ಸಾರಾಂಶ
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜೂನ್ 28ರದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ತಿಳಿಸಿದ್ದಾರೆ.ನಗರದ ಪ್ರವಾಸಿ ಮಂದಿರದಲ್ಲಿ ನಡೆದ ರೈತ ಸಂಘದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕಳೆದ ವಿಧಾನಸಭೆ ಮತ್ತು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು, ಈಗ ರೈತರ ಸಮಸ್ಯೆಗಳ ಬಗ್ಗೆ ಚಕಾರವೆತ್ತದೆ ಮೌನವಹಿಸುವ ಮೂಲಕ ರೈತ ಸಮುದಾಯವನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ಬೆಳೆವಿಮೆ, ಬೆಳೆನಷ್ಟ ಪರಿಹಾರವೂ ಸೇರಿದಂತೆ ಇತ್ತೀಚೆಗೆ ಕೃಷಿಗೆ ಆಧಾರವಾಗಿರುವ ಎಲ್ಲಾ ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ದರ ಏರಿಕೆ ಮಾಡಿದ್ದಾರೆ. ರೈತರಿಗೆ ನೀಡಬೇಕಾದ ಬೆಳೆನಷ್ಟ ಹಾಗೂ ಬೆಳೆವಿಮೆ ಬಗ್ಗೆ ಹಲವಾರು ಬಾರಿ ಮನವಿ ಮಾಡಿದರು ಆ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಕೇವಲ ರೈತರ ಬಗ್ಗೆ ಮೊಸಳೆಕಣ್ಣಿರು ಸುರಿಸುವ ಸರ್ಕಾರ ಬೇಕಿಲ್ಲ. ಆದ್ದರಿಂದ ರೈತ ಸಂಘದಿಂದ ಪ್ರಸ್ತುತ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು.ತಾಲೂಕು ಅಧ್ಯಕ್ಷ ಶ್ರೀಕಂಠಮೂರ್ತಿ ಮಾತನಾಡಿ, ಜೂನ್. 28 ರಂದು ಬೆಳಗ್ಗೆ 10 ಗಂಟೆಗೆ ಬಳ್ಳಾರಿ ರಸ್ತೆಯ ಶ್ರೀಚಳ್ಳಕೆರೆಯಮ್ಮ ದೇವಸ್ಥಾನದಿಂದ ಮೆರವಣಿಗೆ ಹೊರಟು ಬಳ್ಳಾರಿ ರಸ್ತೆ, ನೆಹರೂ ವೃತ್ತ, ಚಿತ್ರದುರ್ಗ ರಸ್ತೆ, ಅಂಬೇಡ್ಕರ್ ವೃತ್ತದ ಮೂಲಕ ತಾಲೂಕು ಕಚೇರಿಗೆ ಮೆರವಣಿಗೆ ಆಗಮಿಸಲಿದೆ, ಅಲ್ಲಿ ರೈತರ ದುಸ್ಥಿತಿಯ ಬಗ್ಗೆ ರೈತ ಸಂಘ ಹಿರಿಯ ಮುಖಂಡರು ಮಾತನಾಡಿದ ನಂತರ ತಹಶೀಲ್ದಾರ್ಗೆ ಮನವಿ ನೀಡಲಾಗುವುದು ಎಂದರು.
ಸಭೆಯಲ್ಲಿ ತಿಪ್ಪೇಸ್ವಾಮಿ, ಹನುಮಂತಪ್ಪ, ಜಯಮ್ಮ, ಚಿಕ್ಕಮ್ಮ, ಓಬಣ್ಣ, ಪಾಲಯ್ಯ, ರಾಜಣ್ಣ, ಜಯಣ್ಣ, ಚಂದ್ರಣ್ಣ, ರಾಜಪ್ಪ ಮುಂತಾದವರು ಉಪಸ್ಥಿತರಿದ್ದರು.