ಸಾರಾಂಶ
ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ತಾವೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ತಾವೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು.ಕಳೆದ ಎರಡೂವರೆ ವರ್ಷಗಳಿಂದ ಕಾರಣಾಂತರಗಳಿಂದ ಮುಚ್ಚಲ್ಪಟ್ಟಿದ್ದ ಶಾಲೆಯನ್ನು ತಾವೂರು ಗ್ರಾಮಸ್ಥರು ಹಾಗೂ ಸಾರ್ವಜನಿಕರ ಮನವಿಯ ಮೇರೆಗೆ ಶಿಕ್ಷಣ ಇಲಾಖೆ ಪುನರ್ ಆರಂಭಿಸಿದೆ. ಪ್ರಸ್ತುತ ಶಾಲೆಗೆ ಆರು ಮಕ್ಕಳು ದಾಖಲಾಗಿದ್ದು, ಮಕ್ಕಳಿಗೆ ಶಾಲಾ ಕಿಟ್ ನೀಡುವುದರ ಮೂಲಕ ಶಾಸಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸದಲ್ಲಿ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಬದ್ಧವಾಗಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಡಿಡಿಪಿಐ ರಂಗಧಾಮಯ್ಯ, ಬಿಇಓ ದೊಡ್ಡೆಗೌಡರು, ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್, ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಕೆಪಿಸಿಸಿ ಸದಸ್ಯ ರಮಾನಾಥ್ ಬೇಕಲ್, ಊರಿನ ಪ್ರಮುಖರು, ಮತ್ತಿತರರು ಉಪಸ್ಥಿತರಿದ್ದರು. ರಸ್ತೆ ಉದ್ಘಾಟನೆ ಇದೇ ಸಂದರ್ಭ ಶಾಸಕರು ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 70 ಲಕ್ಷ ರು. ಗಳಲ್ಲಿ ಅಭಿವೃದ್ಧಿ ಹೊಂದಿದ ವಿವಿಧ ರಸ್ತೆಗಳನ್ನು ಉದ್ಘಾಟಿಸಿದರು. ತಾವೂರಿನ 4 ರಸ್ತೆಗಳು, ತಣ್ಣಿಮಾನಿಯ 2 ರಸ್ತೆಗಳು, ಚೇರಂಗಾಲದ 4 ರಸ್ತೆಗಳು, ಕೋರಂಗಾಲದ 1 ರಸ್ತೆಯನ್ನು ಉದ್ಘಾಟಿಸಿ, ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭ ಸಾರ್ವಜನಿಕರು ರಸ್ತೆ, ಮನೆ, ಮೋರಿ, ತಡೆಗೋಡೆ, ಕಾಲುಸೇತುವೆ, ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದರು.