ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಣ ನೀತಿ, ಮೂಲ ಸೌಕರ್ಯಗಳ, ಬೋದನ ಕ್ರಮದ ಬಿಕ್ಕಟ್ಟುಗಳಿವೆ. ಶಿಕ್ಷಣ ವ್ಯವಸ್ಥೆಯ ಶಕ್ತಿ, ದೌರ್ಬಲ್ಯಗಳನ್ನು ಅರ್ಥೈಸಿಕೊಂಡು ಮಕ್ಕಳಿಗೆ ಪಾಠ ಪ್ರವಚನ ಮಾಡಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಶಿಕ್ಷಣ ಕ್ಷೇತ್ರದಲ್ಲಿನ ಹಲವು ಸಮಸ್ಯೆಗಳನ್ನು ಅರ್ಥೈಸಿಕೊಂಡು ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡಬೇಕು ಎಂದು ಶಿಕ್ಷಣ ಚಿಂತಕ, ಲೇಖಕ ಶ್ರೀಪಾದಭಟ್ ಹೇಳಿದರು.

ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ ನಡೆದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರುಗಳಿಗೆ ಅಭಿನಂದನೆ ಸಮಾರಂಭದಲ್ಲಿ ಮಾತನಾಡಿ, ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಣ ನೀತಿ, ಮೂಲ ಸೌಕರ್ಯಗಳ, ಬೋದನ ಕ್ರಮದ ಬಿಕ್ಕಟ್ಟುಗಳಿವೆ. ಶಿಕ್ಷಣ ವ್ಯವಸ್ಥೆಯ ಶಕ್ತಿ, ದೌರ್ಬಲ್ಯಗಳನ್ನು ಅರ್ಥೈಸಿಕೊಂಡು ಮಕ್ಕಳಿಗೆ ಪಾಠ ಪ್ರವಚನ ಮಾಡಬೇಕು ಎಂದರು.

ದೇಶದಲ್ಲಿ ಗುಣಮಟ್ಟದ ಶಿಕ್ಷಣ ಯಾವುದು ಎನ್ನುವುದನ್ನು ನಿರ್ಧಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಶಿಕ್ಷಣ ಸಾರ್ವತ್ರಿಕರಣಗೊಂಡಿದೆಯೇ ಎಂಬ ಪ್ರಶ್ನೆಗಳು ನಮ್ಮಮುಂದಿದೆ. ಶಿಕ್ಷಣ ವ್ಯವಸ್ಥೆ ಸಾರ್ವತ್ರಿಕರಣಗೊಳ್ಳಬೇಕಾಗಿದೆ ಎಂದರು.

ರಾಜ್ಯದಲ್ಲಿ 45 ಸಾವಿರಕ್ಕೂ ಅಧಿಕ ಶಿಕ್ಷಕರ ನೇಮಕಾತಿಯಾಗಬೇಕಿದೆ. ಶಿಕ್ಷಕರೇ ಇಲ್ಲದಂತಹ ಶಾಲೆಗಳಲ್ಲಿ ಯಾವ ರೀತಿ ಗುಣಮಟ್ಟದ ಶಿಕ್ಷಣ ಗುರುತಿಸಲು ಸಾಧ್ಯ. ಪ್ರತಿ ವರ್ಷದ ಶೇ.60ರಷ್ಟು ಮಕ್ಕಳು ಹಲವಾರು ಕಾರಣಗಳಿಂದ ಶಿಕ್ಷಣ ವಂಚಿತರಾಗುತ್ತಿದ್ದಾರೆ. ಅಲ್ಲದೇ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚುತ್ತಿವೆ. ಇದಕ್ಕೆ ಸರಕಾರ ಶಾಲೆಗಳ ಅಭಿವೃದ್ಧಿಗೆ ನೀಡುತ್ತಿರುವ ಅನುದಾನ ಕಡಿಮೆಯಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚಿನ ಅನುದಾನ ನೀಡಬೇಕಾಗಿದೆ ಎಂದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸಿ ದೇಶದ ಪ್ರಗತಿ ಸಾಧನೆ ಮಾಡುವುದರಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಪ್ರಸ್ತುತ ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಕರು ಮಹತ್ತರವಾದ ಹೆಜ್ಜೆ ಇಡಬೇಕು. ಶಿಕ್ಷಕ ವೃತ್ತಿ ಬಹಳ ಕಷ್ಟಕರವಾದ ವೃತ್ತಿಯಾಗಿದೆ. ಮಕ್ಕಳ ಗಲಾಟೆಯನ್ನು ಹತೋಟಿಗೆ ತೆಗೆದುಕೊಂಡು ಪಾಠ ಮಾಡುತ್ತಿರುವ ಶಿಕ್ಷಕರ ಶ್ರಮ ಶ್ಲಾಘನೀಯವಾಗಿದೆ ಎಂದರು.

ಇದೇ ವೇಳೆ ನಿವೃತ್ತ ಶಿಕ್ಷಕರುಗಳಿಗೆ ಹಾಗೂ ಉತ್ತಮ ಶಿಕ್ಷಕರನ್ನು ಗುರುತಿಸಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಬಿಇಒ ಧರ್ಮಶೆಟ್ಟಿ, ಬಿಆರ್ ಸಿ ಪ್ರಕಾಶ್, ಶಿಕ್ಷಣ ಪರಿವೀಕ್ಷಕ ಕಡತನಾಳು ಶ್ರೀನಿವಾಸ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.