ಹೊಸಕೋಟೆ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ತರಬಹಳ್ಳಿ ಮಂಜುನಾಥ್ ಅವರನ್ನು ಸರ್ವಾನುಮತದಿಂದ ನೇಮಕ ಮಾಡಲಾಗಿದೆ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ತಿಳಿಸಿದರು.

ನಗರದ ಕೇಂದ್ರ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ತರಬಹಳ್ಳಿ ಮಂಜುನಾಥ್ ಅವರಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, 6 ವರ್ಷಗಳ ಹಿಂದೆ ಸ್ಥಾಪನೆಯಾದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ಇಂದು ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಸಂಘಟನೆ ವಿಸ್ತರಿಸಿಕೊಂಡಿದೆ. ಸುಮಾರು ೪೨ ಸಾವಿರ ಸದಸ್ಯರನ್ನು ಹೊಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಯಾಧ್ಯಕ್ಷರಾಗಿ ಇದುವರೆಗೆ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಅನಾರೋಗ್ಯದ ಕಾರಣ ಅವರ ಜವಾಬ್ದಾರಿಯನ್ನು ತರಬಹಳ್ಳಿ ಮಂಜುನಾಥ್ ಅವರಿಗೆ ವಹಿಸಲಾಗಿದೆ. ನೂತನ ಜಿಲ್ಲಾಧ್ಯಕ್ಷ ಮಂಜುನಾಥ್ ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ತಾಲೂಕು ಅಧ್ಯಕ್ಷರನ್ನು ನೇಮಕ ಮಾಡುವ ಜೊತೆಗೆ ತಾಲೂಕು ಸಮಿತಿಗಳು ಹಾಗೂ ಜಿಲ್ಲಾ ಸಮಿತಿಯನ್ನು ರಚಿಸಬೇಕು ಎಂದರು.

ನೂತನ ಜಿಲ್ಲಾಧ್ಯಕ್ಷ ತರಬಹಳ್ಳಿ ಮಂಜುನಾಥ್ ಮಾತನಾಡಿ, ವೈಜ್ಞಾನಿಕ ಮನೋಭಾವವನ್ನು ಸಮಾಜದಲ್ಲಿ ಬೆಳೆಸುವ ಉದ್ದೇಶದಿಂದ ಸಂಘಟನೆಯನ್ನು ಗ್ರಾಮ ಮಟ್ಟಕ್ಕೂ ವಿಸ್ತರಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ ಪರಿಷತ್ತಿನ ಚಟುವಟಿಕೆಗಳು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಕಾಯೋನ್ಮುಖರಾಗುತ್ತೇನೆ. ಪರಿಷತ್ತಿನ ರಾಜ್ಯಾಧ್ಯಕ್ಷರು ತಮ್ಮ ಮೇಲಿಟ್ಟಿರುವ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿ, ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಸಂಘಟನೆ ಬಲಪಡಿಸುವುದರ ಜೊತೆಗೆ ವೈಜ್ಞಾನಿಕ ಚಿಂತನೆ, ವೈಜ್ಞಾನಿಕ ಮನೋಭಾವ ಮತ್ತು ಸಮಾಜಮುಖಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಂ.ಆರ್.ಉಮೇಶ್, ಪತ್ರಕರ್ತರಾದ ತಾವರೆಕರೆ ತೇಜಸ್, ಸೂಲಿಬೆಲೆ ಮಂಜುನಾಥ್ ಇತರರಿದ್ದರು.

ಫೋಟೋ: 24 ಹೆಚ್‌ಎಸ್‌ಕೆ 4


ಹೊಸಕೋಟೆ ತಾಲೂಕಿನ ತರಬಹಳ್ಳಿ ಮಂಜುನಾಥ್ ಟಿವೈ ಅವರನ್ನು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ಆದೇಶ ಪತ್ರ ವಿತರಿಸಿದರು.