ಸಣ್ಣ ಕೈಗಾರಿಕೆಗಳಿಗೆ ಆರ್ಥಿಕ ನೆರವು ಅಗತ್ಯ: ಜಯಪ್ರಕಾಶ್ ಹೆಗ್ಡೆ

| Published : Jan 25 2024, 02:01 AM IST

ಸಣ್ಣ ಕೈಗಾರಿಕೆಗಳಿಗೆ ಆರ್ಥಿಕ ನೆರವು ಅಗತ್ಯ: ಜಯಪ್ರಕಾಶ್ ಹೆಗ್ಡೆ
Share this Article
  • FB
  • TW
  • Linkdin
  • Email

ಸಾರಾಂಶ

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಮತ್ತು ಹಣಕಾಸಿನ ಅರಿವು ಕುರಿತ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಸಣ್ಣ ಕೈಗಾರಿಕೆಗಳಿಗೆ ಸಂಬಂಧಿಸಿದಂತಹ ವಿಷಯಗಳನ್ನು ಚರ್ಚಿಸಲು ಸಣ್ಣ ಕೈಗಾರಿಕೆಗಳ ಸಚಿವರೊಂದಿಗೆ ಸಭೆ ಏರ್ಪಡಿಸಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಕಾಸಿಯಾ ಜೊತೆ ಕೈಜೋಡಿಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಮತ್ತು ಹಣಕಾಸಿನ ಅರಿವು ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಸಮಸ್ಯೆಗಳನ್ನು ಪರಿಹರಿಸಿ ಹಣಕಾಸಿನ ನೆರವು ಸಿಕ್ಕಾಗ ಮಾತ್ರ ಕೈಗಾರಿಕೆಗಳು ಮುಂದೆ ಬರಲು ಸಾಧ್ಯವಾಗುತ್ತದೆ. ಯುವ ಜನತೆ ಉದ್ಯೋಗದ ಕಡೆ ಮುಖ ಮಾಡದೆ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗುವಂತೆ ಕರೆ ನೀಡಿದರು.ಕಾಸಿಯಾ ಇಂತಹ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಆಯೋಜಿಸುತ್ತಿರುವುದು ಉತ್ತಮ ಕಾರ್ಯ. ಬ್ಯಾಂಕ್‍ಗಳ ಸಹಾಯದೊಂದಿಗೆ ಕೈಗಾರಿಕೆಗಳಿಗೆ ಹಣಕಾಸಿನ ಬೆಂಬಲ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.ಕಾಸಿಯಾ ಅಧ್ಯಕ್ಷ ಸಿ.ಎ. ಶಶಿಧರ ಶೆಟ್ಟಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಂಎಸ್‍ಎಂಇ ವಲಯದ ಉತ್ತೇಜನಕ್ಕಾಗಿ ಘೋಷಿಸಿರುವ ವಿವಿಧ ಯೋಜನೆಗಳು, ಮತ್ತು ರಿಯಾಯಿತಿಗಳ ಕುರಿತು ಉಪಕ್ರಮಗಳನ್ನು ಪ್ರಾರಂಭಿಸುತ್ತಿವೆಯಾದರೂ, ಸರಿಯಾದ ಮಾರ್ಗದರ್ಶನ ಮತ್ತು ಅರಿವಿನ ಕೊರತೆಯಿಂದಾಗಿ ಈ ಸೌಲಭ್ಯಗಳು ಸದ್ಭಳಕೆಯಾಗುತ್ತಿಲ್ಲ. ಫಲಾನುಭವಿಗಳಿಗೆ ಮಾಹಿತಿ ಪೂರ್ಣಪ್ರಮಾಣದಲ್ಲಿ ತಲುಪಿದಾಗ ಮಾತ್ರ ಯೋಜನೆಗಳ / ಉಪಕ್ರಮಗಳ ಯಶಸ್ವಿ ಅನುಷ್ಠಾನ ಸಾಧ್ಯ ಎಂದರು.

ರಾಜ್ಯಾದ್ಯಂತ ಎಂಎಸ್‍ಎಂಇಗಳನ್ನು (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು) ಸಬಲೀಕರಣಗೊಳಿಸುವ ಉದ್ದೇಶದಿಂದ ಈಗಾಗಲೇ 11 ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದ್ದು, ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.ಬೆಂಗಳೂರಿನ ಸಿಡಿ ಪ್ರಾದೇಶಿಕ ಕಚೇರಿ ಉಪ ಪ್ರಧಾನ ವ್ಯವಸ್ಥಾಪಕ ಬಿ. ಉಳಗಿಯನ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್‍ದಾಸ್ ನಾಯಕ್, ಕೆನರಾ ಕೈಗಾರಿಕೆಗಳ ಸಂಘದ ಅಧ್ಯಕ್ಷ ಹಾಗೂ ಗ್ರಾಮೀಣ ಕಾಸಿಯಾದ ಜಂಟಿ ಕಾರ್ಯದರ್ಶಿ ಅರುಣ್ ಪಡಿಯಾರ್ ಎನ್., ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ವಿಶಾಲ್ ಎಲ್. ಸಾಲಿಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಎಸ್. ನಾಗರಾಜು, ಖಜಾಂಚಿ ಹೆಚ್.ಕೆ. ಮಲ್ಲೇಶ ಗೌಡ ಮತ್ತಿತರರು ಇದ್ದರು.