ಚುನಾವಣಾ ಕರ್ತವ್ಯವನ್ನು ಗಂಭೀರವಾಗಿ ಪರಿಗಣಿಸಿ

| Published : Mar 19 2024, 12:48 AM IST

ಸಾರಾಂಶ

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಕರ್ತವ್ಯಗಳಿಗೆ ನಿಯೋಜಿಸಲ್ಪಟ್ಟಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ನಿಗದಿತ ಕಾರ್ಯಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಕರ್ತವ್ಯಗಳಿಗೆ ನಿಯೋಜಿಸಲ್ಪಟ್ಟಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ನಿಗದಿತ ಕಾರ್ಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಾಕಷ್ಟು ಪೂರ್ವ ಸಿದ್ಧತೆಗಳೊಂದಿಗೆ ಯಾವುದೇ ಲೋಪಗಳಿಗೆ ಆಸ್ಪದವಿಲ್ಲದಂತೆ ಎಚ್ಚರಿಕೆ, ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂ.ಗ್ರಾ. ಜಿಲ್ಲಾಡಳಿತ ಭವನದಲ್ಲಿ ನಡೆದ ಚುನಾವಣಾ ಕಾರ್ಯಗಳ ಪೂರ್ವ ಸಿದ್ಧತೆಗಳ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗ ಕೇಳುವ ಮಾಹಿತಿಯನ್ನು ಜಿಲ್ಲೆಯ ನೋಡಲ್ ಅಧಿಕಾರಿಗಳು ಸಮರ್ಪಕವಾಗಿ ಸಿದ್ಧಪಡಿಸಿ ಸಕಾಲದಲ್ಲಿ ಒದಗಿಸಬೇಕು. ಮಾನವ ಸಂಪನ್ಮೂಲ, ವಿದ್ಯುನ್ಮಾನ ಮತಯಂತ್ರಗಳು (ಇವಿಎಂ), ತರಬೇತಿ ನಿರ್ವಹಣೆ, ಸಾರಿಗೆ, ಗಣಕೀಕರಣ, ವೆಚ್ಚ ನಿರ್ವಹಣೆ, ಮಾಧ್ಯಮ ಪ್ರಮಾಣೀಕರಣ ಹಾಗೂ ನಿಗಾ ವಹಿಸುವಿಕೆ ಮೊದಲಾದ ಕಾರ್ಯಗಳಿಗೆ ನಿಯೋಜಿಸಿದ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯಗಳ ಕುರಿತ ಸರಿಯಾದ ತಿಳಿವಳಿಕೆ ಹೊಂದಿರಬೇಕು. ಈಗಾಗಲೇ ತರಬೇತಿ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಅದರ ಅನುಸಾರವಾಗಿ ತರಬೇತಿಗಳನ್ನು ಆಯೋಜಿಸಿ ವರದಿ ನೀಡಬೇಕು. ಆಯೋಗ ಕಾಲಕಾಲಕ್ಕೆ ಹೊರಡಿಸುವ ನಿರ್ದೇಶನಗಳನ್ನು ನಿರಂತರವಾಗಿ ಗಮನಿಸಿ, ಅರಿತುಕೊಳ್ಳಬೇಕು. ಮತಗಟ್ಟೆಗಳಲ್ಲಿ ಕನಿಷ್ಠ ಮೂಲ ಸೌಕರ್ಯಗಳಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಮತ್ತಿತರರು ಉಪಸ್ಥಿತರಿದ್ದರು.