ಸಾರಾಂಶ
ಗದಗ: ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ವಿಳಂಬವಾಗಬಾರದು. ಅರ್ಹ ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರಕುವಂತಾಗಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.
ನಗರದ ಉಪವಿಭಾಗಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿರುವ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಶೇ.100ರಷ್ಟು ಸಾಧಿಸಲು ಸಂಬಂಧಿತ ಅಧಿಕಾರಿಗಳು ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.ಪಂಚ ಗ್ಯಾರಂಟಿ ಯೋಜನೆ ಲಭಿಸುವಲ್ಲಿ ಫಲಾನುಭವಿಗಳಿಗೆ ಯಾವುದೇ ಅಡಚಣೆಗಳು ಉಂಟಾದರೆ ಅಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಪ್ರತಿನಿಧಿಗಳ ಸಹಕಾರ ಈ ನಿಟ್ಟಿನಲ್ಲಿ ಸದಾ ಇರುತ್ತದೆ. ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗುವ ಶಕ್ತಿ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲಿಯೇ ದೊರಕಬೇಕು. ಮಹಿಳೆಯರು ಶಕ್ತಿ ಯೋಜನೆ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಗದಗ ಬೆಟಗೇರಿಯಲ್ಲಿ ಸಾರ್ವಜನಿಕರಿಗೆ ಸಿಟಿ ಬಸ್ನ ಸಂಚಾರಕ್ಕೆ ಅನುಕೂಲವಾಗುವಂತೆ ಅವಶ್ಯಕ ಸ್ಥಳಗಳ ರೂಟ್ ಮ್ಯಾಪ್ ತಯಾರಿಸಿಕೊಂಡು ಹೆಚ್ಚುವರಿಯಾಗಿ ಸಿಟಿ ಬಸ್ಗಳ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಜಿಲ್ಲೆಯ ವಿವಿಧ ಬಸ್ ನಿಲ್ದಾಣಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯ ಸೇರಿದಂತೆ ಸ್ವಚ್ಛತೆಯ ಕುರಿತು ನಿಗಾ ವಹಿಸಬೇಕು. ಯುವ ನಿಧಿ ಯೋಜನೆಯ ದುರುಪಯೋಗವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು. ಸಮಿತಿ ಸದಸ್ಯ ಕೃಷ್ಣಗೌಡ ಎಚ್.ಪಾಟೀಲ ಮಾತನಾಡಿ, ಪಡಿತರ ಅಂಗಡಿಗಳ ಮುಂದೆ ಪಂಚ ಗ್ಯಾರಂಟಿ ಯೋಜನೆಯನ್ನು ಬಿಂಬಿಸುವ ಫಲಕವನ್ನು ಪ್ರದರ್ಶಿಸಬೇಕು. ಅನ್ನಭಾಗ್ಯ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು. ಗೃಹಲಕ್ಷ್ಮೀ ಯೋಜನೆಯಡಿ ಮೇ 2025ರ ವರೆಗೆ ಗದಗ ತಾಲೂಕಿನಲ್ಲಿ 81073 ನೋಂದಣಿಯಾದ ಅರ್ಜಿಗಳ ಪೈಕಿ 80588 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಶೇ 99.4ರಷ್ಟು ಪ್ರಗತಿ ಸಾಧಿಸಲಾಗಿದೆ. ಜಿಲ್ಲೆಯಲ್ಲಿ ವಾಕರಸಾ ಸಂಸ್ಥೆಯಿಂದ ಗದಗ ಘಟಕದಲ್ಲಿ 11-6-2023ರಿಂದ 10-8-2025ರ ವರೆಗೆ 154.09 ಲಕ್ಷ ಪುರುಷ ಪ್ರಯಾಣಿಕರು