ಅರ್ಧ ಮಳೆಗಾಲ ಕಳೆಯುವಷ್ಟರಲ್ಲಿಯೇ ತಾಲೂಕಿನ ಶಿರಸಿ-ಹುಬ್ಬಳ್ಳಿ (ಕುಮಟಾ-ತಡಸ) ರಾಜ್ಯ ಹೆದ್ದಾರಿ ಸಂಪೂರ್ಣ ಹೊಂಡಗಳಿಂದ ಕೂಡಿದ್ದು, ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಹರಸಾಹಸಪಡುವಂತಾಗಿದೆ.

ವಾಹನ ಸವಾರರ ಪರದಾಟ । ಸ್ವಲ್ಪ ಯಾಮಾರಿದರೂ ಅಪಘಾತ ಕಟ್ಟಿಟ್ಟ ಬುತ್ತಿ

ಸಂತೋಷ ದೈವಜ್ಞ

ಕನ್ನಡಪ್ರಭ ವಾರ್ತೆ ಮುಂಡಗೋಡ

ಅರ್ಧ ಮಳೆಗಾಲ ಕಳೆಯುವಷ್ಟರಲ್ಲಿಯೇ ತಾಲೂಕಿನ ಶಿರಸಿ-ಹುಬ್ಬಳ್ಳಿ (ಕುಮಟಾ-ತಡಸ) ರಾಜ್ಯ ಹೆದ್ದಾರಿ ಸಂಪೂರ್ಣ ಹೊಂಡಗಳಿಂದ ಕೂಡಿದ್ದು, ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಹರಸಾಹಸಪಡುವಂತಾಗಿದೆ.

ಮುಂಡಗೋಡದಿಂದ ಶಿರಸಿ-ಹುಬ್ಬಳ್ಳಿ ರಸ್ತೆ ಎಂಬುವುದು ತಗ್ಗು ಗುಂಡಿಗಳಿಂದ ಕೂಡಿರುವುದರಿಂದ ಈ ಮಾರ್ಗವಾಗಿ ವಾಹನ ಚಲಾಯಿಸುವುದೇ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಸ್ವಲ್ಪ ಯಾಮಾರಿದರೂ ಅಪಘಾತ ಕಟ್ಟಿಟ್ಟ ಬುತ್ತಿ ಎಂಬುವುದನ್ನು ಗಮನದಲ್ಲಿಟ್ಟುಕೊಂಡು ಸಾಗಬೇಕಿದೆ. ಈ ಮರ್ಗವಾಗಿ ಸಂಚರಿಸುವವರ ಸ್ಥಿತಿ ಆ ದೇವರಿಗೆ ಪ್ರೀತಿ.

ತಾಲೂಕಿನ ಪಾಳಾ-ಹಾನಗಲ್(ಪಾಳಾ ಬದಾಮಿ) ರಸ್ತೆ ಸ್ಥಿತಿ ಕೂಡ ಇದಕ್ಕೆ ಬಿನ್ನವಾಗಿಲ್ಲ. ಅಷ್ಟೊಂದು ರಸ್ತೆ ಹದಗೆಟ್ಟು ಹೋಗಿವೆ. ಚಾಲಕರಿಗೆ ಈ ಮಾರ್ಗವಾಗಿ ಸಂಚರಿಸುವುದೇ ಒಂದು ಹಿಂಸೆಯಾಗಿ ಪರಿಣಮಿಸಿದ್ದು, ಅಧಿಕಾರಿ ಹಾಗೂ ಜನಪ್ರತಿನಿಧಿಗಳ ವಿರುದ್ದ ಹಿಡಿಶಾಪ ಹಾಕುತ್ತ ಪ್ರಯಾಣಿಸುತ್ತಿದ್ದಾರೆ.

