ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ನೂತನ ಅಧ್ಯಕ್ಷ ಜೆ.ಯೋಗೇಶ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಜೆ.ಯೋಗೇಶ್ ಅಧಿಕಾರ ಸ್ವೀಕರಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ನೂತನ ಅಧ್ಯಕ್ಷ ಜೆ.ಯೋಗೇಶ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಿಳಿಸುವ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್‌.ಪುಟ್ಟಸ್ವಾಮಿ, ಎಂ.ಸಿ.ಬಸಪ್ಪ, ನಾಗರಾಜಮೂರ್ತಿ, ಎ.ಸಿದ್ದರಾಜು, ಸಿ.ಗುರುಸ್ವಾಮಿ. ಎಚ್.ಎಸ್‌.ಮಹದೇವಪ್ರಸಾದ್, ಕೆ.ಪಿ.ಸದಾಶಿವಮೂರ್ತಿ, ಪಿ.ಮರಿಸ್ವಾಮಿ, ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಅವರ ಪೈಕಿಯಲ್ಲಿ ಪರಿಶಿಷ್ಠ ಜಾತಿಯಿಂದ ಎ. ಸಿದ್ದರಾಜು ಅಧ್ಯಕ್ಷರಾಗಿದ್ದರು. ಈಗ ಹಿಂದುಳಿದ ವರ್ಗಗಳಿಂದ ಮೊಟ್ಟಮೊದಲ ಬಾರಿಗೆ ಜೆ.ಯೋಗೇಶ್ ಅವರಿಗೆ ಅವಕಾಶ ದೊರೆತಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದರು.ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ ಜೋಡೋ ಯಾತ್ರೆ ನಡೆಸಿದರು. ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆಗಾಗಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿ ಪಾದಯಾತ್ರೆ ನಡೆಸಿದರು. ಮಾಜಿ ಮುಖ್ಯಮಂತ್ರಿಗಳು ಆನೇಕ ಭಾಗ್ಯಗಳನ್ನು ಕೊಟ್ಟಿದ್ದರು. ನಂತರ ಪಂಚ ಗ್ಯಾರಂಟಿ ಯೋಜನೆ ಕಂದರು. ಈಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೂ ಗ್ಯಾರಂಟಿ, ರೈತ ಗ್ಯಾರಂಟಿ, ವಸತಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ ಈ ಎಲ್ಲವೂ ಜನಪರ ಕಾರ್ಯಕ್ರಮಗಳಾಗಿವೆ ಎಂದರು.

ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷ ಜೆ.ಯೋಗೇಶ್ ಮಾತನಾಡಿ, ಕಾಂಗ್ರೆಸ್‌ ಪಕ್ಷವು ಹಿಂದುಳಿದ ವರ್ಗಕ್ಕೆ ಸೇರಿದ ತಮಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿರುವುದು ಇತಿಹಾಸವಾಗಿದೆ. ಪಕ್ಷ ನೀಡಿದ ಜವಾಬ್ದಾರಿಗೆ ಆಭಾರಿಯಾಗಿದ್ದೇನೆ. ಪಕ್ಷದ ಕಟ್ಟಕಡೆಯ ಕಾರ್ಯಕರ್ತನನ್ನೂ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಈಗಾಗಲೇ ಜಿಲ್ಲೆಯು ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತಷ್ಟು ಸಂಘಟನೆ ಮಾಡಿ ಮುಂಬರುವ ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಯಲ್ಲೂ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಲಾಗುವುದು . ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ ಪ್ರಸಾದ್ ಮಾತನಾಡಿ, ಸ್ವಾತಂತ್ರ್ಯ ಹೋರಾಟದಿಂದಲ್ಲೂ ಕಾಂಗ್ರೆಸ್‌ಗೆ ಹೆಸರು ಇದೆ. ಬಿಜೆಪಿಗೆ ನರೇಂದ್ರಮೋದಿ ಬಂದ ಮೇಲೆ ಹೆಸರು ಇದೆ. ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದ್ದು, ಕಾಂಗ್ರೆಸ್‌ ಪಕ್ಷವನ್ನು ಅಲಿಸಲು ಯಾರಿಂದಲ್ಲೂ ಸಾಧ್ಯವಿಲ್ಲ.. ದೇಶಕ್ಕೆ ಕಾಂಗ್ರೆಸ್‌ ಮಾಡಿರುವ ಸೇವೆಯನ್ನು ಜನತೆ ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಪಿ.ಮರಿಸ್ವಾಮಿ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು, ಚಿಕ್ಕಮಹದೇವು, ಜಿಲ್ಲಾಧ್ಯಕ್ಷೆ ನಾಗರತ್ನ ಕೆಂಗಾಕಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮಧುಸೂದನ್, ಜಿ.ಪಂ.ಮಾಜಿ ಉಪಾಧ್ಯಕ್ಷ ಕೊಪ್ಪಾಳಿ ಮಹದೇವನಾಯಕ, ಮಾಜಿ ಸದಸ್ಯರಾದ ಶಿವಕುಮಾರ್, ಬಾಲರಾಜು, ಎಸ್.ಸೋಮನಾಯಕ, ಎಚ್.ಎಸ್.ನಂಜಪ್ಪ, ಈಶ್ವರ್, ಚೂಡಾ ಮಾಜಿ ಅಧ್ಯಕ್ಷ ಸೈಯದ್ ರಫೀ, ಲೋಕೇಶ್, ಮುಕುಂದವರ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಲತಾರಾಜಶೇಖರ್ ಇತರರು ಹಾಜರಿದ್ದರು.