ಆಯುಕ್ತರ ಆದೇಶದಂತೆ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವಂತೆ ಮನವಿ ಸಲ್ಲಿಕೆಯಾಗಿದೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಗಿದೆ.
- ಹಿರಿಯ ಶಿಕ್ಷಕರು ಬಡ್ತಿಯಿಲ್ಲದೇ ನಿವೃತ್ತಿ: ಕಳವಳ
---ಕನ್ನಡಪ್ರಭ ವಾರ್ತೆ ಚಾಮರಾಜನಗರ
ಆಯುಕ್ತರ ಆದೇಶದಂತೆ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವಂತೆ ಮನವಿ ಸಲ್ಲಿಕೆಯಾಗಿದೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಗಿದೆ.2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಕುರಿತು ಮಾ.18ರಂದು ಆಯುಕ್ತರಿಂದ ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೆಶಕರಿಗೆ (ಆಡಳಿತ) ಆದೇಶಿಸಲಾಗಿದೆ.
ಸುಮಾರು ವರ್ಷಗಳಿಂದ ಬಡ್ತಿ ನಿಂತಿದ್ದರಿಂದ ಜಿಲ್ಲೆಯಲ್ಲಿ ಬಡ್ತಿಯಿಂದ ವಂಚಿತರಾಗಿ ಅನೇಕ ಹಿರಿಯ ಶಿಕ್ಷಕರು ನಿವೃತ್ತಿಯನ್ನು ಹೊಂದಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಸಾಕಷ್ಟು ಮುಖ್ಯ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅನೇಕ ಹಿರಿಯ ಸಹ ಶಿಕ್ಷಕರು ನಿವೃತ್ತಿಯ ಅಂಚಿನಲ್ಲಿದ್ದಾರೆ. ನಮ್ಮೆಲ್ಲರ ಆಶಯದಂತೆ ಬಡ್ತಿ ಆರಂಭವಾಗಿದೆ. ಶಾಲಾ ಆಡಳಿತಾತ್ಮಕ ಹಿತದೃಷ್ಠಿಯಿಂದಲೂ ಬಹುಬೇಗ ಮುಗಿಸಬೇಕಿದೆ ಎಂದು ಮನವರಿಕೆ ಮಾಡಿದ್ದಾರೆ.ಆದ್ದರಿಂದ, ಜಿಲ್ಲೆಯಲ್ಲಿ ಬಡ್ತಿ ನೀಡುವ ಸಮಕ್ಷಮ ಪ್ರಾಧಿಕಾರಿಗಳು ತಾವೇ ಆಗಿರುವುದರಿಂದ ದಯಮಾಡಿ ಜ.1ರಲ್ಲಿದ್ದಂತೆ ಜಿಲ್ಲೆಯ ಜ್ಯೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿ, ನಂತರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ, ಅಂತಿಮ ಅರ್ಹತಾ ಪಟ್ಟಿ ತಯಾರಿಸಿ, ಬಡ್ತಿ ಪ್ರಕ್ರಿಯೆ ನಡೆಸುವ ವೇಳಾಪಟ್ಟಿಯನ್ನು ತಕ್ಷಣ ಬಿಡುಗಡೆ ಮಾಡಬೇಕು. ಶೀಘ್ರವಾಗಿ ಕೌನ್ಸಿಲಿಂಗ್ ಪೂರ್ಣಗೊಳಿಸಲು ಕೋರಿದ್ದಾರೆ. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್. ಮಾದಪ್ಪ, ಪ್ರಧಾನ ಕಾರ್ಯ ದರ್ಶಿ ಮಹಾದೇವಸ್ವಾಮಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಚಾಮರಾಜನಗರ ತಾಲೂಕು ಅಧ್ಯಕ್ಷ ಸಿ.ಕೆ. ರಾಮಸ್ವಾಮಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಶಿವಪ್ರಸಾದ್, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ನಂದೀಶ್, ಯಳಂದೂರು ತಾಲೂಕು ಅಧ್ಯಕ್ಷ ಸೋಮಣ್ಣ, ಕಾರ್ಯದರ್ಶಿ ನಾಗರಾಜು, ಹನೂರು ತಾಲೂಕು ಕಾರ್ಯದರ್ಶಿ ನಾಗ ಸುಂದರ, ಪದಾಧಿಕಾರಿಗಳಾದ ಎಂ.ಡಿ. ಮಹದೇವಯ್ಯ, ಭರತ್ ಭೂಷಣ್, ಶಾಂತರಾಜು, ಮಹಾದೇವ ಸ್ವಾಮಿ, ಕೃಷ್ಣಮೂರ್ತಿ, ಪುಟ್ಟಸ್ವಾಮಿ, ಸಮೀವುಲ್ಲಾ, ಧನಂಜಯ ಇತರರು ಹಾಜರಿದ್ದರು.---
29ಸಿಎಚ್ಎನ್13ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.