ಹಾವೇರಿ ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಹಾವೇರಿ: ಸಂವಿಧಾನವು ನಮ್ಮ ಜೀವನಕ್ಕೆ ದಾರಿದೀಪವಾಗಿದೆ ಹಾಗೂ ನಮಗೆ ವರದಾನವಾಗಿದೆ. ಸಮಾಜದ ಎಲ್ಲ ರೀತಿಯ ಹಾಗೂ ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಾಣಬೇಕು. ಪ್ರತಿಯೊಬ್ಬರೂ ಸಂವಿಧಾನದಡಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿರಾದಾರ ದೇವೀಂದ್ರಪ್ಪ ಎನ್. ಹೇಳಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಅಭಿಯೋಜನಾ ಇಲಾಖೆ ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದಡಿಯಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸಿದಾಗ ಸಮಾಜ ಉನ್ನತ ಮಟ್ಟಕ್ಕೆ ಹೋಗಬಹುದು. ಕಾನೂನಿನ ನೆರವಿನ ಅವಶ್ಯಕತೆ ಇದ್ದವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಟೋಲ್ ಫೀ ಸಂಖ್ಯೆ 15100 ಸಂಪರ್ಕಿಸಿ, ಕಾನೂನು ನೆರವು ಪಡೆದುಕೊಳ್ಳಬಹುದು ಎಂದು ಹೇಳಿದರು.

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ಎಂ. ರಮೇಶ ಅವರು, ಸಂವಿಧಾನದ ಮಹತ್ವ ಹಾಗೂ ಪ್ರಾಮುಖ್ಯತೆ, ಸಂವಿಧಾನದಲ್ಲಿ ಈ ವರೆಗೆ ಆದ ತಿದ್ದುಪಡಿಗಳು, ಸಂವಿಧಾನ ನಮ್ಮ ಸಮಾಜಕ್ಕೆ ಎಷ್ಟು ಮುಖ್ಯವಾಗಿದೆ ಎಂದು ವಿವರವಾಗಿ ತಿಳಿಸಿದರು.

ಕಾನೂನು ನೆರವು ಸಹಾಯಕ ಅಭಿರಕ್ಷಣಾ ವಕೀಲ ಎನ್.ಎನ್. ಡಿಳ್ಳೆಪ್ಪನವರ ಅವರು ಸಂವಿಧಾನ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಎಂ.ಜಿ. ಶಿವಳ್ಳಿ, ಅಶ್ವಿನಿ ವಿಜಯ ಶಿರಿಯಣ್ಣನವರ, ಮಹ್ಮದ್ ಅನ್ವರ ಹುಸೇನ ಮೊಗಲಾನಿ, ಶೋಭಾ ಬಿ.ಜಿ., ಆಕರ್ಷಕ ಎಂ., ಬಿಪಿಎನ್ ಎಚ್.ಎಂ., ಮುಖ್ಯ ಕಾನೂನು ನೆರವು ಅಭಿರಕ್ಷಣಾ ವಕೀಲ ವಿ.ಜಿ. ದೊಡ್ಡಗೌಡರ, ಹಿರಿಯ ಶಿರಸ್ತೇದಾರ ಎಸ್.ಎಂ. ಬೇನಾಳ ಇತರರಿದ್ದರು.