ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಕಾಂಗ್ರೆಸ್ ನಾಯಕರೇ ಸಜ್ಜಾಗಿದ್ದಾರೆ.
ಐದು ಗ್ಯಾರಂಟಿ ಕಸದ ಬುಟ್ಟಿಗೆ ಸೇರುವುದು ಸತ್ಯಕನ್ನಡಪ್ರಭ ವಾರ್ತೆ ಗಂಗಾವತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಕಾಂಗ್ರೆಸ್ ನಾಯಕರೇ ಸಜ್ಜಾಗಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.ನಗರದ ತಾಲೂಕು ಕ್ರೀಡಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯನ್ನು ಅಧಿಕಾರದಿಂದ ಇಳಿಸಲು ಯಾವ ಬೇರೆ ಪಕ್ಷದವರು ಬೇಕಾಗಿಲ್ಲ. ಕಾಂಗ್ರೆಸ್ ಪಕ್ಷವೇ ಸಾಕು ಎಂದರು.
ಮುಡಾ ಹಗರಣವನ್ನು ಹೊರಗೆ ಹಾಕಿದವರು ಯಾರು ಎಂಬುದು ಸಿದ್ದರಾಮಯ್ಯ ಅವರಿಗೆ ಗೊತ್ತಾಗಿದೆ. ಇದೇ ಹಗರಣದಿಂದ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದರು.ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮತ್ತು ಚೆನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಬಾರಿ ಮತಗಳ ಅಂತರದಿಂದ ಜಯ ಸಾಧಿಸುವುದು ಖಚಿತ ಎಂದರು. ಸಂಡೂರು ಕ್ಷೇತ್ರದಲ್ಲಿ ಗೆದ್ದು ಪ್ರಧಾನಿ ಮೋದಿ ಅವರಿಗೆ ಕಾಣಿಕೆ ನೀಡುತ್ತೇವೆ ಎಂದರು.
ಉಪ ಚುನಾವಣೆ ನಂತರ ಕಾಂಗ್ರೆಸ್ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಕಸದ ಬುಟ್ಟಿಗೆ ಸೇರುವುದು ಸತ್ಯ. ಈಗಾಗಲೇ ಕಾಂಗ್ರೆಸ್ ನಾಯಕರಿಂದಲೇ ಅಪಸ್ವರ ಕೇಳಿ ಬರುತ್ತಿದೆ ಎಂದರು.ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಉಲ್ಬಣಗೊಂಡಿದ್ದು, ಸರ್ಕಾರ ಕಾನೂನನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಸಚಿವ ಜಮೀರ್ ಅಹ್ಮದ್ ಕೋಮು ಗಲಭೆ ಸೃಷ್ಟಿ ಮಾಡುತ್ತಿದ್ದಾರೆ. ವಕ್ಫ್ ಆಸ್ತಿಯಲ್ಲಿ ಕೇವಲ ಹಿಂದೂಗಳು ಇಲ್ಲ, ಮುಸ್ಲಿಮರೂ ಇದ್ದಾರೆ. ಇದೇ ವಿಷಯದಲ್ಲಿ ಕಾಂಗ್ರೆಸ್ ಬೂದಿಯಾಗುವ ಪರಿಸ್ಥಿತಿಗೆ ಹೋಗುತ್ತಿದೆ ಎಂದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ಇತರರಿದ್ದರು.