ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ ಜಿಲ್ಲೆಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಸಂಬಂಧ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದ್ದಾರೆ.
ಮುಖ್ಯ ಮಂತ್ರಿ ಫೆ.೨೪ ರಂದು ಜಿಲ್ಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಜಿಪಂ ಹೊಯ್ಸಳ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚನ್ನಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ವಿಹಾರಧಾಮ, ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿಯಲ್ಲಿ ನಿರ್ಮಿಸಿರುವ ಯಾತ್ರಿ ನಿವಾಸ, ಅಬಕಾರಿ ಇಲಾಖೆ ಕಚೇರಿ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಅಂಗನವಾಡಿ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ವಿವಿಧ ಅಭಿವೃದ್ಧಿ ನಿಗಮಗಳು ಹಾಗೂ ವಿವಿಧ ಇಲಾಖೆಗಳಲ್ಲಿ ಸವಲತ್ತು ವಿತರಣೆಗೆ ಆಯ್ಕೆಯಾಗಿರುವ ಫಲಾನುಭವಿಗಳ ಪಟ್ಟಿ ತಯಾರಿಸಿ ಎಂದು ತಿಳಿಸಿದರಲ್ಲದೆ, ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಲು ತಿಳಿಸಿದರು. ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿರ್ಮಿಸುತ್ತಿರುವ ೪೧ ಮನೆಗಳನ್ನು ಪೂರ್ಣಗೊಳಿಸಿ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಿ ಎಂದರು. ನಗರದ ರಸ್ತೆಗಳ ಗುಂಡಿ ಮುಚ್ಚುವ ಜೊತೆಗೆ ನಗರ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ನಗರೋತ್ಥಾನ, ಇಂದಿರಾ ಕ್ಯಾಂಟಿನ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುದಾನಕ್ಕೆ ಹೆಚ್ಚು ಒತ್ತು ನೀಡಿ ಶೇ.100 ಗುರಿ ಸಾಧಿಸುವಂತೆ ಸೂಚಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ. ೨೬, ೨೭ರಂದು ನಡೆಯುವ ಬೃಹತ್ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗಪಡೆದುಕೊಳ್ಳುವಂತೆ ಪ್ರಚಾರ ನೀಡುವಂತೆ ತಿಳಿಸಿದರು. ಜಿಪಂ ಸಿಇಒ ಬಿ.ಆರ್. ಪೂರ್ಣಿಮಾ, ಉಪ ಅರಣ್ಯಸಂರಕ್ಷಣಾಧಿಕಾರಿ ಸೌರಬ್ ಕುಮಾರ್,ಎಡಿಸಿ ಕೆ ಟಿ.ಶಾಂತಲಾ, ಎಎಸ್ಪಿ ವೆಂಕಟೇಶ್ ನಾಯ್ಡು ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.