ಸಾರಾಂಶ
ಕನ್ನಡಪ್ರಭ ವಾರ್ತೆ ಕೊಪ್ಪಳ
ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಒಕ್ಕೂಟ (ಎಐಟಿಯುಸಿ ಸಂಯೋಜಿತ)ಜಿಲ್ಲಾ ಸಮಿತಿಯ ಮುಖಂಡರು ಸಂಸದರಿಗೆ ಮನವಿ ಸಲ್ಲಿಸಿದರು.ಶಾಲೆಗಳಲ್ಲಿ ಅಡುಗೆ ತಯಾರಿಸುವ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು. ದೇಶಾದ್ಯಂತ ಮಧ್ಯಾಹ್ನ ಉಪಾಹಾರ ಯೋಜನೆ ಅಡಿಯಲ್ಲಿ ಶಾಲೆಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ಅಡಿಗೆ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕರ್ನಾಟಕದಲ್ಲಿ 20 ವರ್ಷಗಳಿಗೂ ಹೆಚ್ಚು ಕಾಲದಿಂದ ಶಾಲೆಗಳಲ್ಲಿ ಅಡುಗೆಯವರಾಗಿ 1, 20,000 ಸಾವಿರಕ್ಕೂ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಬಿಸಿಯೂಟ ತಯಾರಕ ಮಹಿಳೆಯರಿಗೆ ಕೇಂದ್ರ ಸರ್ಕಾರ ಬಿಸಿಯೂಟ ತಯಾರಕರ ಯೋಜನೆಗೆ 60+40 ಅನುಪಾತದಲ್ಲಿ ರಾಜ್ಯ ಸರ್ಕಾರಕ್ಕೆ ಅನುದಾನ ನೀಡುತ್ತಿದೆ. ಈ ಅನುದಾನದಲ್ಲಿ ಕಳೆದ 20 ವರ್ಷಗಳಿಂದ ತಲಾ ಒಬ್ಬರಿಗೆ ₹600 ಮಾತ್ರ ಕೇಂದ್ರ ಸರ್ಕಾರ ಗೌರವ ಸಂಭಾವನೆ ನೀಡುತ್ತಿದೆ. ಇದರಿಂದ ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ. ಆದ್ದರಿಂದ ಸಂಸದರಾದ ತಾವು ಪ್ರಧಾನ ಮಂತ್ರಿಯವರ ಮೇಲೆ ಒತ್ತಾಯ ತಂದು ಬಿಸಿಯೂಟ ತಯಾರಕ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಮಾಡಲು ಒತ್ತಾಯ ಮಾಡಬೇಕು. ಕೆಲಸದ ಭದ್ರತೆ ಒದಗಿಸುವುದು ಸೇರಿದಂತೆ ಕಾರ್ಮಿಕ ಕಾಯ್ದೆ ಅಡಿಯಲ್ಲಿ ದೊರಕುವ ಇತರೇ ಸೌವಲತ್ತುಗಳನ್ನು ಒದಗಿಸುವಂತೆ ಸದನದಲ್ಲಿ ಒತ್ತಾಯ ಮಾಡಬೇಕು ಎಂದು ಮನವಿ ಮಾಡಿದರು.ಸಂಸದರ ಆಪ್ತ ಸಹಾಯಕ ಅರುಣ್ ಕುಮಾರ್ ಮನವಿ ಸ್ವೀಕರಿಸಿದರು. ಈ ವೇಳೆ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ತುಕಾರಾಮ್ ಬಿ. ಪಾತ್ರೋಟಿ, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ ಜಿಲ್ಲಾ ಮುಖಂಡ ಏ.ಎಲ್. ತಿಮ್ಮಣ್ಣ, ನೀಲಮ್ಮ ಕಾರಟಗಿ, ಸುನಂದಾ ಸಜ್ಜನ, ಪಾರ್ವತಮ್ಮಕನಕಗಿರಿ, ತಾಹೇರಾ ಬೇಗಂ, ಬಸಮ್ಮ ಪಾರ್ವತಿ, ಬಂದಮ್ಮ ಗಂಗಾವತಿ ಮುಂತಾದವರು ಪಾಲ್ಗೊಂಡಿದ್ದರು.