ಸಾರಾಂಶ
ಕನ್ನಡಪ್ರಭವಾರ್ತೆ ಔರಾದ್
ಮಕ್ಕಳಿಗೆ ವಿದ್ಯೆ, ಬುದ್ದಿ ಕಲಿಸಿ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಅಭಿವೃದ್ಧಿಯ ರುವಾರಿಗಳು ಎಂದು ಶಾಸಕ ಪ್ರಭು ಬಿ.ಚವ್ಹಾಣ ತಿಳಿಸಿದರು.ಶಾಲಾ ಶಿಕ್ಷಣ ಇಲಾಖೆಯಿಂದ ಸೆ.13ರಂದು ಔರಾದ್(ಬಿ) ಪಟ್ಟಣದ ಡಾ.ಗುರುಪಾದಪ್ಪ ಕಲ್ಯಾಣ ಮಂಟಪದಲ್ಲಿ ನಡೆದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಔರಾದ್ (ಬಿ) ವಿಧಾನಸಭಾ ಕ್ಷೇತ್ರ ಸಾಕಷ್ಟು ಸುಧಾರಣೆ ಕಂಡಿದೆ. ಇದರಲ್ಲಿ ಶಿಕ್ಷಕರ ಪಾತ್ರವೂ ಹೆಚ್ಚಿದೆ. ಕ್ಷೇತ್ರದಲ್ಲಿ ಶಿಕ್ಷಕರು ಸರಿಯಾಗಿ ಕೆಲಸ ಮಾಡುತ್ತಿದ್ದು, ಶಿಕ್ಷಣ ಕ್ಷೇತ್ರ ಸಾಕಷ್ಟು ಸುಧಾರಿಸಿದೆ. ಫಲಿತಾಂಶ ಸುಧಾರಣೆಯಲ್ಲಿ ಇನ್ನಷ್ಟು ಪ್ರಯತ್ನ ಹಾಕಬೇಕು. ಮುಂಬರುವ ದಿನಗಳಲ್ಲಿ ಔರಾದ್ (ಬಿ) ಹಾಗೂ ಕಮಲ ನಗರ ತಾಲ್ಲೂಕುಗಳು ಫಲಿತಾಂಶದಲ್ಲಿ ನಂ.1 ಮಾಡಬೇಕೆಂಬ ಅಭಿಲಾಶೆಯಿದೆ. ಶಿಕ್ಷಕರು ಇದಕ್ಕೆ ಸಹಕರಿಸಬೇಕು. ಶೇ.100ರಷ್ಟು ಫಲಿತಾಂಶ ಕೊಡುವು ದಾಗಿ ಪ್ರಮಾಣ ಮಾಡಬೇಕೆಂದು ಶಾಸಕರು ತಿಳಿಸಿದರು.ಶಿಕ್ಷಕರ ಮೇಲೆ ನನಗೆ ಅತ್ಯಂತ ಗೌರವವಿದೆ. ಅದಕ್ಕೆಂದೇ 2009 ರಿಂದ ನಿರಂತರವಾಗಿ ಶಿಕ್ಷಕರನ್ನು ಸನ್ಮಾನಿಸುತ್ತಾ ಬರುತ್ತಿದ್ದು, ಯಾವುದೇ ಅಡ್ಡಿ ಆತಂಕ ಗಳು ಬಂದರೂ ಶಿಕ್ಷಕರು, ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕೆಲಸ ನಿಲ್ಲಿಸುವುದಿಲ್ಲ ಎಂದರು.
ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಸುಧಾರಣೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಸಾಕಷ್ಟಿದೆ. ಶಿಕ್ಷಕರು ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದರು.ಈ ಬಾರಿ ಅತಿ ಹೆಚ್ಚು ಮಳೆಯಾಗಿದ್ದು, ರೈತರ ಬಹಳಷ್ಟು ಬೆಳೆ ಹಾನಿಯಾಗಿದೆ. ಅವರಿಗೆ ಸೂಕ್ತ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿದ್ದು, ರೈತರ ಕೈ ಬಲಪಡಿಸಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ನಿರಂತರ ಕೆಲಸ ಮಾಡುತ್ತೇನೆ. ಔರಾದ್ (ಬಿ) ತಾಲ್ಲೂಕಿನ ಸಮಗ್ರ ಅಭಿವೃದ್ಧಿಪಡಿಸುವ ಸಂಕಲ್ಪದೊಂದಿಗೆ ಮುಂದುವರೆದಿದ್ದು, ಇದಕ್ಕೆ ಶಿಕ್ಷಕರ ಸಹಕಾರ ಅವಶ್ಯಕ ಎಂದು ತಿಳಿಸಿದರು.
ಠಾಣಾಕುಶನೂರ ಮಠದ ಸಿದ್ಧಲಿಂಗ ಸ್ವಾಮಿ, ಭಾಲ್ಕಿ ಹಿರೇಮಠದ ಮಹಾಲಿಂಗ ಸ್ವಾಮಿ, ಹೆಡಗಾಪೂರ ಮಠದ ಕೇದಾರನಾಥ ಶಿವಾಚಾರ್ಯರು, ಗುಡಪಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.ಔರಾದ್ (ಬಿ) ಪಟ್ಟಣ ಪಂಚಾಯತ್ ಅಧ್ಯಕ್ಷೆ ಸರುಬಾಯಿ ಘೂಳೆ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗುರುಪ್ರಸಾದ, ತಹಸೀಲ್ದಾರ್ ಮಹೇಶ ಪಾಟೀಲ, ತಾ.ಪಂ ಅಧಿಕಾರಿಗಳಾದ ಕಿರಣ ಪಾಟೀಲ, ಹಣಮಂತರಾಯ ಕೌಟಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ. ರಂಗೇಶ, ಪಿ.ಎಂ. ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಸಹಾಯಕ ನಿರ್ದೇಶಕ ಧೂಳಪ್ಪ ಮಳೆನೂರ, ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ ರಾಠೋಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಯಶವಂತ ಡೊಂಬಾಳೆ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರರೆಡ್ಡಿ ಮಾಲಿ ಪಾಟೀಲ, ಜಿಲ್ಲಾ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ, ಸಂಘದ ಪ್ರಮುಖರು ಇದ್ದರು.
ಔರಾದ್ (ಬಿ) ಹಾಗೂ ಕಮಲನಗರ ತಾಲ್ಲೂಕಿನ ನಿವೃತ್ತ ಶಿಕ್ಷಕರು, ಮರಣ ಹೊಂದಿದ ಶಿಕ್ಷಕರ ಅವಲಂಬಿತರು ಹಾಗೂ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ-ಕಾಲೇಜಗಳ ಸುಮಾರು 3 ಸಾವಿರ ಶಿಕ್ಷಕರನ್ನು ಸನ್ಮಾನಿಸಲಾಯಿತು.