ಮಹಾತ್ಮಗಾಂಧಿ, ಸುಭಾಷ್‌ ಚಂದ್ರಬೋಸ್, ಭಗತ್‌ಸಿಂಗ್, ಚಂದ್ರಶೇಖರ್ ಆಜಾದ್, ಜವಾಹರ್‌ಲಾಲ್ ನೆಹರು, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಲವು ಮಹಾನೀಯರ ತ್ಯಾಗ ಬಲಿದಾನದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.

ಕನ್ನಡ ಪ್ರಭ ವಾರ್ತೆ ಮಳವಳ್ಳಿ

ಲಕ್ಷಾಂತರ ಮಹನೀಯರ ತ್ಯಾಗ, ಬಲಿದಾನ ಮತ್ತು ಹೋರಾಟದ ಫಲವಾಗಿ ಸಿಕ್ಕಿದ ಸ್ವಾತಂತ್ರ್ಯವನ್ನು ಪ್ರತಿಯೊಬ್ಬರು ಗೌರವಿಸಬೇಕಿದೆ ಎಂದು ತಹಸೀಲ್ದಾರ್ ಎಸ್.ವಿ ಲೊಕೇಶ್ ತಿಳಿಸಿದರು.

ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆಯಿಂದ ನಡೆದ ೮೦ನೇ ಸ್ವಾತಂತ್ಯ್ರ ದಿನಾಚರಣೆಯಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿ, ಮಹಾತ್ಮಗಾಂಧಿ, ಸುಭಾಷ್‌ ಚಂದ್ರಬೋಸ್, ಭಗತ್‌ಸಿಂಗ್, ಚಂದ್ರಶೇಖರ್ ಆಜಾದ್, ಜವಾಹರ್‌ಲಾಲ್ ನೆಹರು, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಲವು ಮಹಾನೀಯರ ತ್ಯಾಗ ಬಲಿದಾನದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದರು.

ಇಂದು ಪ್ರತಿಯೊಬ್ಬರು ನೆಮ್ಮದಿಯಿಂದ ದೇಶದಲ್ಲಿ ಬದುಕುತ್ತಿದ್ದಾರೆ ಎಂದರೆ ಅದಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಫಲವಾಗಿದೆ ಎಂದು ವಿವರಿಸಿದರು.

ತಾಪಂ ಇಒ ಶ್ರೀನಿವಾಸ್ ಮಾತನಾಡಿ, ಸ್ವಾತಂತ್ರ್ಯ ಹೋರಾಟದ ಸಂಬಂಧಿಸಿದ ಪುಸ್ತಕಗಳನ್ನು ಓದಿ ಅರ್ಥೈಸಿಕೊಂಡು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸ್ವಾಭಿಮಾನಿಗಳಾಗಿ ಬದುಕಬೇಕು. ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಪೊಲೀಸರ ಪಥಸಂಚಾಲನ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ ಉಮಾ, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಸಿಡಿಪಿಒ ನಂಜಮಣಿ, ಮನ್‌ಮುಲ್ ನಿರ್ದೇಶಕ ಕೃಷ್ಣೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಲಿಂಗರಾಜು ಸಬ್‌ಇನ್ಸ್ ಪೆಕ್ಟರ್ ಶಿವಲಿಂಗ ದಳವಾಯಿ, ಮುಖಂಡರಾದ ಸಿ.ಪಿ ರಾಜು, ಕೆ.ಜೆ ದೇವರಾಜು, ದೊಡ್ಡಯ್ಯ, ಶಾಂತರಾಜು, ಮಾದೇಶ್ ಸೇರಿದಂತೆ ಇತರರು ಇದ್ದರು.

ಶಾಲಾ ಮಕ್ಕಳಿಗೆ ಸಿಹಿ ವಿತರಣೆ:

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರ ಸೂಚನೆಯಂತೆ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಸುಮಾರು 4 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಗುತ್ತಿದೆ ಎಂದು ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ತಿಳಿಸಿದರು.