ಮಂಗಳೂರು: ಉತ್ತಮ ಸಮಾಜ ರೂಪಿಸುವಲ್ಲಿ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪಾತ್ರ ಮಹತ್ತರವಾದುದು ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.
ಅವರು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ಕುಪ್ಮಾ)ದ 2024-2026ರ ಸಾಲಿನ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.ಶಿಕ್ಷಣ ವ್ಯವಸ್ಥೆಯಲ್ಲಿ ನೈಜವಾದ ಸಮಸ್ಯೆಗಳನ್ನು ಸರ್ಕಾರ ತಕ್ಷಣವೇ ಪರಿಹಾರ ನೀಡಬೇಕು. ಇಂದು ಖಾಸಗಿ ವ್ಯವಸ್ಥೆಯಲ್ಲಿ ಸಮಸ್ಯೆಗಳು ಬಂದಾಗ ಅಧಿಕಾರಿಗಳು ಅದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಾರೆ. ಸಮಾಜವನ್ನು ರೂಪಿಸುವಲ್ಲಿ ಗುಣಮಟ್ಟದ ಮತ್ತು ಪರಿಣಾಮಕಾರಿ ಶಿಕ್ಷಣ ನೀಡುವಲ್ಲಿ ಸರ್ಕಾರ ಮತ್ತು ಶಿಕ್ಷಣ ಇಲಾಖೆಗಳು ಬದ್ಧವಾಗಿರಬೇಕು ಎಂದರು.ರಾಜ್ಯ ಕುಪ್ಮಾ ಸಮಿತಿ ಕಾರ್ಯದರ್ಶಿ ಪ್ರೊ.ನರೇಂದ್ರ ಎಲ್.ನಾಯಕ್, ಕುಪ್ಮಾ 2024-26ರ ಸಾಲಿನ ವಾರ್ಷಿಕ ವರದಿ ಮಂಡನೆ ಮಾಡಿದರು. ಕುಪ್ಮಾ ಸಂಘಟನೆ ೨೦೨೨ ರಲ್ಲಿ ಹುಟ್ಟಿಕೊಂಡ ಸಂಸ್ಥೆ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಸ್ಯೆಗಳು ಉದ್ಭವಾದಾಗ ಸಮಸ್ಯೆಗಳಿಗೆ ಸರ್ಕಾರ ಮತ್ತು ಶಿಕ್ಷಣ ಇಲಾಖೆಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕುಪ್ಮಾವು ನಿರಂತರವಾಗಿ ಸರ್ಕಾರದೊಂದಿಗೆ ಮಾತುಕತೆಗೆ ಬದ್ಧ. ಕುಪ್ಮಾ ಸಂಘಟನೆ ಎಂದಿಗೂ ಸರ್ಕಾರದೊಂದಿಗೆ ಹೋರಾಟವನ್ನು ಬಯಸುವುದಿಲ್ಲ ಹೊರತು ಸಹಕಾರವನ್ನು ನಾವು ಬಯಸುತ್ತೇವೆ ಎಂದರು.
ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಗೌರವ ಅಧ್ಯಕ್ಷ ನಾಡೋಜ ವೂಡೇ ಪಿ.ಕೃಷ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಸರ್ಕಾರ ಮತ್ತು ಖಾಸಗಿ ಕ್ಷೇತ್ರದ ಪಾತ್ರ ಮಹತ್ತರವಾಗಿದೆ ಎಂದರು.ರಾಜ್ಯ ಕುಪ್ಮಾ ಸಮಿತಿ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುಪ್ಮ ಕಾರ್ಯಕಾರಿಣಿ ಸಮಿತಿಯನ್ನು ರಾಜ್ಯಾದ್ಯಂತ ಬಲಪಡಿಸುವ ಬಗ್ಗೆ ಮತ್ತು ಕುಪ್ಮಾಕ್ಕೆ ಸದಸ್ಯರನ್ನು ಸೇರ್ಪಡೆಗೊಳಿಸುವ ಬಗ್ಗೆ ನೂತನ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸಮಿತಿ ನಿರಂತರವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.ಕುಪ್ಮಾ ಗೌರವ ಅಧ್ಯಕ್ಷ ಕೆಸಿ ನಾಯಕ್, ಡಾ.ಎಂ.ಬಿ.ಪುರಾಣಿಕ್, ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷ ಕೀರ್ತನ್ ಕುಮಾರ್, ಕುಪ್ಮಾ ಬೆಂಗಳೂರು ದಕ್ಷಿಣ ಜಿಲ್ಲೆಯ ಡಾ.ಜಯರಾಮ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಕಾರ್ಯದರ್ಶಿ ಡಾ.ದೇವರಾಜ್ ಬಿಕೆ ಮತ್ತು ರಾಜ್ಯ ಕುಪ್ಮಾ ಸಮಿತಿಯ ಸದಸ್ಯರು, ಮತ್ತಿತರರು ಇದ್ದರು.ವಿಧಾನ ಪರಿಷತ್ ಸದಸ್ಯ ಪುಟ್ಟಣ ಅವರನ್ನು ಸನ್ಮಾನಿಸಲಾಯಿತು. ಕುಪ್ಮಾ ಬೆಂಗಳೂರು ದಕ್ಷಿಣ ಜಿಲ್ಲೆಯ ಡಾ.ಜಯರಾಮ್ ಶೆಟ್ಟಿ ಸ್ವಾಗತಿಸಿದರು. ಬೆಂಗಳೂರು ಕಾರ್ಯದರ್ಶಿ ಡಾ.ದೇವರಾಜ್ ಬಿಕೆ ವಂದಿಸಿದರು.ಕುಪ್ಮಾ ಬೆಂಗಳೂರು ಉಪಾಧ್ಯಕ್ಷ ದಿಲೀಪ್ ನಿರೂಪಿಸಿದರು.