ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
೨೦೨೪-೨೫ನೇ ಸಾಲಿನ ಎಸ್.ಎಸ್.ಎಲ್.ಸಿ-೨ರ ಪರೀಕ್ಷೆ ಹಿನ್ನಲೆಯ ಜಿಪಂ ಸಿಇಒ ರಿಷಿ ಆನಂದ ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರದ ಜಿಲ್ಲಾ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರಗಳು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿದರು. ಪರೀಕ್ಷಾ ಅವಧಿಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳುಂಟಾಗದಂತೆ ಹಾಗೂ ಸಿಸಿಟಿವಿ ಸ್ಥಗಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಸಿಸಿಟಿವಿಗಳು ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಮಾಡಬೇಕು. ಪರೀಕ್ಷೆಗಳನ್ನು ಯಾವುದೇ ಗೊಂದಲಕ್ಕೀಡಾಗದಂತೆ ಸುಸೂತ್ರವಾಗಿ ನಡೆಸಬೇಕು. ಪರೀಕ್ಷೆಗಳಲ್ಲಿ ಯಾವುದೇ ನಕಲಿಗೆ ಅವಕಾಶ ಒದಗಿಸದೇ ಪಾರದರ್ಶಕ ಪರೀಕ್ಷೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸುವುದು. ವಿದ್ಯಾರ್ಥಿಗಳು ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಎಂ.ಎ.ಗಳೆದಗುಡ್ಡ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕಿ ರೇಣುಕಾ ಕಲಬುರ್ಗಿ, ಜಿಲ್ಲಾ ನೋಡಲ್ ಅಧಿಕಾರಿ ಎಂ.ಎಸ್.ಬ್ಯಾಹಟ್ಟಿ, ಎಪಿಸಿ ಆರ್.ಬಿ.ಪಾಟೀಲ, ಉಪನ್ಯಾಸಕ ನಾರಾಯಣ ಬಾಬಾನಗರ ಇತರರು ಇದ್ದರು.