ಶಿಕ್ಷಕರು ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯ ಬೆಳೆಸಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಶೇ.100ಕ್ಕೆ ಪಡೆಯುವಂತೆ ಶಿಕ್ಷಕರು ಶ್ರಮಿಸಬೇಕು.
ಹುಬ್ಬಳ್ಳಿ:
ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ಅಜ್ಞಾನದಿಂದ ಸುಜ್ಞಾನದತ್ತ ಕರೆದೊಯ್ಯುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕುವ ಶಕ್ತಿಯಾಗಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.ಇಲ್ಲಿನ ನ್ಯೂ ಇಂಗ್ಲಿಷ್ ಶಾಲೆ ಬಳಿಯ ಬಾಬು ಜಗಜೀವನರಾಂ ಭವನದಲ್ಲಿ ಶನಿವಾರ ಆಯೋಜಿಸಿದ್ದ ಶಹರ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯ ಬೆಳೆಸಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಶೇ.100ಕ್ಕೆ ಪಡೆಯುವಂತೆ ಶಿಕ್ಷಕರು ಶ್ರಮಿಸಬೇಕು ಎಂದು ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಮಾತನಾಡಿ, ಸಾವಿತ್ರಿಬಾಯಿ ಫುಲೆ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಶಿಕ್ಷಣ ಕ್ಷೇತ್ರದ ಕೊಡುಗೆ ಅಪಾರವಾಗಿದ್ದು, ಶಿಕ್ಷಣವು ಜಾತೀಯತೆ ಮತ್ತು ಖಾಸಗೀಕರಣದ ಮನೋಭಾವದಿಂದ ಮುಕ್ತವಾಗಬೇಕು ಎಂದರು.ಹೊಸಮಠದ ಚಂದ್ರಶೇಖರ ಶಿವಯೋಗಿ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಇದೇ ವೇಳೆ ಹಲವು ಶಿಕ್ಷಕರು ಹಾಗೂ ಸಂಘಟಕರನ್ನು ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ಮಹಾಂತೇಶ ಬಳ್ಳಾರಿ ರಚಿಸಿದ ‘ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಕೈಪಿಡಿ’ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಹೇಶ ಗಸ್ತೆ, ಶಹರ ಬಿಇಒ ಹನುಮಂತ ಫಡ್ನೇಶಿ, ನಜೀರ ಹೊನ್ಯಾಳ, ಪ್ರಹ್ಲಾದ ಗೆಜ್ಜೆ, ಉಪನ್ಯಾಸಕ ಎಸ್.ಬಿ. ದೊಡ್ಡಣವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.