ಸಾರಿಗೆ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮವಹಿಸಿ: ಉದಯ್

| Published : Nov 20 2024, 12:30 AM IST

ಸಾರಾಂಶ

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಹಾಗೂ ಗಣ್ಯರಿಗೆ ಯಾವುದೇ ಲೋಪವಾಗದಂತೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಶಾಸಕ ಹಾಗೂ ಸಾರಿಗೆ ಸಮಿತಿ ಅಧ್ಯಕ್ಷ ಕೆ.ಎಂ.ಉದಯ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಹಾಗೂ ಗಣ್ಯರಿಗೆ ಯಾವುದೇ ಲೋಪವಾಗದಂತೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಶಾಸಕ ಹಾಗೂ ಸಾರಿಗೆ ಸಮಿತಿ ಅಧ್ಯಕ್ಷ ಕೆ.ಎಂ.ಉದಯ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರಿಗೆ ಸಮಿತಿ ಸಭೆಯಲ್ಲಿ ಮಾತನಾಡಿ, ಸಮ್ಮೇಳನಕ್ಕೆ ನೋಂದಾಯಿತ ಅತಿಥಿಗಳಿಗೆ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸುವ ಜೊತೆಗೆ ಅತಿಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಬೇಕು. ವಸತಿ ಸಮಿತಿ ಅವರನ್ನು ಸಂಪರ್ಕಿಸಿ, ನೋಂದಾಯಿತ ಪ್ರತಿನಿಧಿಗಳು ಹಾಗೂ ಗಣ್ಯರ ಮಾಹಿತಿ ಪಡೆದು ಅವರಿಗೆ ವಾಹನದ ವ್ಯವಸ್ಥೆ ಮಾಡಬೇಕು ಎಂದರು.

ಸಮ್ಮೇಳನದ ಸಾರಿಗೆ ವ್ಯವಸ್ಥೆಗಾಗಿ ವಾಹನಗಳು ಹಾಗೂ ಇತರೆ ವೆಚ್ಚಕ್ಕಾಗಿ ಸಾರಿಗೆ ಸಮಿತಿಗೆ ಹಂಚಿಕೆಯಾಗಿರುವ ಅನುದಾನವನ್ನು ಬಹಳ ಜವಾಬ್ದಾರಿಯುತವಾಗಿ ವೆಚ್ಚ ಮಾಡಬೇಕು. ಇದಕ್ಕಾಗಿ ಸರ್ಕಾರಿ ವಾಹನ ಹಾಗೂ ಖಾಸಗಿ ವಾಹನಗಳನ್ನು ಪಡೆಯಬೇಕು ಎಂದು ಹೇಳಿದರು.

ಸಮ್ಮೇಳನ ಮೂರು ದಿನವೂ ಸುಗಮ ಸಂಚಾರಕ್ಕೆ ಅನುವಾಗಲು ವಾಹನಗಳಿಗೆ ಟೋಲ್ ವಿನಾಯಿತಿ ನೀಡಬೇಕು. ಸಮ್ಮೇಳನದ ಸಾರಿಗೆ ಕರ್ತವ್ಯಕ್ಕೆ ನಿಯೋಜನೆಗೊಂಡ ವಾಹನಗಳಿಗೆ ಅಧ್ಯಕ್ಷರ ಸಹಿಯನ್ನೊಳಗೊಂಡ ಪಾಸ್ ಮತ್ತು ಗುರುತಿನ ಚೀಟಿ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ರಾಜ್ಯ ಮತ್ತು ಗ್ರಾಮೋದ್ಯೋಗ ಮಂಡಳಿ ಕಾರ್ಯದರ್ಶಿ ಸುಧಾಮ, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಹೇಮಾವತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಚಲುವಯ್ಯ, ನಗರಸಭೆ ಸದಸ್ಯರಾದ ಮಂಜುನಾಥ್, ರವಿ, ಮಂಜು, ನೆಹರು ಯುವ ಕೇಂದ್ರದ ನಿವೃತ್ತ ಮುಖ್ಯ ಲೆಕ್ಕಾಧಿಕಾರಿ ಎಚ್.ಎಂ. ಬಸವರಾಜು, ಅಬಕಾರಿ ಇಲಾಖೆ ಉಪ ಆಯುಕ್ತ ರವಿಶಂಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.