ಕೊಪ್ಪಳ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರು ಪೂರೈಕೆ ಮತ್ತು ನೈರ್ಮಲ್ಯಕ್ಕೆ ಎಲ್ಲ ಪಿಡಿಓಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಜಿಪಂ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ ಸೂಚನೆ ನೀಡಿದರು.
ಜಿಪಂನ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಮತ್ತು ಇತರೆ ವಿಷಯಗಳ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಮೂಲಗಳಲ್ಲಿ ಬೇಸಿಗೆ ಮುಗಿಯುವವರೆಗೂ ಬಳಕೆಗೆ ಸಾಧ್ಯವಾಗುವಷ್ಟು ನೀರಿನ ಸಂಗ್ರಹಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಯಾವುದೇ ನೀರಿನ ಮೂಲವಿಲ್ಲದೇ ಇದ್ದಲ್ಲಿ ಅಂತಹ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಅಥವಾ ಖಾಸಗಿ ಬೋರವೆಲ್ಗಳಿಂದ ಬಾಡಿಗೆ ಆಧಾರದಲ್ಲಿ ನೀರು ಪಡೆಯಲು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅನುಮತಿಯೊಂದಿಗೆ ನಿಯಮಾನುಸಾರ ಕ್ರಮ ವಹಿಸಬೇಕು ಎಂದರು.
ಜಿಪಂಗೆ ಸಂಬಂಧಿಸಿದ ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್, ವಸತಿ ಯೋಜನೆ, ಉದ್ಯೋಗ ಖಾತರಿ ಯೋಜನೆ, ಪಂಚಾಯತ್ ರಾಜ್ ವಿಷಯಕ್ಕೆ ಸಂಬಂಧಿಸಿದಂತೆ, ತೆರಿಗೆ ವಸೂಲಾತಿ, ಆಸ್ತಿಗಳ ಸಮೀಕ್ಷೆ, ಸಕಾಲ, ಗ್ರಾಮ ಆರೋಗ್ಯ ಅಭಿಯಾನ, ಬಯೋಮೆಟ್ರಿಕ್ ಹಾಜರಾತಿ, ಗ್ರಂಥಾಲಯ ನಿರ್ವಹಣೆ ಸೇರಿದಂತೆ ಎಲ್ಲ ಕಾರ್ಯಕ್ರಮ ಅಚ್ಚುಕಟ್ಟಾಗಿ ಅನುಷ್ಠಾನ ಮಾಡಬೇಕು. ತೆರಿಗೆ ಸಂಗ್ರಹಣೆಯಲ್ಲಿ ಪ್ರಗತಿ ಸಾಧಿಸದ ಪಂಚಾಯತಿಗಳು ಕೂಡಲು ನಿಗದಿತ ಗುರಿಯಂತೆ ತೆರಿಗೆ ಸಂಗ್ರಹಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಪಿಡಿಓಗಳಿಗೆ ಸೂಚನೆ ನೀಡಿದರು.ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಸರಬರಾಜು ಪೈಪು ನಿರಂತರವಾಗಿ ಗಮನಿಸಿ ಯಾವುದೇ ಸೋರಿಕೆ ಕಂಡುಬಂದಲ್ಲಿ ಅದನ್ನು ಕೂಡಲೇ ಸರಿಪಡಿಸಿ ಕುಡಿಯುವ ನೀರು ಕಲುಷಿತವಾಗದಂತೆ ಕ್ರಮವಹಿಸಬೇಕು.ಶುದ್ಧ ಕುಡಿಯುವ ನೀರಿನ ಮೋಟಾರ್ ಪಂಪ್ ಹಾಗೂ ಜಲಜೀವನ್ ಮಿಷನ್ ನೀರು ಸರಬರಾಜು ಪಂಪ್ಗಳು ಸುಸ್ಥಿಯಲ್ಲಿರುವಂತೆ ನೋಡಿಕೊಳ್ಳಬೇಕು.ಎಲ್ಲ ಓಎಚ್ಟಿ ಟ್ಯಾಂಕ್ ಕ್ರಮೇಣವಾಗಿ ಸ್ವಚ್ಛಗೊಳಿಸಿ ಈ ಬಗ್ಗೆ ಸ್ವಚ್ಛತಾ ಕಾರ್ಯದ ಮತ್ತು ಸ್ವಚ್ಛತಾ ಕಾರ್ಯ ಪೂರ್ಣಗೊಂಡ ನಂತರದ ಎರಡೂ ಜಿಪಿಎಸ್ ಫೋಟೋಗಳೊಂದಿಗೆ ಜಿಪಂಗೆ ವರದಿ ಸಲ್ಲಿಸಬೇಕು. ಕುಡಿಯುವ ನೀರಿನ ಪರೀಕ್ಷೆಗಳು ಶೇ.100 ರಷ್ಟಾಗಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಅಧಿಕಾರಿ, ಎಲ್ಲ ಗ್ರಾಪಂ ಪಿಡಿಓ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.