ಸಾರಾಂಶ
ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಗೋಕಾಕ
ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು.
ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆ ವೀಕ್ಷಿಸಿದರು.ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು. ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.
ಇದಾದ ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಳೆಯಿಂದ ಉಂಟಾಗಿರುವ ಹಾನಿ ವಿವರಿಸಿದರು.
ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನಿರ್ಮಿಸುವ ಅಗತ್ಯವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಗೆ ವಿವರಿಸಿದರು.ಕಾಳಜಿ ಕೇಂದ್ರಕ್ಕೆ ಭೇಟಿ:
ಮುಳುಗಡೆಯಿಂದ ಸಂತ್ರಸ್ತರಗೊಂಡಿರುವ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ ನಗರದ ಸರ್ಕಾರಿ ಮುನ್ಸಿಪಲ್ ಕಾಲೇಜಿನಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿ, ಸಂತ್ರಸ್ತರ ಜತೆ ಚರ್ಚಿಸಿದರು.ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಸಂತ್ರಸ್ತ ಕುಟುಂಬವರು ಸಮಾಧಾನ ವ್ಯಕ್ತಪಡಿಸಿದರು.
ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.