ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸಲಿದ್ದಾರೆ. ಭಕ್ತರಿಗೆ ಕುಡಿಯುವ ನೀರು ಸೇರಿ ಅಗತ್ಯ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು .

ಕನ್ನಡಪ್ರಭ ವಾರ್ತೆ ಮೇಲುಕೋಟೆ

ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ನಡೆದ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆಯಲ್ಲಿ ಮಾತನಾಡಿ, ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸಲಿದ್ದಾರೆ. ಭಕ್ತರಿಗೆ ಕುಡಿಯುವ ನೀರು ಸೇರಿ ಅಗತ್ಯ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

ಹೆಚ್ಚಿನ ಭಕ್ತರ ಆಗಮನದ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ, ವೈದ್ಯಕೀಯ ಮತ್ತು ಸಾರಿಗೆ ಬಸ್ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು, ಉತ್ಸವದ ಮೆರವಣಿಗೆ ಸುಗಮವಾಗಿ ಸಾಗಲು ಸೂಕ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಡೀಸಿ ಡಾ.ಕುಮಾರ್ ಮಾತನಾಡಿ, ಮಾ.28ರಂದು ನಡೆಯುವ ವಿಶ್ವವಿಖ್ಯಾತ ವೈರಮುಡಿ ಉತ್ಸವದಂದು ಶ್ರೀ ಚೆಲುವನಾರಾಯಣಸ್ವಾಮಿಗೆ ವಜ್ರಖಚಿತ ಕಿರೀಟಧಾರಣೆ ಮಾಡಿ, ರತ್ನಖಚಿತ ಆಭರಣಗಳಿಂದ ಅಲಂಕರಿಸಿ ಉತ್ಸವ ನೆರವೇರಿಸಲಾಗುತ್ತದೆ. ಉತ್ಸವ ನಡೆಯುವ ಇಡೀ ರಾತ್ರಿ ಭಕ್ತಾದಿಗಳಿಗೆ ದರ್ಶನಕ್ಕೆ ತೊಂದರೆಯಾಗದಂತೆ ಕ್ರಮ ವಹಿಸುವ ಜೊತೆಗೆ, ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಮಾಧ್ಯಮದವರಿಗೆ ಪ್ರತ್ಯೇಕ ಗ್ಯಾಲರಿ ಮಾಡಬೇಕು ಎಂದರು.

ಪುರಾಣ ಪ್ರಸಿದ್ಧ ಪಂಚ ಕಲ್ಯಾಣಿಯನ್ನು ವೀಕ್ಷಿಸಿ, ಏ.1ರಂದು ನಡೆಯುವ ತೆಪ್ಪೋತ್ಸವದ ವೇಳೆ ಭಕ್ತಾದಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ರಾಜ್ಯವಲ್ಲದೆ ಇತರೆ ರಾಜ್ಯಗಳಿಂದ ಬರುವ ಭಕ್ತರಿಗೆ ಸ್ನಾನ ಗೃಹ ಮತ್ತು ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ ಹಾಗೂ ಲೈಟಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು. ವಾಹನಗಳಿಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ, ಸೂಚನಾ ಫಲಕಗಳು, ಮಾ.28 ರಂದು ದೇವಸ್ಥಾನ, ಪಾರ್ಕಿಂಗ್, ದಾಸೋಹ ಭವನ 3 ಕಡೆ ಗ್ಯಾಲರಿ ಮಾಡಿ ಆರೋಗ್ಯ ಅಧಿಕಾರಿಗಳನ್ನು ನೇಮಿಸುವುದು, ಪ್ರಾಥಮಿಕ ಚಿಕಿತ್ಸೆಗೆ ಅಗತ್ಯ ಔಷಧಿಗಳ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಎಸ್ಪಿ ಡಾ.ಶೋಭಾರಾಣಿ, ಮುಜರಾಯಿ ಇಲಾಖೆ ತಹಸೀಲ್ದಾರ್ ತಮ್ಮಣ್ಣ ಗೌಡ, ದೇಗುಲದ ಇಒ ಶೀಲಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.