ಬ್ಯಾಡಗಿ: ಭಾರತದ ಸ್ವಾತಂತ್ರ್ಯ ಹೋರಾಟ ವಿಶ್ವದ ಇತಿಹಾಸದಲ್ಲಿ ಅತ್ಯಂತ ನಿರ್ಣಾಯಕ, ಸುಮಾರು ಎರಡು ಶತಮಾನಗಳ ಕಾಲ ನಡೆದ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆ ಅಂತ್ಯಗೊಳಿಸುವುದರ ಜೊತೆಗೆ ಇಡೀ ವಿಶ್ವಕ್ಕೆ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹುಟ್ಟು ಹಾಕಲಾಯಿತು, ಇವೆಲ್ಲದರ ಕೀರ್ತಿಯು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಪ್ರಾಣ ತ್ಯಾಗ ಮಾಡಿದ ಹೋರಾಟಗಾರರಿಗೆ ಸಲ್ಲಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ವಸಾಹತುಶಾಹಿ ಆಳ್ವಿಕೆಯಲ್ಲಿ ದೇಶದ ನಾಗರಿಕರು ಆರ್ಥಿಕ ಶೋಷಣೆ, ಸಾಮಾಜಿಕ ತಾರತಮ್ಯ ಮತ್ತು ರಾಜಕೀಯ ದಬ್ಬಾಳಿಕೆಗೆ ಒಳಗಾಗಿದ್ದರು. ಆದರೆ ಸುದೀರ್ಘ ಹೋರಾಟದ ಬಳಿಕ ಪಡೆದ ಸ್ವಾತಂತ್ರ್ಯವು ಕೋಟ್ಯಂತರ ಭಾರತೀಯರಿಗೆ ಜಾತಿ, ಧರ್ಮ ಅಥವಾ ಲಿಂಗ ಲೆಕ್ಕಿಸದೆ ಪ್ರತಿಯೊಬ್ಬ ನಾಗರಿಕರಿಗೂ ಸಮಾನತೆ, ಸ್ವಾತಂತ್ರ್ಯ ಸೇರಿದಂತೆ ಮೂಲಭೂತ ಹಕ್ಕುಗಳನ್ನು ಪುನಃಸ್ಥಾಪಿಸಿ ಕೊಟ್ಟಿತು ಎಂದರು.ಸ್ವತಂತ್ರ್ಯ ಭಾರತ ಅಭಿವೃದ್ಧಿಶೀಲ ರಾಷ್ಟ್ರವಾಗಿ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿ ಪರಿವರ್ತನೆಗೊಂಡಿದ್ದು ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಮುಂದುವರೆಯುತ್ತಿರುವುದು ಹೆಮ್ಮೆಯ ಸಂಗತಿ, ಇದಕ್ಕೆ ಕಾರಣೀಭೂತರಾದ ಮಹಾತ್ಮ ಗಾಂಧಿ ಸೇರಿದಂತೆ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ನೇತೃತ್ವದಲ್ಲಿ ನಡೆದಂತಹ ಅಹಿಂಸಾತ್ಮಕ ತಳಹದಿಯಲ್ಲಿ ನಡೆದಂತಹ ಸ್ವಾತಂತ್ರ್ಯ ಹೋರಾಟವು ವಿಶ್ವದ ಇನ್ನಿತರ ರಾಷ್ಟ್ರಗಳ ಸ್ವಾತಂತ್ರ್ಯ ಚಳವಳಿಗಳಿಗೆ ಸ್ಫೂರ್ತಿ ನೀಡಿದೆ ಎಂದರು.
ಮರೆಯದಂತಹ ತ್ಯಾಗ: ಧ್ವಜ ವಂದನೆ ಸ್ವೀಕರಿಸಿದ ತಹಸೀಲ್ದಾರ್ ಚಂದ್ರಶೇಖರ ಮಾತನಾಡಿ, ಸ್ವಾತಂತ್ರ್ಯವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹೋರಾಟಗಾರರು ಮಾಡಿದಂತಹ ತ್ಯಾಗವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ನಮ್ಮ ವೀರರು ಅನುಭವಿಸಿದ ನೋವಿನಿಂದ ಹಾಗೂ ಚೆಲ್ಲಿದ ರಕ್ತದಿಂದ ನಾವುಗಳು ಇಂದು ಮುಕ್ತವಾಗಿ ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ ಎಂಬುದು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬ ನಾಗರಿಕನೊಳಗೆ ದೇಶಭಕ್ತಿಯ ಭಾವನೆಗಳು ಜಾಗೃತಗೊಳ್ಳಬೇಕು ಎಂದರು.ಇದಕ್ಕೂ ಮುನ್ನ ಪೊಲೀಸ್, ಎನ್ಸಿಸಿ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು, ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದವರಿಗೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವೇದಿಕೆಯಲ್ಲಿ ತಾಲೂಕಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿರುವ ಭಾರತ ಜೋಡೋ ಯುವಕ ಸಂಘಗಳ ರಚನೆಯಲ್ಲಿ ತಾಲೂಕಿನ ಯುವಕರು ಪಕ್ಷಾತೀತವಾಗಿ ಸಕ್ರೀಯವಾಗಿ ಪಾಲ್ಗೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.