ಕನ್ನಡಪ್ರಭ ವಾರ್ತೆ ಮೊಳಕಾಲ್ಮೂರು
ಮಳೆಗಾಲ ಆರಂಭಗೊಂಡಿದ್ದು ರೈತರಿಗೆ ಬಿತ್ತನೆ ಬೀಜ ಮತ್ತು ಗೊಬ್ಬರ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕೆಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸೈಯದ್ ನಯೀಮ್ ಹೇಳಿದರು.ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ 2026ನೇ ಸಾಲಿನ ತಾಲೂಕು ಪಂಚಾಯಿತಿ ಮೊದಲ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ಪ್ರಸಕ್ತ ವರ್ಷದಲ್ಲಿ ಮಳೆಗಾಲ ಆರಂಭಗೊಂಡಿದೆ. ರೈತರಿಗೆ ಅಗತ್ಯ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಬೇಕು. ಕೈಗೊಂಡಿರುವ ಕ್ರಮ ಕುರಿತು ಪ್ರಶ್ನಿಸಿದರು. ಇಲಾಖೆಯಲ್ಲಿ ಕೃಷಿ ಭಾಗ್ಯ ಯೋಜನೆ ಇದೆ. ಅಲ್ಲದೆ ರೈತರಿಗೆ 20 ರು. ಸಾವಿರ ಸಹಾಯಧನದ ಆಧಾರದಲ್ಲಿ ಹಸುಗಳು ಕೊಡುವ ಯೋಜನೆ ಇದ್ದು ಈಗಾಗಲೇ 129 ರೈತರಿಗೆ ಹಸುಗಳನ್ನು ಕೊಡಿಸಲಾಗಿದೆ. ಸೂಕ್ಷ್ಮ ನೀರಾವರಿ, ಕೃಷಿ ಯಾಂತ್ರೀಕರಣ ಸೌಲಭ್ಯದ ಕುರಿತು ರೈತರಿಗೆ ಮಾಹಿತಿ ನೀಡಲಾಗಿದೆ ಹಾಗೂ ಮುಂಗಾರು ಹಂಗಾಮಿನ ಬಿತ್ತನೆಗೆ ಪೂರಕವಾಗಿ ಅಗತ್ಯ ಬಿತ್ತನೆ ಬೀಜ ಮತ್ತು ಗೊಬ್ಬರ ದಾಸ್ತಾನಿಗೆ ಕ್ರಮ ವಹಿಸಲಾಗಿದೆ ಎಂದು ಸಹಾಯಕ ಕೃಷಿ ಅಧಿಕಾರಿ ಹೇಮಂತ ನಾಯ್ಕ ಸಭೆಯಲ್ಲಿ ಹೇಳಿದರು.ಶಾಲಾ ಆರಂಭಕ್ಕೆ ಪೂರಕವಾಗಿ ಕೈಗೊಂಡಿರುವ ಸಿದ್ಧತೆಗಳೇನು ಎಂದು ತಾಲೂಕು ಪಂಚಾಯಿತಿ ಇಒ ಹನುಮಂತಪ್ಪ ಪ್ರಶ್ನಿಸಿದಾಗ ಪ್ರಸಕ್ತ ಶಿಕ್ಷಣಿಕ ವರ್ಷ ಆರಂಭಕ್ಕೂ ಮುನ್ನಾ ಈಗಾಗಲೇ ಅಗತ್ಯ ಪಠ್ಯ ಪುಸ್ತಕಗಳು ಸರಭರಾಗಿದ್ದು ಇನ್ನು ಕೆಲ ದಿನಗಳಲ್ಲಿ ಸಮವಸ್ತ್ರಗಳು ಸರಬರಾಜು ಆಗಲಿವೆ. ಈ ಬಾರಿ ತಾಲೂಕಿನಲ್ಲಿ ಉತ್ತಮ ಫಲಿತಾಂಶ ಪ್ರಕಟವಾಗಿದ್ದು ಇನ್ನಷ್ಟು ಫಲಿತಾಂಶ ವೃದ್ಧಿಗೆ ಕ್ರಮ ವಹಿಸಲಾಗುವುದು. ಶಾಲಾ ಆರಂಭಕ್ಕೆ ಪೂರಕವಾಗಿ ಎಲ್ಲಾ ಮುಖ್ಯ ಶಿಕ್ಷಕರ ಸಭೆ ನಡೆಸಿದ್ದು