ಚನ್ನಪಟ್ಟಣ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಜಗತ್ತಿಗೆ ಮಾರ್ಗದರ್ಶನ ತೋರುವ ಮಹತ್ವದ ವೃತ್ತಿಯಾಗಿದೆ ಎಂದು ಪುಟ್ಟಸ್ವಾಮಿಗೌಡ (ಡಿಪಿಎಸ್) ಹೇಳಿದರು
ಚನ್ನಪಟ್ಟಣ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಜಗತ್ತಿಗೆ ಮಾರ್ಗದರ್ಶನ ತೋರುವ ಮಹತ್ವದ ವೃತ್ತಿಯಾಗಿದೆ ಎಂದು ಪುಟ್ಟಸ್ವಾಮಿಗೌಡ (ಡಿಪಿಎಸ್) ಹೇಳಿದರು.
ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ ವಿಕಾಸ ಪರಿಷತ್ ಕಣ್ವ ಶಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಕೌಟುಂಬಿಕ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಕರು ದೇಶದ ಭವಿಷ್ಯದ ನಾಯಕರನ್ನು ರೂಪಿಸುವ ಶಕ್ತಿ ಹೊಂದಿದ್ದಾರೆ. ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನದಲ್ಲಿ ಕಾಲಕ್ಕೆ ತಕ್ಕ ಕೌಶಲ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ರಂಗಸ್ವಾಮಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಬದುಕಿಗೆ ದಿಕ್ಕು ತೋರಿಸುವ ಮಾರ್ಗದರ್ಶಕರು. ಜ್ಞಾನ, ಮೌಲ್ಯ ಮತ್ತು ಸಂಸ್ಕಾರವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುತ್ತಿರುವ ಭಾರತ ವಿಕಾಸ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದರು.
ಉಪನ್ಯಾಸಕಿ ಶೈಲಜಾ ಮಾತನಾಡಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವುದು ಶಿಕ್ಷಕರಿಗೆ ದೇಶ ನೀಡಿರುವ ಗೌರವದ ಪ್ರತೀಕವಾಗಿದೆ. ಶಿಕ್ಷಕರ ದಿನಾಚರಣೆ ಕೇವಲ ಸನ್ಮಾನಕ್ಕೆ ಸೀಮಿತವಾಗದೆ, ಶಿಕ್ಷಕರು ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ಆತ್ಮಾವಲೋಕನ ಮಾಡಿಕೊಳ್ಳುವ ದಿನವಾಗಬೇಕು ಎಂದರು.ಭಾವಿಪ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ವಸಂತ್ ಕುಮಾರ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದ ಶಿಲ್ಪಿಗಳಾಗಿದ್ದು, ಶಿಕ್ಷಣದೊಂದಿಗೆ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಾಂತೀಯ ಉಪಾಧ್ಯಕ್ಷ ಗುರುಮಾದಯ್ಯ, ನಿವೃತ್ತ ಶಿಕ್ಷಕರಾದ ರೇಣುಕಾದೇವಿರಾಜು, ಲಲಿತಾ ನಾರಾಯಣಸ್ವಾಮಿ, ಸುಧಾಮಣಿ, ರೇಣುಕಾ ದೇವರಾಜು, ನಿವೃತ್ತ ಪಶುವೈದ್ಯಾಧಿಕಾರಿ ಜಯರಾಮು ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಅಧಿಕಾರಿ ಗಾಯತ್ರಿರವಿ ಅವರನ್ನು ಸನ್ಮಾನಿಸಲಾಯಿತು.ಭಾವಿಪ ಖಜಾಂಚಿ ವಿ.ಟಿ. ರಮೇಶ್, ವಿಭಾಗೀಯ ಸಂಚಾಲಕ ರಾ.ಶಿ. ಬಸವರಾಜ್, ವಿ.ಸಿ. ಚಂದ್ರೇಗೌಡ, ಯೋಗಾನಂದ, ಚೌ.ಪು. ಸ್ವಾಮಿ, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎಚ್. ಗೋವಿಂದಯ್ಯ, ಭಾವಿಪ ಕಾರ್ಯದರ್ಶಿ ಯೋಗೇಶ್ ಚಕ್ಕೆರೆ ಇದ್ದರು.
ಪೊಟೋ೮ಸಿಪಿಟಿ೩: ಚನ್ನಪಟ್ಟಣದಲ್ಲಿ ಭಾರತ ವಿಕಾಸ ಪರಿಷತ್ ಕಣ್ವ ಶಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಕೌಟುಂಬಿಕ ಸಭೆಯಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.