ಕನ್ನಡಪ್ರಭ ವಾರ್ತೆ ವಿಜಯಪುರ

ಜುಲೈ 2ನೇ ವಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆ ಅಭಾವದಿಂದ ಜಿಲ್ಲಾದ್ಯಂತ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆ ಸೇರಿದಂತೆ ಗ್ರಾಮೀಣ, ನಗರ, ಸ್ಥಳೀಯ ಸಂಸ್ಥೆ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಆಯಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ವಿದ್ಯುತ್ ಪರಿವರ್ತಕಗಳ ಸಮಸ್ಯೆಯಿದ್ದಲ್ಲಿ ಸ್ಪೀಡ್ ಅಪ್ ಮಾಡಿ ಕುಡಿಯುವ ನೀರಿಗೆ ತಕ್ಷಣಕ್ಕೆ ವಿದ್ಯುತ್ ಪೂರೈಕೆಯಾಗುವಂತೆ ಹೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚಿಸಿದರು.ಎಲ್ಲೆಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಬಹುದೋ, ಮುಂಚಿತವಾಗಿ ಮಾಹಿತಿ ಪಡೆದು ಅಂತಹ ಸ್ಥಳದಲ್ಲಿ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅದಕ್ಕೆಂದೇ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿ, ಅತಿ ಅವಶ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಸಮನ್ವಯತೆಯಿಂದ ಗಂಭೀರತೆಯಿಂದ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯವಹಿಸಿದರೆ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು. ಇನ್ನೊಂದೆಡೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಮೊಬೈಲ್ ಆನ್ ಇಟ್ಟುಕೊಂಡೇ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.ನಗರದ ಎಲ್ಲ ವಾರ್ಡ್‌ಗಳಿಗೆ ಸಮರ್ಪಕ ನೀರು ಒದಗಿಸಬೇಕು. ಈ ನಿಟ್ಟಿನಲ್ಲಿ ತಾಜಬಾವಡಿ ನೀರು ಬಳಸಲು ಅಧಿಕಾರಿಗಳು ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸಬೇಕು. ನಗರದಲ್ಲೂ ಸಹ ಖಾಸಗಿ ಬೋರವೆಲ್ ಗುರುತಿಸಿ ಗರಿಷ್ಠ ನೀರು ಪರೀಕ್ಷಿಸಿ, ಖಾಸಗಿ ಬೋರವೆಲ್ ವಾಟರ್‌ ಮ್ಯಾನೆಜಮೆಂಟ್ ಕೃಷ್ಣಾ ನದಿಯಿಂದ ಸರಬರಾಜಾಗುವ ನೀರನ್ನು ಕುಡಿಯುವ ನೀರಿಗಾಗಿ ಬಳಸಿ, ಉಳಿದಂತೆ ಬಾವಡಿ ಹಾಗೂ ಖಾಸಗಿ ಬೋರವೆಲ್ ಗುರುತಿಸಿಟ್ಟುಕೊಳ್ಳಬೇಕು. ಪಾಲಿಕೆ ಹಾಗೂ ಜಲ ಮಂಡಳಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟು ಶೇ.18.20 ರಷ್ಟು ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಜಿಲ್ಲೆಯ ಒಟ್ಟು 13 ತಾಲೂಕುಗಳಲ್ಲಿ ಈ ಬಾರಿ ಒಟ್ಟು 7,75,536 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಇದರಲ್ಲಿ ಸದ್ಯ 1,41,138 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಚಿವರಿಗೆ ವಿವರಿಸಿದರು. ಮೇವಿನ ಲಭ್ಯತೆ ಬಗ್ಗೆ ಅಂತಾರಾಜ್ಯಕ್ಕೆ ಮೇವು ಸರಬರಾಜಾಗದಂತೆ ಚೆಕ್ ಪೋಸ್ಟ್‌ ಸ್ಥಾಪಿಸಿ, ಮುಂದಿನ 27 ವಾರಕ್ಕೆ ಸಾಕಾಗುವಷ್ಟು ಮೇವಿನ ಲಭ್ಯತೆ ಇಟ್ಟುಕೊಳ್ಳಬೇಕು. ಡ್ರೈ ಗ್ರೇಪ್ಸ್, ಗ್ರೇಪ್ಸ್‌ ಎರಡಕ್ಕೂ ಜಿಐ ಟ್ಯಾಗ್ ಪಡೆದುಕೊಳ್ಳುವ ಪ್ರಕ್ರಿಯೆಯನ್ನು ಅಧಿಕಾರಿಗಳು ಆರಂಭಿಸಬೇಕು ಎಂದರು.ಸಭೆಯಲ್ಲಿ ಶಾಸಕರಾದ ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಪಂ ಸಿಇಒ ರಿಷಿ ಆನಂದ, ಎಸ್‌ಪಿ ಲಕ್ಷ್ಮಣ ನಿಂಬರಗಿ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.