ಕನ್ನಡಪ್ರಭ ವಾರ್ತೆ ಸಿಂದಗಿ

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಸಿಂದಗಿ ತಾಲೂಕು ಸ್ವಾತಂತ್ರ್ಯೋತ್ಸವ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ಪಥಸಂಚಲನ ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಅಶೋಕ ಮನಗೂಳಿ, ಸುದೀರ್ಘ 200 ವರ್ಷಗಳ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆಯಿತು. ಭಾರತವನ್ನು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಮತ್ತಷ್ಟು ಪ್ರಗತಿಯತ್ತ ಕೊಂಡೊಯ್ಯಬೇಕು. ಭಾರತವನ್ನು ವಿಶ್ವದ ಮುಂಚೂಣಿ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.ತಹಸೀಲ್ದಾರ್ ಕರೆಪ್ಪ ಬೆಳ್ಳಿ ಪ್ರಾಸ್ತಾವಿಕ ಮಾತನಾಡಿ, ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಯುವಕರ ಸಂಘಟನೆ ಕಟ್ಟುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಿಎಲ್‌ಒಗಳನ್ನು ಹಾಗೂ ಮೇಲ್ವಿಚಾರಕರಿಗೆ, ನಿವೃತ್ತ ಯೋಧರಿಗೆ, ಪತ್ರಕರ್ತರಿಗೆ ಮರಣ ನಂತರ ದೇಹದಾನ ಮಾಡಿದ ದಾನಿಗಳನ್ನು ಗೌರವಿಸಲಾಯಿತು.ಈ ವೇಳೆ ಪೊಲೀಸ್, ಅಗ್ನಿಶಾಮಕ ದಳ, ಅಬಕಾರಿ ಸಿಬ್ಬಂದಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಕೆಜಿಎಂಪಿಎಸ್, ಎಚ್.ಜಿ. ಕನ್ಯಾ ಪ್ರೌಢಶಾಲೆ, ಜ್ಞಾನಭಾರತಿ ವಿದ್ಯಾಮಂದಿರ ಹಾಗೂ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಪಥಸಂಚಲನ ಮತ್ತು ಕವಾಯತಿನಲ್ಲಿ ಪಾಲ್ಗೊಂಡರು. ಶಾಸಕ ಅಶೋಕ ಮನಗೂಳಿ ತೆರೆದ ವಾಹನದಲ್ಲಿ ತೆರಳಿ ಧ್ವಜವಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಿಪಿಐ ಸುನೀಲ ಮೂಲಿಮನಿ, ತಾಪಂ ಇಒ ಅನೀಲ ಹಳ್ಳಿ, ರಾಜ್ಯ ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ, ನಗರಸಭೆ ಪೌರಾಯುಕ್ತ ರವಿ ಶಿರಗುಪ್ಪಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂತೋಷ ಸಾಲಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಬಿಇಒ ಟಿ.ಎಸ್. ಆಲಗೂರ ಸ್ವಾಗತಿಸಿದರು. ಸಿಆರ್‌ಪಿ ಎಂ.ಆರ್.ಡೋಣಿ ನಿರೂಪಿಸಿದರು. ತಾಪಂ ಇಒ ಅನೀಲ ಹಳ್ಳಿ ವಂದಿಸಿದರು.