ಬ್ಯಾಡಗಿ: ಕೆರೆಗಳ ನಿರ್ಮಾಣ ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ಪೂರ್ವಜರ ಆಲೋಚಿತ ಹಾಗೂ ಶಾಶ್ವತ ಜಲ ಮೂಲಗಳಾಗಿವೆ. ಅವುಗಳಿಲ್ಲದೇ ಮನುಷ್ಯ ಬದುಕಲು ಸಾಧ್ಯವಿಲ್ಲ ಕೆರೆಗಳ ಸಂರಕ್ಷಣೆ ವಿಷಯದಲ್ಲಿ ಸಾರ್ವಜನಿಕರ ನಿರ್ಲಕ್ಷ್ಯ ಮನೋಭಾವನೆ ದುರದೃಷ್ಟಕರ, ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದಲ್ಲಿ ನೀರಿನ ಬವಣೆ ನೀಗಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಎಚ್ಚರಿಸಿದರು.ರು. 1 ಕೋಟಿ ವೆಚ್ಚದಲ್ಲಿ ತಾಲೂಕಿನ ಬುಡಪನಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಪೂರ್ವಜನರ ದೂರದೃಷ್ಟಿ ಚಿಂತನೆಗಳು ಇಂದಿನ ಯಾವುದೇ ತಾಂತ್ರಿಕ ವಿದ್ಯೆಗಿಂತ ಮಿಗಿಲಾಗಿದ್ದು, ಅವರ ವಿಚಾರ ಧಾರೆಗಳು ಶಾಶ್ವತ ಪರಿಹಾರಕ್ಕಾಗಿ ಮೀಸಲಿದ್ದವು ಎಂಬುದಕ್ಕೆ ಕೆರೆಗಳನ್ನು ನಿರ್ಮಿಸುವ ಮೂಲಕ ನೈಸರ್ಗಿಕವಾಗಿ ನೀರು ಸಂಗ್ರಹಕ್ಕೆ ಮುಂದಾಗಿರುವುದೇ ಉತ್ತಮ ಉದಾಹರಣೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಲ್ಲಿ ಮುಂದೊದು ದಿವಸ ನೀರಿಗಾಗಿ ವಾಸವಿದ್ದ ಗ್ರಾಮಗಳನ್ನು ಬಿಟ್ಟು ಬೇರೆಡೆಗೆ ತೆರಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ರೈತರ ಅಕ್ಷಯಪಾತ್ರೆ: ಕೆರೆಗಳು ರೈತಾಪಿ ಜನರಿಗೆ ಅಕ್ಷಯಪಾತ್ರೆಗಳಿದ್ದಂತೆ. ಅವುಗಳನ್ನು ಉಳಿಸುವುದು ಸೇರಿದಂತೆ ಯಥಾಸ್ಥಿತಿಯಲ್ಲಿ ಮುಂದಿನ ಪೀಳಿಗೆ ಬಳಕೆಗೆ ಅನುಕೂಲ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಅತಿಕ್ರಮಣ ನಿಲ್ಲಬೇಕು ಕೆರೆಗಳ ಪುನಶ್ಚೇತನ ನಿರಂತರವಾಗಿ ನಡೆಯಬೇಕು ಕೆರೆಗಳ ಅತೀಕ್ರಮಣಕ್ಕೆ ಸ್ವಯಂಪ್ರೇರಿತ ಕಡಿವಾಣ ಹಾಕಿಕೊಳ್ಳುವಂತೆ ಸಲಹೆ ನೀಡಿದರು.ಅಕ್ಷಮ್ಯ ಅಪರಾಧ: ಕೆರೆಗಳ ನೀರು ಬಳಕೆ ಮತ್ತು ಅವಶ್ಯಕತೆ ಕುರಿತು ನಾವೆಲ್ಲಾ ಬಹಳಷ್ಟು ಮಾತನಾಡುತ್ತೇವೆ ಆದರೆ ಜಲಮೂಲಗಳನ್ನು ಉಳಿಸಿಕೊಳ್ಳುವುದು ಸುಲಭದ ಮಾತಲ್ಲ, ಈ ನಿಟ್ಟಿನಲ್ಲಿ ದೇಶದೆಲ್ಲೆಡೆ ಬಹಳಷ್ಟು ಹೋರಾಟಗಳೇ ನಡೆಯುತ್ತಿವೆ. ಹೀಗಿದ್ದರೂ ನಮ್ಮೂರಿನ ಕೆರೆಗಳನ್ನೇ ಮುಚ್ಚುವಂತಹ ಕೆಲಸಕ್ಕೂ ನಾವುಗಳು ಕೈಹಾಕುತ್ತಿದ್ದು ಇದೊಂದು ಅಕ್ಷಮ್ಯ ಅಪರಾಧವಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ದಾನಪ್ಪ ಚೂರಿ, ನಾಗರಾಜ ಆನವೇರಿ, ಹನುಮಂತಪ್ಪ ಹಾದೀಮನಿ, ಬಸವರಾಜ ಮೆಡ್ಲೇರಿ, ಆಪ್ತ ಸಹಾಯಕ ನದಾಫ್ ಸೇರಿದಂತೆ ಗ್ರಾಮಸ್ಥರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.