕು. ನಿರುದ್ಯೋಗಿ ಯುವಕರಿಗೆ ಹುದ್ದೆ ತುಂಬುವ ಮೂಲಕ ಯುವ ಜನತೆಗೆ ಸರ್ಕಾರ ಉದ್ಯೋಗ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.ಸಭೆಯಲ್ಲಿ ದಸಂಸ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀನಾಥ್, ಮುಖಂಡರಾದ ಟಿ.ಕೆ. ನರಸೀಯಪ್ಪ, ಸುನೀಲ್, ಚಂದ್ರಯ್ಯ, ನಾಗೇಶ್, ಗೌರಮ್ಮ, ಲಕ್ಷಮ್ಮ್ಮ , ಪಿ. ಮಂಜುನಾಥ್, ಸಿ.ಪಿ. ಲಕ್ಷ್ಮ್ಮಣ್, ನಾರಾಯಣಪ್ಪ ಮತ್ತಿತರರು ಭಾಗವಹಿಸಿದ್ದರು.