ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ: ಶಿಕ್ಷಕರ ಅರ್ಹತಾ ಪರೀಕ್ಷೆ ಏಂಖ-ಖಿಇಖಿ ಪರೀಕ್ಷೆಗಳು ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ಸುಗಮವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2024 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಗಳಾದ ಕೆಎಆರ್ ಟಿಇಟಿ ಪರೀಕ್ಷೆಯ ಪೂರ್ವ ತಯಾರಿ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯ 23 ಕೇಂದ್ರಗಳು ಹಾಗೂ ಚಿಕ್ಕೋಡಿಯಲ್ಲಿ 18 ಕೇಂದ್ರಗಳು ಒಟ್ಟು 41ಕೇಂದ್ರಗಳಲ್ಲಿ ಜೂ.30 ರಂದು ಪರೀಕ್ಷೆ ಜರುಗಲಿವೆ. ಈ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ಶಾಂತಿಯುತವಾಗಿ ಹಾಗೂ ಸುರಕ್ಷಿತವಾಗಿ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳ್ಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.
ಈ ಪರೀಕ್ಷೆಗಳ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸಮೀಪದ ಝೆರಾಕ್ಸ್ ಕೇಂದ್ರಗಳನ್ನು ಮುಚ್ಚಲು, ಅಭ್ಯರ್ಥಿಗಳು, ಶಾಲಾ/ಕಾಲೇಜು ಸಿಬ್ಬಂದಿಗಳು, ಸರ್ಕಾರದಿಂದ ನೇಮಿಸಿದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಆರಕ್ಷಕ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರಿಗೆ ಪರೀಕ್ಷಾ ಕೇಂದ್ರಗಳ ಒಳಗಡೆ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಬೇಕು. ಪರೀಕ್ಷಾ ದಿನಗಳಂದು ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಡಿಸಿ ನಿತೇಶ ಪಾಟೀಲ ಅವರು ಸೂಚನೆ ನೀಡಿದರು. .ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಲ್ಲಾ ಖಜಾನಾಧಿಕಾರಿ, ಸಿ.ಟಿ.ಇ ಪ್ರಾಚಾರ್ಯರು ಹಾಗೂ ಡೈಯಟ್ ಪ್ರಾಂಶುಪಾಲರು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಚಿಕ್ಕೋಡಿ ಡೈಯಟ್ ಅವರು ಉಪಸ್ಥಿತರಿದ್ದರು.