ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ನಡುವೆ ಸೇತುವೆಯಂತೆ ಕೆಲಸ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಸಲಹೆ ನೀಡಿದರು.

ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಬಿ. ನಂಜುಂಡಪ್ಪ, ಪ್ರಧಾನ ಕಾರ್ಯದರ್ಶಿ ಶಿಲ್ಪಕುಮಾರಿ, ಖಜಾಂಚಿ ಹೇಮರಾಜ್ ಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ. 3 ಸಾಮಾನ್ಯ ಸ್ಥಾನ ಹಾಗೂ ಒಬ್ಬ ಮಹಿಳೆ ಸ್ಥಾನಕ್ಕಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಪಾರದರ್ಶಕವಾಗಿ ನಡೆಸಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಎಲ್ಲಾ ನೀತಿ, ನಿಯಮ ಪಾಲಿಸಿದ್ದೇವೆ. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 3 ನೇ ಅವಧಿಗೆ ಆಯ್ಕೆಯಾದ ಅಧ್ಯಕ್ಷ ಬಿ.ನಂಜುಂಡಪ್ಪ ಅವರನ್ನು ಅಭಿನಂದಿಸುತ್ತೇನೆ. ಈ ವರ್ಷ ಎಸ್.ಎಸ್.ಎಲ್.ಸಿ.ಯಲ್ಲಿ ಜಿಲ್ಲೆಯಲ್ಲಿ 2 ನೇ ಸ್ಥಾನ ಪಡೆದಿದ್ದು ಉತ್ತಮ ಫಲಿತಾಂಶಕ್ಕೆ ಎಲ್ಲರೂ ಸಹಕಾರ ನೀಡಿದ್ದಾರೆ ಎಂದರು.

ಅತಿಥಿಯಾಗಿದ್ದ ಭಡ್ತಿ ಮುಖ್ಯೋಪಾಧ್ಯಾಯರ ಸಂಘದ ರಾಜ್ಯ ಉಪಾಧ್ಯಕ್ಷ ಅಶೋಕ್ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ 50 ಶಿಕ್ಷಕರಿಗೆ ಒಬ್ಬರಂತೆ ನಿರ್ದೇಶಕರ ಆಯ್ಕೆ ಮಾಡುತ್ತೇವೆ. ಎನ್.ಆರ್.ಪುರ ತಾಲೂಕಿನಲ್ಲಿ 4 ನಿರ್ದೇಶ ಕರನ್ನು ಚುನಾವಣೆ ಮೂಲಕ ಹಾಗೂ ಮೂವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಚುನಾವಣೆ ನಂತರ ಎಲ್ಲಾ ಶಿಕ್ಷಕರು ಒಂದು ತಂಡವಾಗಿ ಕೆಲಸ ಮಾಡಬೇಕು. ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷರಾಗಿ ಆಯ್ಕೆಯಾದ ಬಿ.ನಂಜುಂಡಪ್ಪ ಮಾತನಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಚುನಾವಣಾಧಿ ಕಾರಿಯಾಗಿ ಪಾರದರ್ಶಕವಾಗಿ ಚುನಾವಣೆ ನಡೆಸಿದ್ದಾರೆ. ಶಿಕ್ಷಕರು ನನ್ನನ್ನು 3 ನೇ ಬಾರಿಗೆ ನಿರ್ದೇಶಕರನ್ನಾಗಿ ಗೆಲ್ಲಿಸಿದ್ದಾರೆ. ನಾನು 3 ನೇ ಬಾರಿಗೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು ನಾನೊಬ್ಬ ಜನ ಸೇವಕನಂತೆ ಕೆಲಸ ಮಾಡುತ್ತೇನೆ ಎಂದರು.


ವೇದಿಕೆಯಲ್ಲಿ ಶಿಕ್ಷಣ ಇಲಾಖೆ ವ್ಯವಸ್ಥಾಪಕ ಜಯರಾಂ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಸೇವ್ಯಾ ನಾಯಕ್,ಇ.ಸಿ.ಓ ರಂಗಪ್ಪಇದ್ದರು.ಮಂಜಪ್ಪ ಸ್ವಾಗತಿಸಿದರು.ರಾಜಾನಾಯಕ್ ಕಾರ್ಯಕ್ರಮ ನಿರೂಪಿಸಿದರು.

-- ಬಾಕ್ಸ್--

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಂಜುಂಡಪ್ಪ 2014 ರಿಂದ ಸತತ 3 ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧಿಸಿದ್ದಾರೆ.

ಗುರುವಾರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. 3 ಸ್ಥಾನಕ್ಕಾಗಿ 3 ನಿರ್ದೇಶಕರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಚುನಾವಣಾಧಿಕಾರಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಅಧ್ಯಕ್ಷರಾಗಿ ಬಿ.ನಂಜುಂಡಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪಕುಮಾರಿ, ಖಜಾಂಚಿಯಾಗಿ ಹೇಮರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.