ಸಾರಾಂಶ
ಕನ್ನಡಪ್ರಭ ವಾರ್ತೆ ಕಾರಟಗಿ
ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮ ಮರು ಪರಿಶೀಲಿಸಿ ತಿದ್ದುಪಡಿ ಮಾಡುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಸೇವಾ ಜೇಷ್ಠತೆಯೊಂದಿಗೆ ವಿಲೀನಗೊಳಿಸಬೇಕೆಂದು ಆಗ್ರಹಿಸಿ ಶಿಕ್ಷಕರ ಸಂಘ ಪೋಸ್ಟರ್ ಬಿಡುಗಡೆ ಮಾಡಿದೆ.ಆ ಹಿನ್ನೆಲೆ ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಆವರಣದಲ್ಲಿ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿದರು. ಸಂಘದ ರಾಜ್ಯ ಉಪಾಧ್ಯಕ್ಷ ಚನ್ನಬಸಪ್ಪ ವಕ್ಕಳದ್ ಮಾತನಾಡಿ, ಕಳೆದ ಆರೇಳು ವರ್ಷಗಳಿಂದ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅಳವಡಿಸಿರುವ ಅವೈಜ್ಞಾನಿಕ ಅಂಶಗಳಿಂದ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾನಿರತ ಪದವೀಧರ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯದ ಬಗೆಗೆ ಹಲವು ಬಾರಿ ಜಿಲ್ಲಾ ಮತ್ತು ರಾಜ್ಯಮಟ್ಟದ ಹಂತದಲ್ಲಿ ಸಂಬಂಧಿಸಿದ ಎಲ್ಲರಿಗೂ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರೂ ಸ್ಪಂದಿಸದೇ ಇರುವುದರಿಂದ ಈಗ ಮತ್ತೊಮ್ಮೆ ಪ್ರತಿಭಟನೆಗೆ ಇಳಿಯಬೇಕಾಗಿದೆ. ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಈ ನಿಟ್ಟಿನಲ್ಲಿ ಪುನ: ೨೦೧೭ರ ಸೇವಾ ನಿಯಮಗಳನ್ನು ಪರಿಶೀಲಿಸಿ ಮರುರಚಿಸುವ ಮೂಲಕ ಸಾಮಾಜಿಕ ತಾರತಮ್ಯ ಸರಿಪಡಿಸಬೇಕು. ಪಿಎಸ್ಟಿ ಶಿಕ್ಷಕರನ್ನು ಜಿಪಿಟಿ ಹುದ್ದೆಗಳಿಗಾಗಿ ಸೇವಾ ಜೇಷ್ಠತೆಯೊಂದಿಗೆ ವಿಲೀನಗೊಳಿಸುವ ಮೂಲಕ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಆ. ೧೨ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುತ್ತಿದೆ ಎಂದರು.
ಈ ವೇಳೆ ಶಿಕ್ಷಕರ ಪತ್ತಿನ ಸಹಕಾರ ಸಂಘದ ಬಸವರಾಜ ರ್ಯಾವಳದ್, ಶಿಕ್ಷಕರ ಸಂಘದ ಅಧ್ಯಕ್ಷ ವಿಠ್ಠಲ್ ಜೀರಗಾಳಿ, ದ್ಯಾಮಣ್ಣ ಬೆನಕಟ್ಟಿ, ಮಹ್ಮದ್ ರಫಿ, ಸಣ್ಣ ಯಮನಪ್ಪ, ಮುತ್ತಣ್ಣ, ಜಟಿಂಗರಾಯ ದಳವಾಯಿ, ಪ್ರಕಾಶ್, ಭೀಮರಾಯ ಬಂಗಾರಿ, ಸುರೇಶ್ ಬೆಟಗೇರಿ, ಪ್ರಸನ್ನಕುಮಾರ್ ಸೇರಿ ಇತರರಿದ್ದರು.