ಸಾರಾಂಶ
5ನೇ ರಾಜ್ಯ ಹಣಕಾಸು ಆಯೋಗದ ಸಮಾಲೋಚನಾ ಸಭೆ
ಕನ್ನಡಪ್ರಭ ವಾರ್ತೆ ಬಳ್ಳಾರಿಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣಸ್ವಾಮಿ ಅವರು ಸೂಚಿಸಿದರು.
ನಗರದ ಜಿಪಂ ನಜೀರ್ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ 5ನೇ ರಾಜ್ಯ ಹಣಕಾಸು ಆಯೋಗದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಆಯೋಗದಿಂದ ಶಿಫಾರಸು ಮಾಡಲಾಗುವುದು. ಕಟ್ಟಡ ತೆರಿಗೆ, ವಾಣಿಜ್ಯ ಮಳಿಗೆಗಳ ತೆರಿಗೆ ಬಾಕಿ ವಸೂಲಾತಿಗೆ ಕ್ರಮ ವಹಿಸಬೇಕು ಎಂದರು.ನಗರದ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ಸ್ಥಿತಿಗಳನ್ನು ಪರಿಶೀಲಿಸಿ ಆನಂತರ ಸಂಪನ್ಮೂಲಗಳ ಹಂಚಿಕೆ ಹಾಗೂ ವಿಭಜನೆಯ ಶಿಫಾರಸುಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆಸ್ತಿ ತೆರಿಗೆ, ಉದ್ದಿಮೆ ಪರವಾನಗಿ, ಬಾಡಿಗೆ ಆದಾಯ, ಬಳಕೆದಾರರ ಶುಲ್ಕ, ಇನ್ನಿತರ ಸಂಗ್ರಹ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಂತ ಸಂಪನ್ಮೂಲ ಕ್ರೋಡೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು ಆದ್ಯತೆ ನೀಡಬೇಕು ಅವರು ಹೇಳಿದರು.ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ತೆರಿಗೆ ಪಾವತಿ ಖಾತಾ ಪ್ರತಿ ದಾಖಲೆಗಳನ್ನು ತ್ವರಿತವಾಗಿ ನೀಡುವಿಕೆ, ನೀರು ಸರಬರಾಜು, ಒಳಚರಂಡಿ, ಬೀದಿದೀಪಗಳು, ಘನತ್ಯಾಜ್ಯ ನಿರ್ವಹಣೆ, ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ವಿವರಿಸಿದರು.
ನಗರಸಭೆ, ಪುರಸಭೆ, ಪಪಂ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಪಂ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಒದಗಿಸಲು ಹೆಚ್ಚು ಅನುದಾನ, ವಿವಿಧ ಮಂಜೂರು ಅಗತ್ಯತೆ ಸೇರಿದಂತೆ ಬೇರೆ ಬೇರೆ ವಿಷಯಗಳ ಕುರಿತು ಆಯೋಗದ ಅಧ್ಯಕ್ಷರಿಗೆ ವಿನಂತಿಸಿದರು.5ನೇ ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ಆರ್.ಎಸ್. ಪೊಂಡೆ, ಆಪ್ತ ಕಾರ್ಯದರ್ಶಿ ಕೆ. ಯಾಲಕ್ಕಿಗೌಡ, ಸಮಾಲೋಚಕರಾದ ಎಂ.ಕೆ. ಕೆಂಪೇಗೌಡ, ಸಿ.ಜಿ. ಸುಪ್ರಸನ್ನ, ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ, ಬಳ್ಳಾರಿ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ವಿಜಯನಗರ ಜಿಪಂ ಸಿಇಒ ಮೊಹಮ್ಮದ್ ಅಲಿ ಅಕ್ರಮ್ ಶಾ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ ಉಪಸ್ಥಿತರಿದ್ದರು.