ಪ್ರಾದೇಶಿಕ ಸಾರಿಗೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿರುವ ಖಾಸಗಿ ಬಸ್, ಮಿನಿ ಬಸ್ ಹಾಗೂ ಮ್ಯಾಕ್ಸಿಕ್ಯಾಬ್‌ಗಳ ವಿವರ ಪಡೆದು ಟ್ರಿಪ್‌ಗಳ ವಿವರದೊಂದಿಗೆ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿರಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಗುರುವಾರ (ಮೇ ೨೦)ದಿಂದ ಆರಂಭಗೊಳ್ಳುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಸಗಿ ವಾಹನ ಮಾಲೀಕರ ಸಂಘ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಆರು ಬಸ್ ಡಿಪೋಗಳು ಇದ್ದು, ೫೦೯ ಸಾರಿಗೆ ಬಸ್‌ಗಳು ೪೯೩ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿವೆ. ಮುಷ್ಕರ ಘೋಷಣೆಯಾದರೂ ಸಾರಿಗೆ ನೌಕರರು ಮೇ ೨೦ರಂದು ಬಸ್‌ಗಳನ್ನು ಚಾಲನೆ ಮಾಡುವಂತೆ ಹಾಗೂ ಸಂಘಟನೆಯವರಿಗೆ ಸಹಕಾರ ನೀಡಲು ಮನವೊಲಿಸುವಂತೆ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ಶರಣ ಬಸವರಾಜ್ ಅವರಿಗೆ ತಿಳಿಸಿದರು.

ಪ್ರಾದೇಶಿಕ ಸಾರಿಗೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿರುವ ಖಾಸಗಿ ಬಸ್, ಮಿನಿ ಬಸ್ ಹಾಗೂ ಮ್ಯಾಕ್ಸಿಕ್ಯಾಬ್‌ಗಳ ವಿವರ ಪಡೆದು ಟ್ರಿಪ್‌ಗಳ ವಿವರದೊಂದಿಗೆ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿರಬೇಕು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಬಹುದು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ.ಶೋಭಾರಾಣಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ಶರಣ ಬಸವರಾಜ್ ಹಾಗೂ ಖಾಸಗಿ ಬಸ್ ಮಾಲೀಕರು ಉಪಸ್ಥಿತರಿದ್ದರು.