ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ., ಪ್ಲೇಸ್ಮೆಂಟ್ ಸೆಲ್ ಹಾಗೂ ಟೈಮ್ ಇನ್ಸ್ಟಿಟ್ಯೂಟ್ ಉಡುಪಿ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಮಾಹಿತಿ ಕಾರ್ಯಾಗಾರ ನಡೆಯಿತು.ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ, ವಿದ್ಯಾರ್ಥಿಗಳಿಗೆ ಪಠ್ಯ, ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಅವಕಾಶ ಕಲ್ಪಿಸಿ ಕೊಡುವ ಮೂಲಕ ಕಡಿಮೆ ವೆಚ್ಚದ ಶಿಕ್ಷಣದೊಂದಿಗೆ ವೃತ್ತಿಪರ ಹಾಗೂ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ಹೆಚ್ಚಿನ ಆದ್ಯತೆಯನ್ನು ಸಂಸ್ಥೆಯಲ್ಲಿ ನೀಡಲಾಗುತ್ತದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನ ಅವಶ್ಯಕತೆಗಳಿಗೆ ಅನುಗುಣವಾಗಿ ಪ್ಲೇಸ್ಮೆಂಟ್ ಸೆಲ್ ನಿರಂತರವಾಗಿ ವೃತ್ತಿ ಮಾರ್ಗದರ್ಶನ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.
ಮಂಗಳೂರಿನ ಟೈಮ್ ಕೋಚಿಂಗ್ ಸೆಂಟರ್ನ ಮಾರ್ಕೆಟಿಂಗ್ ಮ್ಯಾನೇಜರ್ ಆಶಿತ್ ಪೂಜಾರಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಪದವಿ ನಂತರ ಮುಂದೇನು ಮತ್ತು ಸರಕಾರಿ ಮತ್ತು ಖಾಸಗಿ ವಲಯದ ಉದ್ಯೋಗಾವಕಾಶಗಳ ಸಮಗ್ರ ಮಾಹಿತಿ ನೀಡಿದರು.ಅಂತಿಮ ಪದವಿ ವಿಭಾಗದ ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎ., ಬಿ.ಎಸ್.ಡಬ್ಲ್ಯೂ ಹಾಗೂ ಬಿ.ಎಸ್ಸಿ. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಪದವಿ ವಿಭಾಗದ ಪ್ಲೇಸ್ಮೆಂಟ್ ಆಫೀಸರ್ ದಿನೇಶ್ ಎಂ. ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಸಂಘಟಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಮೇವಿ ಮಿರಾಂದ, ಪದವಿ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಶಾಂತ ಎನ್., ಸಹ ಪ್ರಾಧ್ಯಾಪಕ ಉಮೇಶ್ ಪೈ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ರುತಿಕಾ ಸ್ವಾಗತಿಸಿದರು. ವಿನಿಶಾ ವಂದಿಸಿದರು. ಶರಣ್ಯ ಕಾರ್ಯಕ್ರಮ ನಿರೂಪಿಸಿದರು.