ಸಾರಾಂಶ
ವಲಸೆ ಬರುವ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳೊಂದಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಮಾಡಲು ಒತ್ತಾಯಿಸಿ ಸಿಐಟಿಯು ನಿಯೋಗ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ಹೊರ ಜಿಲ್ಲೆಗಳಿಂದ ಉದ್ಯೋಗಕ್ಕಾಗಿ ವಲಸೆ ಬರುವ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳೊಂದಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಮಾಡಲು ಒತ್ತಾಯಿಸಿ ಸಿಐಟಿಯು ನಿಯೋಗ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಹಲವಾರು ವರ್ಷಗಳಿಂದ ಆಶ್ರಯ ಪಡೆದಿದ್ದ ವಲಸೆ ಕಾರ್ಮಿಕರನ್ನು ಇತ್ತೀಚೆಗೆ ಸ್ಥಳೀಯ ಆಡಳಿತ ತೆರವುಗೊಳಿಸಿ ಪರ್ಯಾಯ ವ್ಯವಸ್ಥೆ ಮಾಡದೇ ಅವರನ್ನು ಅತಂತ್ರಗೊಳಿಸಿದೆ.
ಈ ವಲಸೆ ಕಾರ್ಮಿಕರಿಗೆ ಖಾಯಂ ಉದ್ಯೋಗದಾತರಿಲ್ಲ ದಿನಕ್ಕೊಂದು ಮಾಲಕರು. ಇವರನ್ನು ಕೆಲಸಕ್ಕೆ ನಿಯೋಜಿಸಿಕೊಂಡು ವೇತನ ನೀಡಿ ಕಳುಹಿಸುವ ದಿನಗೂಲಿ ಕಾರ್ಮಿಕರು. ಜಿಲ್ಲಾಡಳಿತ ಸರ್ಕಾರಕ್ಕೆ ಇವರಿಗೆ ಆಶ್ರಯ ಕಲ್ಪಿಸಲು ಪ್ರಸ್ತಾವನೆ ಕಳುಹಿಸಬೇಕು ಎಂದು ಮನವಿ ಮಾಡಲಾಯಿತು.ಈ ವೇಳೆ ಉಪಸ್ಥತರಿದ್ದ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಜಿಲ್ಲಾಧಿಕಾರಿ ಕಾರ್ಮಿಕ ಆಯುಕ್ತರಿಗೆ ಪ್ರಸ್ತಾವನೆ ಕಳುಹಿಸಿ ವಲಸೆ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಈಗಾಗಲೇ ಅಜ್ಜಂಪುರದಲ್ಲಿ ವಲಸೆ ಕಾರ್ಮಿಕರಿಗೆ ಭೂಮಿ ಮೀಸಲಿರಿಸಿದರೂ ಕಾಮಗಾರಿ ನಡೆದಿಲ್ಲ ಎಂದರು. ಈ ಬಗ್ಗೆ, ಜಿಲ್ಲಾ ಕೇಂದ್ರದ ಒಂದೇ ಕಡೆಯಲ್ಲಿ ವಸತಿ ನೀಡಿದರೆ ಪ್ರಯೋಜನವಿಲ್ಲ. ಬದಲಾಗಿ ಜಿಲ್ಲೆಯಲ್ಲಿ ತಾಲೂಕುವಾರು ವಸತಿಗಳನ್ನು ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಲಾಯಿತು.ವಲಸೆ ಕಾರ್ಮಿಕರನ್ನು ಅಸ್ಪೃಶ್ಯರಂತೆ ಕಾಣುವುದು ನಿಲ್ಲಿಸಬೇಕು. ಅತಿಥಿ ಕಾರ್ಮಿಕರಂತೆ ಅವರನ್ನು ಗೌರವಿಸಬೇಕು. ಎಲ್ಲಾ ಕಾರ್ಮಿಕರಲ್ಲಿ ಕೆಲವರು ಕೆಟ್ಟವರು ಇರುತ್ತಾರೆ ಅಂತವರಿಗೆ ಕಾನೂನು ಮೂಲಕ ಅರಿವು ಮೂಡಿಸಬೇಕು ಎಂದು ಸಿಐಟಿಯು ಆಗ್ರಹಿಸಿದೆ.
ನಿಯೋಗದಲ್ಲಿ ಕರ್ನಾಟಕ ರಾಜ್ಯ ವಲಸೆ ಕಾರ್ಮಿಕರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ ಮಹಾಂತೇಶ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬೈಂದೂರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ಇದ್ದರು.