೨೦೧೧-೧೨ನೇ ಸಾಲಿನಲ್ಲಿ ಡಾಂಬರೀಕರಣವಾದ ಶಿರಸಿ-ಹುಬ್ಬಳ್ಳಿ ರಸ್ತೆ ೧೪ ವರ್ಷ ಕಳೆದರೂ ಮರು ಡಾಂಬರೀಕರಣ ಮಾಡಲಾಗಿಲ್ಲ. ಪ್ರತಿ ವರ್ಷ ಮಳೆಗಾಲ ಮುಗಿದ ತಕ್ಷಣ ದುರಸ್ತಿ ಹಾಗೂ ನಿರ್ವಹಣೆ ಹೆಸರಲ್ಲಿ ತೇಪೆ ಹಚ್ಚುವ ಕೆಲಸ ಮಾಡಿ ಲಕ್ಷಾಂತರ ರೂಪಾಯಿ ಕರ್ಚು ಹಾಕುತ್ತ ಬರಲಾಗಿದೆ. ವಿನಃ ಮರು ಡಾಂಬರೀಕರಣ ಮಾಡುವ ಗೋಜಿಗೆ ಹೋಗಿಲ್ಲ. ಕಳೆದ ವರ್ಷ ಕೇಂದ್ರ ಸರ್ಕಾರದ ಸಿಆರ್‌ಎಫ್‌ ಅನುದಾನದಲ್ಲಿ ಕೆಲವಷ್ಟು ಕಿಮೀನಷ್ಟು ರಸ್ತೆ ಡಾಂಬರಿಕರಣ ಮಾಡಲಾಗಿದ್ದು, ಇನ್ನುಳಿದ ರಸ್ತೆ ವಾಹನ ಸಂಚರಿಸಲು ಯೋಗ್ಯವಿಲ್ಲದಂತಾಗಿದೆ. ನಿತ್ಯ ಸಾವಿರಾರು ವಾಹನ ಸಂಚರಿಸುವ ಈ ರಸ್ತೆ ಗುಂಡಿಗಳಿಂದ ಕೂಡಿದ್ದು ಸಂಪೂರ್ಣ ಹದಗೆಟ್ಟು ಹೋದರೂ ಸಹ ಮರು ಡಾಂಬರೀಕರಣ ಮಾಡದೆ ಕೇವಲ ತೇಪೆ ಹಚ್ಚುವ ಕೆಲಸ ಮಾಡುತ್ತ ಬಂದಿರುವುದರಿಂದ ರಸ್ತೆ ಈ ಸ್ಥಿತಿಗೆ ಕಾರಣವಾಗಿದ್ದು, ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಅರ್ಧ ಮಳೆಗಾಲ ಕೂಡ ಕಳೆದಿಲ್ಲ, ಸಾಧಾರಣ ಮಳೆಗೆ ಹೀಗಾದರೆ ಮುಂದೆ ದೊಡ್ಡ ಪ್ರಮಾಣದಲ್ಲಿ ಮಳೆಯಾದರೆ ರಸ್ತೆ ಪರಿಸ್ಥಿತಿ ಏನಾಗಬಹುದು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣ ಇತ್ತ ಗಮನಹರಿಸಿ ರಸ್ತೆ ದುರಸ್ತಿ ಕಾರ್ಯ ಕೈಗೊಂಡು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯ ಮಳೆ ಇರುವುದರಿಂದ ತಾತ್ಕಾಲಿಕವಾಗಿ ಗುಂಡಿ ಮುಚ್ಚಿ ರಸ್ತೆ ಮೇಲೆ ನಿಲ್ಲುವ ನೀರನ್ನು ಕಾಲುವೆ ಮೂಲಕ ಹೊರ ಹಾಕಲಾಗುತ್ತಿದ್ದು, ಮಳೆಗಾಲ ಮುಗಿದ ಬಳಿಕ ಟೆಂಡರ್ ಕರೆದು ದುರಸ್ತಿ, ನಿರ್ವಹಣೆ ಮಾಡಲಾಗುವುದು ಎನ್ನುತ್ತಾರೆ ಮುಂಡಗೋಡದ ಲೊಕೋಪಯೋಗಿ ಇಲಾಖೆ ಎಇಇ ಮಹಾದೇವಪ್ಪ.ಶಿರಸಿ-ಹುಬ್ಬಳ್ಳಿ ಪಾಳಾ-ಹಾನಗಲ್ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ತಿರುಗಾಡದಷ್ಟು ದುಸ್ಥಿತಿಗೆ ತಲುಪಿದೆ. ಇದರಿಂದ ನಿತ್ಯ ಬಹಳಷ್ಟು ವಾಹನ ಅಪಘಾತ ನೆಡಯುತ್ತಿದ್ದು, ತಕ್ಷಣ ಗುಂಡಿಗಳನ್ನು ಮುಚ್ಚಿ ಅದನ್ನು ತಡೆಯಬೇಕಲ್ಲದೇ, ಮಳಗಾಲ ಮುಗಿದ ಬಳಿಕ ಈ ರಸ್ತೆಗಳನ್ನು ಮರು ಡಾಂಬರೀಕರಣ ಮಾಡಬೇಕು ಎಂದು ಆಗ್ರಹಿಸುತ್ತಾರೆ ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಗೌಳಿ.