ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ : ಯತೀಂದ್ರ ಸಿದ್ದರಾಮಯ್ಯ

| Published : Nov 11 2024, 01:07 AM IST / Updated: Nov 12 2024, 08:53 AM IST

ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ : ಯತೀಂದ್ರ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ ಮಾಡಿದ್ದಾರೆ. ಅಂಥವರಿಂದ ಕಾಂಗ್ರೆಸ್‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ ಮಾಡಿದ್ದಾರೆ. ಅಂಥವರಿಂದ ಕಾಂಗ್ರೆಸ್‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಇಡಿ, ಐಟಿ ಛೂಬಿಟ್ಟು ಕಂಪನಿಗಳಿಂದ ಸುಲಿಗೆ ಮಾಡಿಸಿದ್ದಾರೆ. ಅಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ದೇಶಕ್ಕೆ ಅದಕ್ಕಿಂತ ದೊಡ್ಡ ದುರಂತ ಬೇರಿಲ್ಲ ಎಂದರು.

ಬಿಜೆಪಿಯಿಂದ ತಪ್ಪು ಸಂದೇಶ

ಮುಡಾ ಹಗರಣದಲ್ಲಿ ಅಧಿಕಾರಿಗಳು ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬುವುದರಲ್ಲಿ ಅರ್ಥವಿಲ್ಲ. ಅವರು ಪ್ರಕರಣವನ್ನು ಪಾರದರ್ಶಕವಾಗಿ, ನ್ಯಾಯೋಚಿತವಾಗಿ ತನಿಖೆ ನಡೆಸುತ್ತಿದ್ದಾರೆ. ಆದರೆ, ವಿಪಕ್ಷದವರು ಜನರಲ್ಲಿ ಈ ಬಗ್ಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಬಿಜೆಪಿಯ ವಿರುದ್ಧ ಹರಿಹಾಯ್ದರು.

ಸರ್ಕಾರ ಅಸ್ಥಿರಗೊಳಿಸಲು ಯತ್ನ

ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಬೇಕು, ಅದನ್ನು ಬೀಳಿಸಬೇಕು. ಅದಕ್ಕೆ ತಡೆಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲು ಕೆಳಗಿಳಿಸಿದರೆ ಕಾಂಗ್ರೆಸ್ ಶಕ್ತಿಹೀನವಾಗುತ್ತದೆ ಎಂದು ಅವರ ಮೇಲೆ ಇಡಿ ದಾಳಿ ಮಾಡಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶಾದ್ಯಂತ ಕಾಂಗ್ರೆಸ್ ಆಡಳಿತ ಇರುವ ಮುಖಂಡರ ಮೇಲೆ ಇಡಿ ದಾಳಿ ನಡೆಸಿ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆದಿವೆ ಎಂದರು.

ಚನ್ನಪಟ್ಟಣದಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ಪಕ್ಷದವರು ಖುರಾನ್ ಪುಸ್ತಕ, ಪ್ರಾರ್ಥನೆಗಾಗಿ ಮ್ಯಾಟ್ ಜತೆ ಒಂದು ಸಾವಿರ ರು. ನೀಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಅಂಥವರು ಉಪ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಈ ರೀತಿ ವಿಪಕ್ಷದವರು ಪ್ರತಿ ಚುನಾವಣೆ ಸಂದರ್ಭದಲ್ಲಿ ಆಪಾದಿಸುವುದು ಸಾಮಾನ್ಯ ಎಂದರು.

ಶಿಗ್ಗಾಂವಿ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಎಲ್ಲೆಡೆ ಪಕ್ಷದ ಪರ ಉತ್ತಮ ವಾತಾವರಣವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.