ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಅಂತಹವರಿಗೆ ನಮ್ಮ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿ ಹೇಳಬೇಕು ಎಂದು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಕಾರ್ಯಕರ್ತರಿಗೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಅಂತಹವರಿಗೆ ನಮ್ಮ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿ ಹೇಳಬೇಕು ಎಂದು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಕಾರ್ಯಕರ್ತರಿಗೆ ಮನವಿ ಮಾಡಿದರು.

ನಗರದ ಎನ್‌ಎಸ್‌ಎಫ್ ಕಚೇರಿಯಲ್ಲಿ ಮಂಗಳವಾರ ಅರಭಾವಿ ಮಂಡಲ ಬಿಜೆಪಿ ಘಟಕದಿಂದ ಹಮ್ಮಿಕೊಂಡಿರುವ ವಿಬಿ- ಜೀ ರಾಮ್ ಜೀ ಜನ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಯಾವಾಗ ಮಹಾತ್ಮಾ ಗಾಂಧಿ ಹೆಸರು ಬದಲಾಯಿಸಿ ಅದರಲ್ಲಿ ರಾಮ್ ಹೆಸರು ಸೇರಿತೋ ಆ ಕ್ಷಣದಿಂದ ಕಾಂಗ್ರೆಸ್ಸಿನಲ್ಲಿ ನಡುಕ ಹುಟ್ಟಿದೆ ಎಂದು ವ್ಯಂಗ್ಯವಾಗಿ ನುಡಿದರು.ಈ ಮೊದಲಿದ್ದ ಎಂ ನರೇಗಾ ಯೋಜನೆಯಲ್ಲಿ ಕೇವಲ 100 ದಿನಗಳ ಉದ್ಯೋಗವಿತ್ತು. ಆದರೆ, ನಮ್ಮ ಕೇಂದ್ರ ಸರ್ಕಾರವು 125 ದಿನಗಳತನಕ ಉದ್ಯೋಗ ನೀಡಲಿದ್ದು, ಜತೆಗೆ ಕಾರ್ಮಿಕರಿಗೂ ಹೆಚ್ಚಿನ ದಿನಗೂಲಿ ನೀಡಲಿದೆ. 2047ರ ವಿಕಸಿತ ಭಾರತದತ್ತ ದೂರದೃಷ್ಟಿ ಕೋನವನ್ನು ಇಟ್ಟುಕೊಂಡು ಗ್ರಾಮೀಣ ಉದ್ಯೋಗ ಸೃಷ್ಟಿಸಲಿದೆ. ಕೇಂದ್ರ ಸರ್ಕಾರವು ಇದಕ್ಕೆ ಶೇ.60 ರಷ್ಟು ಅನುದಾನವನ್ನು ನೀಡಲಿದೆ. ಆದರೆ, ಕಾಂಗ್ರೆಸ್ ಪಕ್ಷದವರು ಹೆಸರು ಬದಲಾವಣೆಯ ನೆಪವೊಡ್ಡಿ ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ. ಮಹಾತ್ಮಾ ಗಾಂಧಿ ಬದಲು ಜೀ ರಾಮ್ ಜೀ ಹೆಸರು ಬದಲಾಯಿಸಿದ್ದೇ ಇದಕ್ಕೆ ಕಾರಣವಾಗಿದೆ. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುವ ಕೆಲಸವನ್ನು ಮಾಡುವಂತೆಯೂ ತಿಳಿಸಿದರು.2013ರ ಬಜೆಟಿನಲ್ಲಿ ಮನ್ ರೇಗಾ ಯೋಜನೆಗೆ ಮೀಸಲಿಟ್ಟ ಹಣ ₹33 ಸಾವಿರ ಕೋಟಿ ಆದರೀಗ ಪ್ರಸ್ತುತ ₹2.18 ಲಕ್ಷ ಕೋಟಿ ಮೀಸಲಿಟ್ಟಿದೆ. ಕಾಂಗ್ರೆಸ್ಸಿನ ಅಪಪ್ರಚಾರಕ್ಕೆ ಕಿವಿಗೋಡದೇ ಮೋದಿಯವರ ವಿಕಸಿತ ಭಾರತ ನಿರ್ಮಾಣದ ಕನಸನ್ನು ಸಾಕಾರಗೊಳಿಸುವಂತೆ ತಿಳಿಸಿದರು.ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ದೊಡ್ಡಗೌಡರ ಮಾತನಾಡಿ, ಸರ್ಕಾರಿ ನೌಕರರಿಗೆ ವೇತನ ನೀಡುತ್ತಿಲ್ಲ. ಎಲ್ಲ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಹಾಕಿದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅನುದಾನ ಸಿಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಸಕರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ, ಜಿಪಂ ಮಾಜಿ ಸದಸ್ಯರಾದ ವಿಠ್ಠಲ ಸವದತ್ತಿ, ಶಂಕರ ಬಿಲಕುಂದಿ, ಜಿಲ್ಲಾ ಉಪಾಧ್ಯಕ್ಷ ಮುತ್ತೆಪ್ಪ ಮನ್ನಾಪೂರ, ಮುತ್ತೆಪ್ಪ ಕುಳ್ಳೂರ, ಪರಸಪ್ಪ ಬಬಲಿ, ಪ್ರಮೋದ ನುಗ್ಗಾನಟ್ಟಿ, ಪದಾಧಿಕಾರಿಗಳು, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.