ಬಸವಣ್ಣನವರ ಕಾಯಕ ತತ್ವದಂತೆ ಬಂಜಾರ ಸಮಾಜವು ಶ್ರಮ ಜೀವಿಗಳು, ಇವರು ಭವ್ಯವಾದ ಇತಿಹಾಸ ಹೊಂದಿದ್ದು, ಕಲೆ-ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಬಸವಣ್ಣನವರ ಕಾಯಕ ತತ್ವದಂತೆ ಬಂಜಾರ ಸಮಾಜವು ಶ್ರಮ ಜೀವಿಗಳು, ಇವರು ಭವ್ಯವಾದ ಇತಿಹಾಸ ಹೊಂದಿದ್ದು, ಕಲೆ-ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸೇವಾಲಾಲರು ಸಮಾನತೆ, ಸೌಹಾರ್ದತೆ ಮತ್ತು ಶಿಸ್ತಿನ ಜೀವನದ ಮಹತ್ವ ಬೋಧಿಸಿದ ಮಹಾನ ವ್ಯಕ್ತಿ. ಪ್ರತಿ ತಾಂಡದಲ್ಲೂ ದುರ್ಗಾದೇವಿ ಹಾಗೂ ಸೇವಾಲಾಲ ದೇವಸ್ಥಾನಗಳನ್ನು ನಿರ್ಮಿಸಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿಕೊಂಡಿರುವುದು ಬಂಜಾರ ಸಮುದಾಯದ ಆಧ್ಯಾತ್ಮಿಕ ಬಲದ ಸಂಕೇತವಾಗಿದೆ ಎಂದು ಹೇಳಿದರು.

ಸಾಂಪ್ರದಾಯಿಕ ಕಸೂತಿ ಕಲೆಯು ದೇಶ ವಿದೇಶಗಳಲ್ಲಿ ಪ್ರಸಿದ್ಧಿಯಾಗಿದೆ. ಸಮುದಾಯದ ಉಡುಗೆ- ತೊಡಿಗೆ ಹಾಗೂ ಆಚರಣೆಗಳು ಬಹುವಿಶಿಷ್ಟ ಹಾಗೂ ವಿಭಿನ್ನವಾಗಿದ್ದು, ಸಂಸ್ಕೃತಿ ಮತ್ತು ಪರಂಪರೆಗಳನ್ನು ಉಳಿಸಿ- ಬೆಳೆಸಿ ಕಾಪಾಡಿಕೊಂಡು ಬಂದಿದೆ. ಇಂತಹ ಸಾಂಸ್ಕೃತಿಕ ಪರಂಪರೆ- ಕಲೆಯನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯಬೇಕು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿ ಯಾವುದೇ ತಾಂಡಾವು ಹೊರಗುಳಿಯದಂತೆ ನೋಡಿಕೊಂಡು ಹಕ್ಕು ಪತ್ರ ವಿತರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೌಢ್ಯತೆ ತೊಡೆದು ಹಾಕಿದ ಶ್ರೀ ಸಂತ ಸೇವಾಲಾಲ ಅವರ ವಿಚಾರ- ಧಾರೆಗಳನ್ನು ಅರಿಯುವ ಮೂಲಕ ಅವರು ಸಮಾಜ ಸುಧಾರಣೆಗೆ ನೀಡಿದ ಕೊಡುಗೆಯನ್ನು ಎಲ್ಲರೂ ಸ್ಮರಿಸೋಣ ಎಂದರು.

ಕರ್ನಾಟಕ ಕೌಶಲ್ಯಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿದರು. ನಾರಾಯಣ ಪವಾರ ಉಪನ್ಯಾಸ ನೀಡಿದರು. ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಉಪಮಹಾಪೌರ ಸುಮಿತ್ರಾ ಜಾಧವ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಧನಸಿಂಗ ಮಹಾರಾಜ, ಮಹಾದೇವ ರಾಠೋಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ರಾಜಪಾಲ ಚವ್ಹಾಣ, ಕೇಸು ನಾಯಕ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಇದ್ದರು.

ಭವ್ಯ ಮೆರವಣಿಗೆ:

ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಸಂತ ಶ್ರೀ ಸೇವಾಲಾಲ್ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಭವ್ಯ ಮೆರವಣಿಗೆಯು ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್.ಬೇಡ್ಕರ ವೃತ್ತ, ಕನಕದಾಸ ವೃತ್ತದ ಮೂಲಕ ಸಾಗಿ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು.