ಸಾಂಕ್ರಾಮಿಕ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿ-ಜಿಲ್ಲಾಧಿಕಾರಿ

| Published : Sep 02 2025, 01:00 AM IST

ಸಾಂಕ್ರಾಮಿಕ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿ-ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಗದಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಡೆಂಘೀ, ಚಿಕೂನ್ ಗುನ್ಯಾ ರೋಗಗಳ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸಬೇಕು ಎಂದರು.

ಗದಗ ಜಿಲ್ಲೆ ಕೂಡ ಕೆಎಫ್‌ಡಿ ಬಾಧಿತ ಎಂಡಮಿಕ್ ಜಿಲ್ಲೆಗಳಲ್ಲಿ ಒಂದಾಗಿದೆ. ಕೆಎಫ್‌ಡಿ ವೈರಸ್‌ನಿಂದ ಸೋಂಕಿತಗೊಂಡ ಉಣ್ಣೆ ಕಚ್ಚುವುದರಿಂದ ಹರಡುವ ವೈರಲ್ ಜ್ವರವಾಗಿದೆ. ಈ ಕಾಯಿಲೆಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಬಾರದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ. ಜಿಲ್ಲೆಯಿಂದ ಈಗಾಗಲೇ 76 ರಕ್ತದ ಮಾದರಿಗಳನ್ನು ಹಾಗೂ 26 ಟಿಕ್‌ಪೂಲ್ ಮಾದರಿಗಳನ್ನು ಕೆಎಫ್‌ಡಿ ವೈರಸ್ ಪತ್ತೆಗಾಗಿ ವಿಡಿಎಲ್ ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಎಲ್ಲ ರಕ್ತದ ಮಾದರಿಗಳು ಹಾಗೂ ಟಿಕ್‌ಪೂಲ್ ಮಾದರಿಗಳ ಫಲಿತಾಂಶ ನೆಗೆಟಿವ್ ಎಂದು ವರದಿಯಾಗಿವೆ. 2024ರಲ್ಲಿ 8 ಟಿಕ್‌ಪೂಲ್‌ಗಳನ್ನು ಕಳುಹಿಸಿದ್ದು ಎಲ್ಲವೂ ನೆಗೆಟಿವ್ ಎಂದು ವರದಿಯಾಗಿವೆ. ಇಲ್ಲಿಯವರೆಗೆ ಯಾವುದೇ ಮಂಗಗಳ ಸಾವಿನ ವರದಿಯಾಗಿಲ್ಲ. ನವೆಂಬರ್ ತಿಂಗಳಿನಿಂದ ಜೂನ್ ತಿಂಗಳ ವರೆಗೂ ರೋಗ ಪ್ರಸರಣವಾಗುವ ಸಮಯವಿರುವುದರಿಂದ ತಾಲೂಕು ಮಟ್ಟದಲ್ಲಿ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಕೆಎಫ್‌ಡಿ ಕುರಿತು ಸಭೆ ನಡೆಸುವುದು. ಕೆಎಫ್‌ಡಿ ನಿಯಂತ್ರಿಸಲು ವಿವಿಧ ಇಲಾಖೆಗಳ ಸಹಕಾರ ಅಗತ್ಯ. ಅರಣ್ಯ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆ ಜವಾಬ್ದಾರಿ ಮುಖ್ಯವಾಗಿರುತ್ತವೆ ಎಂದು ಹೇಳಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ವೆಂಕಟೇಶ ರಾಠೋಡ ಮಾತನಾಡಿ, ಜಿಲ್ಲೆಯಲ್ಲಿ ಜನವರಿ 2025ರಿಂದ ಜು. 2025ರ ವರೆಗೆ ಒಟ್ಟು 2499 ಕರುಳುಬೇನೆ ಪ್ರಕರಣಗಳು, 2064 ಟೈಫೈಡ್ ಪ್ರಕರಣಗಳು. 22 ಹೆಪಟೈಟೀಸ್–ಎ, 61 ಡೆಂಘೀ ಪ್ರಕರಣಗಳು ವರದಿಯಾಗಿವೆ. ಜನವರಿ 2025ರಿಂದ ಜು. 2025ರ ವರೆಗೆ ಒಟ್ಟು 2,06,679 ಸಂಶಯಾಸ್ಪದ ಮಲೇರಿಯಾ ರಕ್ತದ ಲೇಪನಗಳನ್ನು ಸಂಗ್ರಹಿಸಿದ್ದು, ಅದರಲ್ಲಿ 3 ಖಚಿತ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 5,988 ನಾಯಿ ಕಡಿತ ಹಾಗೂ 926 ಇತರ ಪ್ರಾಣಿಗಳ ಕಡಿತ ವರದಿಯಾಗಿವೆ ಎಂದರು.

ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಿಂದ ಪ್ರತಿ ತಿಂಗಳು 50 ಉಪ್ಪು ಮಾದರಿಗಳು ಹಾಗೂ 25 ಮೂತ್ರದ ಮಾದರಿಗಳನ್ನು ಸಂಗ್ರಹಿಸಿ ಅಯೋಡಿನ್ ಅಂಶದ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ. ಗದಗ ಜಿಲ್ಲೆಯಿಂದ 2025ರಲ್ಲಿ ಒಟ್ಟು 351 ಉಪ್ಪಿನ ಮಾದರಿಗಳು ಹಾಗೂ 176 ಮೂತ್ರದ ಮಾದರಿಗಳನ್ನು ಅಯೋಡಿನ್ ಪರೀಕ್ಷೆಗೆ ಕಳುಹಿಸಿ ಕೊಡಲಾಗಿತ್ತು. ಎಲ್ಲ ಮೂತ್ರದ ಮಾದರಿಗಳು ಸಹಜ ಎಂದು ವರದಿಯಾಗಿವೆ. ಅದರಲ್ಲಿ 3 ಉಪ್ಪಿನ ಮಾದರಿಗಳು 15 ಪಿಪಿಎಂ ಎಂದು ವರದಿಯಾಗಿವೆ. ಜಿಲ್ಲೆಯಲ್ಲಿ 2025ರಲ್ಲಿ ಜುಲೈ ಅಂತ್ಯದವರೆಗೆ 5 ಲೆಪ್ಟೋಸ್ಪಿರೋಸಿಸ್ ಪ್ರಕರಣಗಳು ವರದಿಯಾಗಿವೆ ಎಂದು ವಿವರಿಸಿದರು.

ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ, ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ, ಇಲಿ ಜ್ವರ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ ಕುರಿತು ಚರ್ಚಿಸಲಾಯಿತು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕರಿಗೌಡ್ರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ವೈ.ಕೆ. ಭಜಂತ್ರಿ, ಡಾ. ರಾಜೇಂದ್ರ ಬಸರಿಗಿಡದ, ಡಾ. ಅರುಂಧತಿ ಕುಲಕರ್ಣಿ ಇದ್ದರು.