ಕನ್ನಡಪ್ರಭ ವಾರ್ತೆ ಮೈಸೂರು
ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುವ 120 ಬ್ಲ್ಯಾಕ್ ಸ್ಪಾಟ್ ಗಳನ್ನು ಪಟ್ಟಿ ಮಾಡಲಾಗಿದೆ. ಸದರಿ ರಸ್ತೆಗಳಲ್ಲಿ ಅಪಘಾತ ತಡೆಗಟ್ಟುವ ರೀತಿಯಲ್ಲಿ ಯೋಜನೆ ರೂಪಿಸಲಾಗಿರುತ್ತದೆ. ಸದರಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆ ಅಪಘಾತಗಳಲ್ಲಿ ಸಾವು ಸಂಭವಿಸುವ ರಸ್ತೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ನಿಖರ ಕಾರಣಗಳನ್ನು ಪಟ್ಟಿ ಮಾಡಿಕೊಂಡು ಸರಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದರು.
120 ಬ್ಲ್ಯಾಕ್ ಸ್ಪಾಟ್ ರಸ್ತೆಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಹೆಚ್ಚಿನ ರಸ್ತೆಗಳು ಲೋಕೋಪಯೋಗಿ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸೇರಿದ್ದು, ರಸ್ತೆ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಅನುದಾನ ಕೋರಿ ಮನವಿ ಸಲ್ಲಿಸಿ ಹಾಗೂ ತಮ್ಮ ಇಲಾಖೆಯಲ್ಲಿ ಲಭ್ಯ ಅನುದಾನದ ನಿಯಮಾನುಸಾರ ಸಧ್ಯವಾದಲ್ಲಿ ಸದರಿ ಕಾಮಗಾರಿಗಳನ್ನು ಸೇರಿಸಿಕೊಳ್ಳಿ ಎಂದು ಹೇಳಿದರು.ನಗರ ಪ್ರಾದೇಶದಲ್ಲೂ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯವರು ಜಂಟಿಯಾಗಿ ಪರಿಶೀಲನೆ ನಡೆಸಿ, ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಕೆಲವು ರಸ್ತೆಗಳಲ್ಲಿ ಸೂಚನಾ ಪಲಕ ಅಳವಡಿಕೆ ಸೇರಿದಂತೆ ಸಣ್ಣ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ರಸ್ತೆ ಅಪಘಾತಗಳನ್ನು ತಡೆಯಬಹುದಾಗಿದ್ದು, ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಿ. ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಪ್ರಕರಣ ಇದ್ದಲ್ಲಿ ತಪ್ಪದೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ. ಹೊರ ವರ್ತುಲ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕಾಗಿ ಅನಧಿಕೃತವಾಗಿ ಸಣ್ಣ ತೆರವು ಮಾಡಿಕೊಂಡಿದ್ದಲ್ಲಿ ಅವುಗಳನ್ನು ಸರಿಪಡಿಸಿ ಎಂದರು.
ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ನಗರ ಸಂಚಾರ ಉಪ ವಿಭಾಗದ ಎಸಿಪಿ ಎಂ. ಶಿವಶಂಕರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಪದ್ಮನಾಭ, ನಗರ ಪಾಲಿಕೆ ಅಧೀಕ್ಷಕ ಎಂಜಿನಿಯರ್ ಸಿ.ಎಸ್. ಮಂಜು, ಎನ್ಎಚ್ಎಐ ಸೈಟ್ ಎಂಜಿನಿಯರ್ ಬಿ. ಅರುಣ್ ಮೊದಲಾದವರು ಇದ್ದರು.