ಕನ್ನಡಪ್ರಭ ವಾರ್ತೆ ವಿಜಯಪುರ
ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿಯೂ ಓಎಂಆರ್ ಶೀಟ್ ಹಾಗೂ ಪ್ರಶ್ನೆ ಪತ್ರಿಕೆಯಲ್ಲಿ ಆಗಿರುವ ವ್ಯತ್ಯಾಸ, ಓಎಂಆರ್ ಪೂರೈಕೆಯಲ್ಲಿ ವ್ಯತ್ಯಯ ಹೀಗೆ ಅನೇಕ ಗೊಂದಲಗಳು ನಡೆದಿದ್ದು, ದೊಡ್ಡ ಮಟ್ಟದ ಅನುಮಾನಕ್ಕೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಮತಕ್ಷೇತ್ರದಲ್ಲಿಯೇ ಈ ರೀತಿಯ ಗೊಂದಲ ಎದುರಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಅವರು ಚೆಲ್ಲಾಟವಾಡದೇ ಕೂಡಲೇ ಇದರ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಒತ್ತಾಯಿಸಿದರು.ತಿಕೋಟಾದಲ್ಲಿ ವಿದ್ಯಾರ್ಥಿಗಳ ಆಕ್ರೋಶದ ಕಟ್ಟೆಯೊಡೆದಿದೆ. ಮುಗ್ಧ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಹಲವು ವರ್ಷಗಳಿಂದ ತಯಾರಿ ನಡೆಸಿದ್ದಾರೆ. ಈ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನೇ ವರ್ಷಗಳಿಂದ ಮುಂದೂಡುತ್ತಲೇ ಬಂದಿದೆ, ಈಗ ಪೊಲೀಸ್ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಯಲ್ಲಿಯೂ ದೊಡ್ಡ ಮಟ್ಟದ ಗೊಂದಲ ನಡೆದಿದೆ. ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ಶೀಟ್ನಲ್ಲಿ ವ್ಯತ್ಯಾಸ ಹಾಗೂ ಪರೀಕ್ಷೆ ತಡವಾಗಿ ಆರಂಭವಾಗಿದೆ. ಅರ್ಧ ಗಂಟೆ ತಡವಾಗಿ ಪರೀಕ್ಷೆ ಆರಂಭಗೊಂಡರೆ ಏನರ್ಥ?. ವಿದ್ಯಾರ್ಥಿಗಳಿಗೆ ಇದು ಮಾಡಿದ ಘೋರ ಅನ್ಯಾಯವಲ್ಲವೇ? ಎಂದು ಕೇಶವ ಪ್ರಸಾದ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲರ ಮತಕ್ಷೇತ್ರದಲ್ಲಿಯೇ ಈ ರೀತಿ ಗೊಂದಲಮಯ ಘಟನೆ ನಡೆದಿದ್ದು, ಕೂಡಲೇ ಅದರ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದವರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.