ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ಕಲಾಸಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು : ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ಕಲಾಸಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಾವಳ್ಳಿ ನಿವಾಸಿ ಮೈಮೋನಿಸಾ(24) ಆತ್ಮಹತ್ಯೆ ಮಾಡಿಕೊಂಡವರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮೈಮೋನಿಸಾ ಪತಿ ಜುನೈದ್ (28) ಎಂಬಾತನನ್ನು ಬಂಧಿಸಲಾಗಿದೆ. ಶುಕ್ರವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೆ.ಸಿ.ನಗರ ನಿವಾಸಿ ಮೈಮೋನಿಸಾ
ಜೆ.ಸಿ.ನಗರ ನಿವಾಸಿ ಮೈಮೋನಿಸಾ ನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಖಾಸಗಿ ಕಂಪನಿ ಉದ್ಯೋಗಿ ಜುನೈದ್ಗೆ 2.5 ವರ್ಷಗಳ ಹಿಂದೆ, ಚಿನ್ನಾಭರಣ ಮತ್ತು ಲಕ್ಷಾಂತರ ರು. ನಗದು ಹಾಗೂ ಬೈಕ್ ಕೊಟ್ಟು ಮದುವೆ ಮಾಡಲಾಗಿತ್ತು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿತ್ತು. ಆ ಬಳಿಕ ಆರೋಪಿ ಜುನೈದ್, ವರದಕ್ಷಿಣೆ ತರುವಂತೆ ಪತ್ನಿಗೆ ಪೀಡಿಸುತ್ತಿದ್ದ. ಅಲ್ಲದೆ, ಜುನೈದ್ ಮಾವ ನಜೀರ್ ಅಹಮದ್ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದ. ಇದರೊಂದಿಗೆ ಪತಿ ಜುನೈದ್ ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ. ಅದರಿಂದ ಮಾನಸಿಕವಾಗಿ ಕುಗ್ಗಿದ ಮೈಮೋನಿಸಾ ಜು.17ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ.
ಜುನೈದ್ ವಿರುದ್ಧ ವರದಕ್ಷಿಣೆ ಕಿರುಕುಳ
ಘಟನೆ ಸಂಬಂಧ ಮೈಮೋನಿಸಾ ಪೋಷಕರು ಅಳಿಯ ಜುನೈದ್ ವಿರುದ್ಧ ವರದಕ್ಷಿಣೆ ಕಿರುಕುಳಕ್ಕೆ ಪುತ್ರಿ ಆತ್ಮ*ತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ದೂರಿನನ್ವಯ ಜುನೈದ್ನನ್ನು ಬಂಧಿಸಿ ಕೋರ್ಟ್ ಸೂಚನೆ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
