ಕನ್ನಡಪ್ರಭ ವಾರ್ತೆ ಮೊಳಕಾಲ್ಮೂರು

ರಾಜ್ಯದಲ್ಲಿ ಕುರ್ಚಿ ಕಿತ್ತಾಟದಿಂದ ಆಡಳಿತಯಂತ್ರ ಸಂಪೂರ್ಣವಾಗಿ ಕುಸಿದು ಅಭಿವೃದ್ಧಿ ಕಾಣದಾಗಿದೆ. ಸಿಎಂ ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆಯಿಂದಾಗಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸೇವೆ ಸ್ಥಗಿತಗೊಂಡು ಸಕಾಲಕ್ಕೆ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗದಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಪಟ್ಟಣದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಜಿಲ್ಲಾ ಆಸ್ಪತ್ರೆಗಳಿಗೆ ಸೂಕ್ತ ಅನುದಾನ ನೀಡದ ಪರಿಣಾಮವಾಗಿ ಸ್ಕ್ಯಾನಿಂಗ್ ಸೇವೆ ಸ್ಥಗಿತವಾಗಿ ಸಾವಿರಾರು ಬಡ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕುರ್ಚಿ ಕಿತ್ತಾಟದಿಂದಾಗಿ ರಾಜ್ಯದಲ್ಲಿ ಆಡಳಿತಯಂತ್ರ ಸಂಪೂರ್ಣವಾಗಿ ಕುಸಿತವಾಗಿದೆ. ಆರೋಗ್ಯ ಸೇವೆಗಳಲ್ಲಿ ವ್ಯತ್ಯವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ, ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ಎಲ್ಲಾ ಶಾಸಕರು ಪ್ರವಾಸದಲ್ಲಿ ಇದ್ದಾರೆ ಇವರಿಗೆ ಅಭಿವೃದ್ಧಿ ಬಗ್ಗೆ ಮಾತ್ರ ಬೇಕಿಲ್ಲ ಎಂದು ಕಿಡಿಕಾರಿದರು.

ಆರೋಗ್ಯ ಮಂತ್ರಿಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದಾರೆ. ಪ್ರಧಾನಮಂತ್ರಿಗೆ ಹೆಸರು ಬರುತ್ತದೆ ಎಂಬ ವಿಚಾರದಲ್ಲಿ ಜನೌಷಧಿ ಕೇಂದ್ರಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಉಳ್ಳವರಿಗೆ ಬಡವರ ಬಗ್ಗೆ ಕಾಳಜಿ ಇರುವುದಿಲ್ಲ ಎನ್ನುವುದನ್ನು ಆರೋಗ್ಯ ಸಚಿವರು ಸಾಬೀತುಪಡಿಸಿದ್ದಾರೆ ಎಂದು ಮಾತನಾಡಿರುವ ಅವರು, ಕ್ಷೇತ್ರದಲ್ಲಿ ಕಳೆದ ಬಿಜೆಪಿ ಸರ್ಕಾರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳೇ ಹೊರತು ಈಗಿನ ಶಾಸಕರು ಹೊಸ ಯೋಜನೆಗಳು ಕ್ಷೇತ್ರಕ್ಕೆ ತಂದಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ನೆನೆಗುದಿಗೆ ಬಿದ್ದಿದ್ದರೂ ಅದರ ಬಗ್ಗೆ ಗಮನ ಹರಿಸುತ್ತಿಲ್ಲ. ಯೋಜನೆಗೆ ಅನುದಾನ ನೀಡುವಲ್ಲಿ ರಾಜ್ಯ ಸರ್ಕಾರದ ಬಳಿ ಹಣವಿಲ್ಲದಾಗಿದೆ. ಗ್ಯಾರಂಟಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿ ಹಂಚಿಕೆ ಬಂದಿದೆ. ಬರುವ ದಿನಗಳಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಭದ್ರಾ ಮೇಲ್ದಂಡೆ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಬದ್ಧವಾಗಿರಲಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಡಾ.ಪಿ.ಎಂ.ಮಂಜುನಾಥ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ್ ಮಾಜಿ ಉಪಾಧ್ಯಕ್ಷ ಎಂ.ಎನ್.ಮಂಜಣ್ಣ, ಕಿರಣ್ ಗಾಯಕ್ ವಾಡ್, ರವಿ, ಬಿಜೆಪಿ ಮುಖಂಡರಾದ ಪಾಪೇಶ್ ನಾಯಕ್, ತುಮಕೂರ್ಲಹಳ್ಳಿ ಮಂಜುನಾಥ್, ಭಕ್ತ ಪ್ರಹ್ಲಾದ, ಪ್ರಭು, ಸಿದ್ದಾರ್ಥ್, ಹರೀಶ್ ಕಡೆ ತೋಟ, ಮಲ್ಲಿ, ಇದ್ದರು.