ಕನ್ನಡಪ್ರಭ ವಾರ್ತೆ ಸಕಲೇಶಪುರ

ಡಾ. ಬಿ. ಆರ್‌. ಅಂಬೇಡ್ಕರ್‌ ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಸಂವಿಧಾನ ರಚಿಸಿಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ, ಸಮಾನ ಅವಕಾಶ ಹಾಗೂ ಘನತೆಯ ಬದುಕು ದೊರೆಯುವಂತೆ ಸಂವಿಧಾನ ರೂಪಿಸಿದ ಮಹಾನ್ ವ್ಯಕ್ತಿ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕಿನ ಯಸಳೂರು ಹೋಬಳಿ ಕೇಂದ್ರದಲ್ಲಿ ಭಾನುವಾರ ಆಯೋಜಿಸಿದ್ದ ಡಾ. ಬಿ. ಆರ್‌. ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ಇಂದು ಸಾಮಾನ್ಯ ವ್ಯಕ್ತಿಯೊಬ್ಬರು ಜನಪ್ರತಿನಿಧಿಯಾಗಲು ಸಾಧ್ಯವಾಗಿರುವುದು ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಕಲ್ಪಿಸಿದ ಸಮಾನ ಅವಕಾಶ ಮತ್ತು ಮೀಸಲಾತಿ ವ್ಯವಸ್ಥೆಯಿಂದಾಗಿದೆ. ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಹಾಗೂ ಆಸ್ತಿಯಲ್ಲಿ ಸಮಾನ ಹಕ್ಕು ದೊರೆಯುವಂತೆ ಮಾಡುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಕಾರ್ಮಿಕರ ಹಕ್ಕುಗಳ ರಕ್ಷಣೆಯಲ್ಲೂ ಅವರು ಮಹತ್ವದ ಸುಧಾರಣೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ಯಸಳೂರಿನಲ್ಲಿ ಎಲ್ಲ ಸಮುದಾಯಗಳ ಸಹಕಾರದೊಂದಿಗೆ ಪ್ರಮುಖ ಸ್ಥಳದಲ್ಲಿ ಅಂಬೇಡ್ಕರ್‌ ಪುತ್ಥಳಿ ನಿರ್ಮಾಣವಾಗುತ್ತಿರುವುದು ನಿಜವಾದ ಪ್ರಜಾಪ್ರಭುತ್ವದ ಸಂಕೇತವಾಗಿದೆ. ಪುತ್ಥಳಿ ಶೀಘ್ರ ಪೂರ್ಣಗೊಂಡು ಯುವಜನತೆಗೆ ಅಂಬೇಡ್ಕರ್‌ ಅವರ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಸಂದೇಶ ತಲುಪುವಂತಾಗಲಿ ಎಂದು ಆಶಿಸಿದರು.

ಮಾಜಿ ಶಾಸಕ ಎಚ್. ಕೆ. ಕುಮಾರಸ್ವಾಮಿ ಮಾತನಾಡಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್‌ ಅವರ ಪ್ರತಿಮೆ ನಿರ್ಮಾಣವು ಕೇವಲ ಸ್ಮಾರಕ ನಿರ್ಮಾಣವಲ್ಲ. ಅವರ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯವಾಗಿದೆ. ಜಾತಿ-ಧರ್ಮದ ಭೇದಭಾವವನ್ನು ತೊರೆದು ಎಲ್ಲರೂ ಸಮಾನರು ಎಂಬ ಅವರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಸಕಲೇಶಪುರ, ಆಲೂರು ಹಾಗೂ ಹಾನಬಾಳಿನ ಬಳಿಕ ಇದೀಗ ಯಸಳೂರಿನಲ್ಲೂ ಅಂಬೇಡ್ಕರ್ ಪ್ರತಿಮೆ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ. ಪ್ರತಿಮೆಯೊಂದಿಗೆ ಅವರ ವಿಚಾರಧಾರೆಯೂ ಹಳ್ಳಿಹಳ್ಳಿಗೂ ತಲುಪಬೇಕು ಎಂದು ತಿಳಿಸಿದ ಅವರು, ಪುತ್ಥಳಿ ನಿರ್ಮಾಣ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಸಮಿತಿಯ ಅಧ್ಯಕ್ಷ ಎ.ಎಸ್. ಈರಯ್ಯ, ಬಿಎಸ್‌ಪಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ್ ಕೀರ್ತಿ, ವೀರಶೈವ ಸಮಾಜದ ಮುಖಂಡ ಮುರುಗೆಂದ್ರ, ಮುಸ್ಲಿಂ ಸಮಾಜದ ಮುಖಂಡ ಸಿರಾಜ್ ಅಹಮದ್, ಬೌದ್ಧ ಉಪಾಸಕ ಜಯವರ್ಧನ್, ಸಮಿತಿಯ ಉಪಾಧ್ಯಕ್ಷ ಯೋಗೇಶ್, ಕಾರ್ಯದರ್ಶಿ ಮಂಜಯ್ಯ, ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.