ವಿಜೃಂಭಣೆಯಿಂದ ಶಾಲೆ ಆರಂಭಕ್ಕೆ ಸೂಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾದೇವಿ ಹೇಳಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಯ ಬಾಲಕಿಯರ ಭದ್ರತೆಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ದೂರುಗಳು ಬಾರದಂತೆ ಎಚ್ಚರವಹಿಸಬೇಕು. ಬಹುತೇಕ ಪರಿಶಿಷ್ಟ ಜಾತಿ ಮತ್ತು ಪಂಗಡ ಮತ್ತು ಹಿಂದುಳಿದ ಸಮುದಾಯಗಳೇ ಹೆಚ್ಚಾಗಿರುವ ಈ ಭಾಗದಲ್ಲಿ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಹಾಕುವಂಥ ಎಲ್ಲಾ ಮಕ್ಕಳಿಗೆ ದಾಖಲಾತಿ ನೀಡಲು ಕ್ರಮ ವಹಿಸಬೇಕೆಂದು ತಾಲೂಕು ಪಂಚಾಯಿತಿ ಇಒ ಹನುಮಂತಪ್ಪ ಹೇಳಿದರು.
ತಾಲೂಕಿನಲ್ಲಿ ನಕಲಿ ವೈದ್ಯರ ಹಾವಳಿ ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮ ವಹಿಸಿದ್ದು ಈಗಾಗಲೇ ನಕಲಿ ವೈದ್ಯರಿರುವ ಹಳ್ಳಿಗಳ ಪಟ್ಟಿ ಮಾಡಿಕೊಂಡು ದಾಳಿ ಮಾಡಲಾಗಿದೆ. ಈ ವೇಳೆ ಕೆಲವರು ವೈದ್ಯರಂತೆ ಚಿಕಿತ್ಸೆ ನೀಡುವುದು ಕಂಡುಬಂದಿದೆ. ಔಷಧ ಮತ್ತು ಇಂಜಕ್ಷನ್ಗಳನ್ನೂ ಪರಿಶೀಲಿಸಿದ್ದು ಕ್ಲಿನಿಕ್ ಮುಚ್ಚುವಂತೆ ಸೂಚಿಸಲಾಗಿದೆ. ಮತ್ತೊಮ್ಮೆ ಬಾಗಿಲು ತೆರೆದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ದಾಳಿಯ ಮುನ್ಸೂಚನೆ ಅರಿತ ಕೆಲ ಗ್ರಾಮಗಳಲ್ಲಿ ನಕಲಿ ವೈದ್ಯರು ಬಾಗಿಲು ಮುಚ್ಚಿಕೊಂಡು ಪರಾರಿಯಾಗಿದ್ದರು. ಕೆಲವರು ಸಾರ್ವಜನಿಕರಿಗೆ ಮೊಬೈಲ್ ನಂಬರ್ಗಳನ್ನು ನೀಡಿ ಮನೆಗಳಿಗೆ ತೆರಳಿ ಚಿಕಿತ್ಸೆ ನೀಡುವ ಮೂಲಕ ಅನ್ಯದಾರಿ ಹಿಡಿದಿದ್ದಾರೆ ಅಂತವನ್ನು ಪತ್ತೆ ಹಚ್ಚಲಾಗುತ್ತದೆ.ಬರುವ ದಿನಗಳಲ್ಲಿ ನಕಲಿ ವೈದ್ಯರ ಹಾವಳಿಯನ್ನು ಸಂಪೂರ್ಣವಾಗಿ ಬಂದ್ ಮಾಡಲು ಕ್ರಮ ವಹಿಸುತ್ತೇವೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್ ಹೇಳಿದರು. ಈ ವೇಳೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.