ಹಾಗೂ 224.93 ಲಕ್ಷ ಮಹಿಳಾ ಪ್ರಯಾಣಿಕರು ಸೇರಿದಂತೆ ಒಟ್ಟಾರೆ 379.02 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಗದಗ ಘಟಕದಡಿ 687251977 (6872.52 ಲಕ್ಷ) ಮಹಿಳಾ ಪ್ರಯಾಣಿಕರ ಆದಾಯವಾಗಿದೆ. ಅನ್ನಭಾಗ್ಯ ಯೋಜನೆಯಡಿ ಗದಗ- ಬೆಟಗೇರಿಯಲ್ಲಿ (ಐಆರ್ಎ) ಜುಲೈ 2025 ರ ಮಾಹೆಯಲ್ಲಿ ರಾಜ್ಯ ಸರಕಾರಿ ಅನ್ನಭಾಗ್ಯ ಹಂಚಿಕೆ ಯೋಜನೆಯಡಿ ಒಟ್ಟು 32686 ಪಡಿತರ ಕಾರ್ಡುಗಳಿದ್ದು (ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳು) 5536,05 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ಜುಲೈ-2025 ಮಾಹೆಯಲ್ಲಿ (ಕೇಂದ್ರ ಸರ್ಕಾರ) ಎನ್ಎಫ್ಎಸ್ಎ ಅಕ್ಕಿ ಹಂಚಿಕೆಯಡಿ ಒಟ್ಟು 32686 ಕಾರ್ಡುಗಳಿದ್ದು (ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳು) 2326.76 ಕ್ವಿಂ ಅಕ್ಕಿ ಹಂಚಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಅಕ್ಕಿ ಹಂಚಿಕೆಯಡಿ ಗದಗ ಗ್ರಾಮೀಣ ಭಾಗದಲ್ಲಿ ಒಟ್ಟು 48373 ಪಡಿತರ ಕಾರ್ಡುಗಳಿದ್ದು (ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳು) 7478.75 ಕ್ವಿಂ ಹಂಚಿಕೆ ಮಾಡಲಾಗಿದೆ.
ಗೃಹಜ್ಯೋತಿ ಯೋಜನೆಯಡಿ 31-7-2025 ರವರೆಗೆ ಗದಗ ಶಹರ ಉಪವಿಭಾಗದಲ್ಲಿ 48199 ಸ್ಥಾವರಗಳು ಅರ್ಹವಾಗಿದ್ದು 47995 ಸ್ಥಾವರಗಳ ನೋಂದಣಿಯಾಗಿದ್ದು ಶೇ 99.58 ಪ್ರಗತಿಯಾಗಿದೆ. 31-7-2025ರ ವರೆಗೆ ಗೃಹ ಜ್ಯೋತಿ ಯೋಜನೆಯಡಿ ಗದಗ ಗ್ರಾಮೀಣ ಉಪವಿಭಾಗದಲ್ಲಿ 53268 ಸ್ಥಾವರಗಳು ಅರ್ಹವಾಗಿದ್ದು 53070 ಸ್ಥಾವರಗಳ ನೋಂದಣಿಯಾಗಿವೆ. ಶೇ 99.63 ಪ್ರಗತಿಯಾಗಿದೆ.ಯುವನಿಧಿ ಯೋಜನೆಯಡಿ ಗದಗ ತಾಲೂಕಿನಲ್ಲಿ 12-8-2025 ರವರೆಗೆ 2184 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 1451 ಅರ್ಹ ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆಯಾಗಿರುತ್ತದೆ ಎಂದು ಸಂಬಂಧಿತ ಅಧಿಕಾರಿಗಳು ಮಾಹಿತಿ ಒದಗಿಸಿದರು.
ಸಭೆಯಲ್ಲಿ ತಾಪಂ ಇಒ ಮಲ್ಲಯ್ಯ.ಕೆ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಶಂಭು ಕಾಳೆ, ಸಾವಿತ್ರಿ ಹೂಗಾರ, ಸಂಗು ಕೆರಕಲಮಟ್ಟಿ, ಎನ್.ಬಿ. ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿಕಾಯ್ಕರ, ದೇವರಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್.ಬಾರಕೇರ, ಭಾಷಾ ಮಲ್ಲಸಮುದ್ರ ಹಾಗೂ ಅಧಿಕಾರಿಗಳು ಇದ್ದರು.