ಕನ್ನಡಪ್ರಭವಾರ್ತೆ, ಹಾಸನ
ಪರಿಶಿಷ್ಟ ಜಾತಿಯೊಳಗಿನ ಒಳಮೀಸಲಾತಿ ಜಾರಿಗೆ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಚ್.ಪಿ. ಶಂಕರ್ ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಮೂರು ದಶಕಗಳಿಂದ ಜನಸಂಖ್ಯೆ ಆಧಾರದ ಮೇಲೆ ಒಳಮೀಸಲಾತಿ ಜಾರಿಗೆ ಒತ್ತಾಯಿಸುತ್ತಾ ಬಂದಿದ್ದರೂ ಸರ್ಕಾರಗಳು ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಲು ಒಳಮೀಸಲಾತಿ ಅತ್ಯವಶ್ಯಕವಾಗಿದ್ದು, ಇದು ಸಾಮಾಜಿಕ ಸಮತೋಲನ ಕಾಪಾಡಲು ಸಹಾಯಕವಾಗಲಿದೆ ಎಂದರು.
ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗವನ್ನು ರಚಿಸಿ ವರದಿ ಸ್ವೀಕರಿಸಿದ್ದು, ಆಯೋಗವು ಮಾದಿಗ (ಎಡಗೈ) ಜಾತಿಗಳಿಗೆ ಶೇ.6, ಹೊಲಯ (ಬಲಗೈ) ಜಾತಿಗಳಿಗೆ ಶೇ.6 ಹಾಗೂ ಇತರೆ ಸ್ಪೃಶ್ಯ ಜಾತಿಗಳಿಗೆ ಶೇ.5 ಒಳಮೀಸಲಾತಿ ನೀಡುವಂತೆ ಶಿಫಾರಸು ಮಾಡಿದೆ ಎಂದು ವಿವರಿಸಿದರು.ರಾಜ್ಯದಲ್ಲಿ ಪ್ರಸ್ತುತ ಖಾಲಿ ಇರುವ 56,432 ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಈ ಒಳಮೀಸಲಾತಿಯನ್ನು ಕಡ್ಡಾಯವಾಗಿ ಅನ್ವಯಿಸಬೇಕು ಎಂದು ಒತ್ತಾಯಿಸಿದರು. ಇದರಿಂದ ಸಮಾಜದ ಹಿಂದುಳಿದ ವರ್ಗಗಳಿಗೆ ಸಮಾನ ಅವಕಾಶಗಳು ಲಭ್ಯವಾಗಲಿದ್ದು, ದೀರ್ಘಕಾಲದ ಅನ್ಯಾಯ ಸರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.ಇದೇ ಬೇಡಿಕೆ ಈಡೇರಿಸಲು ಮಾರ್ಚ್ 27ರಂದು ರಾಜ್ಯ ಸರ್ಕಾರವು ಒಳಮೀಸಲಾತಿ ಕುರಿತಂತೆ ವಿಶೇಷ ಸಚಿವ ಸಂಪುಟ ಸಭೆ ಕರೆದಿರುವ ಹಿನ್ನೆಲೆಯಲ್ಲಿ, ಅದೇ ದಿನ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಮಾದಿಗ ಸಂಘಟನೆಗಳ ಮಹಾಸಭೆ ನಡೆಯಲಿದೆ ಎಂದು ತಿಳಿಸಿದರು.
ಈ ಮಹಾಸಭೆಯನ್ನು ಯಶಸ್ವಿಗೊಳಿಸಲು ಮಾದಿಗ ಸಮಾಜದ ಮುಖಂಡರು, ನೌಕರ ಸಂಘಟನೆಗಳು, ಯುವಕರು ಹಾಗೂ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಚಂದ್ರಶೇಖರ್, ರಾಮಚಂದ್ರ, ಮಂಜುನಾಥ್, ಪುಟ್ಟರಾಜು, ಲೋಕೇಶ್ ಖ್ಯಾತನಹಳ್ಳಿ ಇತರರು ಉಪಸ್ಥಿತರಿದ್ದರು.