ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಪಟ್ಟಣದ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾಗಿ ಆನಂದಮೂರ್ತಿ ಅಧಿಕಾರ ಸ್ವೀಕರಿಸಿದರು. ಮೈಸೂರಿನ ಚೆಸ್ಕಾಂ ಜಾಗೃತ ದಳದಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಸರ್ಕಾರ ಹನೂರು ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ ಹಿನ್ನೆಲೆ ನೂತನ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದರು. ಹನೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಶಿಕುಮಾರ್ ಅವರನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ವರ್ಗಾವಣೆ ಮಾಡಲಾಗಿದೆ.ವೃತ್ತ ನಿರೀಕ್ಷಕ ಆನಂದ್ ಮೂರ್ತಿ ಮಾತನಾಡಿ, ನಾನು ಸಬ್ ಇನ್ಸ್ಪೆಕ್ಟರ್ ಆಗಿ ಹತ್ತು ವರ್ಷಗಳ ಕಾಲ ಉತ್ತರ ಕನ್ನಡ ಜಿಲ್ಲೆ, ಇನ್ಸ್ಪೆಕ್ಟರ್ ಆಗಿ ಒಂದು ವರ್ಷ, ಎರಡು ವರ್ಷ ಚೆಸ್ಕಾಂ ಜಾಗೃತ ದಳದಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಪರಾಧಿಗಳಿಗೆ ಕಡಿವಾಣ ಹಾಕಲು ಆದ್ಯತೆ ನೀಡಲಾಗುವುದು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಹಿನ್ನೆಲೆ ಪಟ್ಟಣ ವ್ಯಾಪ್ತಿಯಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು. ತಮ್ಮ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಕ್ರಮ ಚಟುವಟಿಕೆ ನಡೆಯುವುದು ಕಂಡುಬಂದರೆ ಸಾರ್ವಜನಿಕರು ಮುಕ್ತವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದು. ಅವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದರು.
ನಾಗರಿಕರ ಸಹಕಾರ ಅತ್ಯಗತ್ಯ:ಪಟ್ಟಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು ಬಂದಿರುವ ನನಗೆ ಹನೂರು ಪಟ್ಟಣ ಸೇರಿದಂತೆ ಠಾಣಾ ವ್ಯಾಪ್ತಿಯ ಎಲ್ಲಾ ಗ್ರಾಮದ ಹಿರಿಯ ನಾಗರಿಕರು ಹಾಗೂ ಜನಸಾಮಾನ್ಯರು ಸಂಪೂರ್ಣ ಸಹಕಾರ ನೀಡುವುದರ ಜೊತೆಗೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಾಗರಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.